ಶಾಸಕ ರವಿ ಗಾಣಿಗ ಮೇಲೆ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಕ್ರಮ ಕೈಗೊಳ್ಳಿ: ಪಿ. ರಾಜೀವ್

KannadaprabhaNewsNetwork |  
Published : Aug 26, 2024, 01:34 AM ISTUpdated : Aug 26, 2024, 01:35 AM IST
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಮಾತನಾಡಿದರು. | Kannada Prabha

ಸಾರಾಂಶ

ಸರ್ಕಾರ ಬೀಳಿಸುವ ಯಾವುದೇ ಪ್ರಯತ್ನವನ್ನು ಬಿಜೆಪಿ ಮಾಡುತ್ತಿಲ್ಲ. ರವಿ ಗಣಿಗ ಅವರು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೇರಿದಂತೆ ನಮ್ಮ ಪಕ್ಷದ ನಾಯಕರ ಹೆಸರು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಪಿ. ರಾಜೀವ್ ಹೇಳಿದರು.

ಹುಬ್ಬಳ್ಳಿ: ರಾಜ್ಯ ಸರ್ಕಾರ ಬೀಳಿಸಲು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮತ್ತು ಇತರ ಮುಖಂಡರು ಕಾಂಗ್ರೆಸ್ ಶಾಸಕರಿಗೆ ₹50ರಿಂದ ₹100 ಕೋಟಿ ಆಮಿಷವೊಡುತ್ತಿದ್ದಾರೆ ಎಂದು ಸುಳ್ಳು ಆರೋಪ ಮಾಡಿರುವ ಮಂಡ್ಯ ಶಾಸಕ ರವಿಕುಮಾರ ಗೌಡ (ರವಿ ಗಣಿಗ) ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಭಾನುವಾರ ಇಲ್ಲಿನ ಉಪನಗರ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

ಇದಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಿ. ರಾಜೀವ್, ಶಾಸಕ ರವಿ ಗಣಿಗ ಅವರ ಆರೋಪ ಸತ್ಯಕ್ಕೆ ದೂರವಾಗಿದೆ. ಭ್ರಷ್ಟಾಚಾರ ತಡೆ ಕಾಯ್ದೆ ಪ್ರಕಾರ ಲಂಚ ಕೊಡುವುದು, ಲಂಚ ಪಡೆಯುವುದು, ಲಂಚದ ಮಾಹಿತಿ ಮುಚ್ಚಿಡುವುದು ಅಪರಾಧ. ಯಾರು, ಯಾವಾಗ ಎಲ್ಲಿ ಆಮಿಷವೊಡ್ಡಿದ್ದಾರೆ? ಮುಂಗಡವಾಗಿ ಎಷ್ಟು ಹಣ ಕೊಟ್ಟಿದ್ದಾರೆ? ಎಂಬುದನ್ನು ಅವರು ಬಹಿರಂಗಪಡಿಸಬೇಕು ಎಂದು ಸವಾಲು ಹಾಕಿದರು.

ಸರ್ಕಾರ ಬೀಳಿಸುವ ಯಾವುದೇ ಪ್ರಯತ್ನವನ್ನು ಬಿಜೆಪಿ ಮಾಡುತ್ತಿಲ್ಲ. ರವಿ ಗಣಿಗ ಅವರು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೇರಿದಂತೆ ನಮ್ಮ ಪಕ್ಷದ ನಾಯಕರ ಹೆಸರು ದುರ್ಬಳಕೆ ಮಾಡಿಕೊಂಡಿದ್ದಾರೆ. ಅವರು ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ತಮ್ಮ ನಾಲಿಗೆ ಹರಿಬಿಡಬಾರದು ಎಂದರು.

ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು, ಜನರಲ್ಲಿ ಗೊಂದಲ ಸೃಷ್ಟಿ ಮಾಡುವ ಉದ್ದೇಶದಿಂದ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್ ಶಾಸಕರು ಕೆಲವು ಸಚಿವರ ಕೈಗೊಂಬೆಗಳಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಆಡಳಿತದ ಅರಾಜಕತೆ ಆರಂಭವಾಗಿದೆ. ರಾಜ್ಯದ ಆಡಳಿತ ನಿರ್ವಹಣೆ, ಕಾನೂನು ಸುವ್ಯವಸ್ಥೆ, ಜನಜೀವನ‌ ಸುಲಲಿತ ಮಾಡುವಲ್ಲಿ ಸಂಪೂರ್ಣ ಕುಸಿದು ಹೋಗಿದೆ. ರಾಜ್ಯ ಸರ್ಕಾರ ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳುವ ಉದ್ದೇಶದಿಂದ ವಿಷಯಾಂತರ ಮಾಡುತ್ತಿದೆ ಎಂದು ಸ್ಪಷ್ಟಪಡಿಸಿದರು.

ಉಡುಪಿಯಲ್ಲಿ ಸಾಮೂಹಿಕ‌ ಅತ್ಯಾಚಾರವಾದ ವೇಳೆ ಗೃಹ ಸಚಿವರು ಇದು ಸಾಮೂಹಿಕ‌ ಅತ್ಯಾಚಾರ ಅಲ್ಲ ಎಂದು ಪ್ರತಿಕ್ರಿಸಿದ್ದರು. ನಂಜನಗೂಡಿನಲ್ಲಿ ದಲಿತ ಹೆಣ್ಣು‌ಮಗಳ ಶವ ನೇತಾಡಿದರೂ ಸರ್ಕಾರ ದಲಿತರಿಗೆ ರಕ್ಷಣೆಗೆ ಕ್ರಮ ಕೈಗೊಳ್ಳುತ್ತಿಲ್ಲ. ದಲಿತರ ರಕ್ಷಣೆ ಮಾಡುವಲ್ಲಿ ಗೃಹ ಸಚಿವರು, ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದರು.

ರಾಜ್ಯ ಸರ್ಕಾರ ಹಣದ‌ ಮೂಟೆ ಲೂಟಿ‌ ಮಾಡಿ‌ ಹೈಕಮಾಂಡ್‌ಗೆ ಕಳುಹಿಸುವಲ್ಲಿ ನಿರತವಾಗಿದೆ. ರಾಜ್ಯದ ಅಭಿವೃದ್ಧಿ ಮಾಡಲು ಸಾಧ್ಯವಾಗದೇ ಈ ರೀತಿ‌ ವಿಷಯಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ