ಕನ್ನಡಪ್ರಭ ವಾರ್ತೆ, ಚಾಮರಾಜನಗರ
ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷೆ ರೇಣುಕಾದೇವಿ, ಪರಿಶಿಷ್ಠ ಜಾತಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸಿ.ಕೆ.ರಾಮಸ್ವಾಮಿ ಅವರ ನೇತೃತ್ವದಲ್ಲಿ ಜಮಾಯಿಸಿದ ನೌಕರರು ಜಿಲ್ಲಾಡಳಿತ ಮುಂಭಾಗದಲ್ಲಿರುವ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಶ್ರೀ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ನಂತರ ಹೆಚ್ಚುವರಿ ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷೆ ರೇಣುಕಾದೇವಿ ಮಾತನಾಡಿ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರಾದ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ. ವಕೀಲ ರಾಕೇಶ್ ಕಿಶೋರ್ ವರ್ತನೆಯಿಂದ ನಮಗೆಲ್ಲ ನೋವಾಗಿದೆ. ಆತನ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.ಸಂಘದ ಅಧ್ಯಕ್ಷ ಸಿ.ಕೆ. ರಾಮಸ್ವಾಮಿ ಮಾತನಾಡಿ, ವಕೀಲ ರಾಕೇಶ್ಕಿಶೋರ್ ನ್ಯಾಯಾಧೀಶರ ಮೇಲೆ ಶೂ ಎಸೆಯವ ಪ್ರಯತ್ನ ಮಾಡಿದ್ದಾನೆ. ಇದು ಭಾರತ ಸಂವಿಧಾನ ವ್ಯವಸ್ಥೆ ತಲೆತಗ್ಗಿಸುವ ವಿಚಾರವಾಗಿದೆ. ಇದು ನ್ಯಾಯಾಂಗದ ಮೇಲೆ ಅವಿಶ್ವಾಸ ಮೂಡಿಸುವ ಘಟನೆ ಇದಾಗಿದೆ. ಇಂತಹ ಘಟನೆಯಿಂದ ಸಮಾಜದಲ್ಲಿ ಅಶಾಂತಿ ನಿರ್ಮಾಣ ಆಗುತ್ತದೆ. ಇದನ್ನು ನಮ್ಮ ಸಂಘ ತೀವ್ರವಾಗಿ ಖಂಡಿಸುತ್ತದೆ. ರಾಕೇಶ್ ಕಿಶೋರ್ ಹಾಗೂ ಮಧ್ಯಪ್ರದೇಶದ ವಕೀಲ ಅನಿಲ್ ಮಿಶ್ರಾ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದು ಸರಿಯಲ್ಲ. ಅಂಬೇಡ್ಕರ್ ಅವರಿಗೆ ಅಗೌರವ ತೋರಿಸಿದ್ದಾರೆ ಅವರ ಮೇಲೂ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.