ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬರ ನಿರ್ವಹಣೆಗೆ ಅನುದಾನದ ಕೊರತೆ ಇಲ್ಲ. ಬರಪೀಡಿತ ಪ್ರದೇಶಗಳನ್ನು ಗುರುತಿಸಿ, ಜನ, ಜಾನುವಾರುಗಳಿಗೆ ನೀರು, ಮೇವಿನ ಲಭ್ಯತೆ ನೋಡಿಕೊಂಡು ನಿರ್ವಹಣೆ ಮಾಡಬೇಕು ಎಂದು ತಿಳಿಸಿದರು.
ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಸಾಕಷ್ಟಿದೆ. ನೆರೆಯ ಜಲಾಶಯಗಳಲ್ಲಿ ನೀರಿನ ಲಭ್ಯತೆಯಿದ್ದಲ್ಲಿ ಅಗತ್ಯಕ್ಕೆ ತಕ್ಕಂತೆ ನೀರು ಬಿಡುಗಡೆ ಮಾಡಬೇಕು. ಹಿಪ್ಪರಗಿ ಬ್ಯಾರೇಜ್ ನಿಂದ ಕಕ್ಕಮರಿ, ಜುಂಝರವಾಡ ಗ್ರಾಮಗಳಿಗೆ ಕುಡಿಯುವ ನೀರು ಬಿಡುಗಡೆ ಅತ್ಯಗತ್ಯವಿದ್ದು, ಕೂಡಲೇ 100 ಕ್ಯೂಸೆಕ್ ನೀರು ಬಿಡುಗಡೆಗೆ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆಯಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿರುವುದರಿಂದ ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ನಿರ್ವಹಣೆಗಾಗಿ ನದಿಯ ಬದಿಯಲ್ಲಿರುವ ಎಲ್ಲ ಪಂಪ್ ಸೆಟ್ ಗಳಿಗೆ ವಿದ್ಯುತ್ ಕಡಿತಗೊಳಿಸಬೇಕು. ಕುಡಿಯುವ ನೀರಿನ ಅಗತ್ಯವಿದ್ದ ಪ್ರದೇಶಗಳಿಗೆ ಕೂಡಲೇ ನೀರು ಬಿಡುಗಡೆಗೆ ಕ್ರಮ ವಹಿಸಬೇಕು. ಅಥಣಿ ಕಾಗವಾಡ ಭಾಗದಲ್ಲಿ ಕುಡಿಯುವ ನೀರು ಪೂರೈಕೆಗೆ ಪ್ರದೇಶಗಳನ್ನು ಪರಿಶೀಲನೆ ನಡೆಸಿ ಜಲಾಶಯಗಳಿಂದ ನೀರು ಬಿಡುಗಡಗೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.
ಸರ್ಕಾರದ ಮಾರ್ಗಸೂಚಿ ಪ್ರಕಾರ ಸಿಂಗಲ್ ಫೇಸ್ ಮೂಲಕ ವಿದ್ಯುತ್ ನೀಡಬೇಕು. ಮನೆಗಳಿಗೆ ವಿದ್ಯುತ್ ಕಡಿತವಾಗಬಾರದು. ಕುಡಿಯುವ ನೀರು ಪೂರೈಕೆಗೆ ಪ್ರತಿದಿನ ಒಂದು ಗಂಟೆ ತ್ರಿ-ಫೇಸ್ ವಿದ್ಯುತ್ ಒದಗಿಸಬೇಕು.