ಮಾಹಿತಿ ಹಕ್ಕು ಕಾಯ್ದೆ ಸಮರ್ಪಕ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಿ: ನಲಿನ್ ಅತುಲ್

KannadaprabhaNewsNetwork |  
Published : Oct 26, 2024, 01:02 AM IST
25ಕೆಪಿಎಲ್23 ಮಾಹಿತಿ ಹಕ್ಕು ಕಾಯ್ದೆ ಕುರಿತು ಶುಕ್ರವಾರ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಹಾಗೂ ವಿಷಯ ನಿರ್ವಾಹಕರಿಗೆ ಜಿಲ್ಲಾಡಳಿತ ಭವನ ಆಡಿಟೋರಿಯಂ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರ | Kannada Prabha

ಸಾರಾಂಶ

ಮಾಹಿತಿ ಹಕ್ಕು ಕಾಯ್ದೆ ಕುರಿತು ಶುಕ್ರವಾರ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಹಾಗೂ ವಿಷಯ ನಿರ್ವಾಹಕರಿಗೆ ಕೊಪ್ಪಳ ಜಿಲ್ಲಾಡಳಿತ ಭವನ ಆಡಿಟೋರಿಯಂ ಹಾಲ್‌ನಲ್ಲಿ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿತ್ತು. ಜಿಲ್ಲಾಧಿಕಾರಿ ನಲಿನ್ ಅತುಲ್ ಉದ್ಘಾಟಿಸಿದರು.

ಕೊಪ್ಪಳ: ಇಲಾಖೆಗಳಲ್ಲಿ ಮಾಹಿತಿ ಹಕ್ಕು ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದ್ದಾರೆ.

ಮಾಹಿತಿ ಹಕ್ಕು ಕಾಯ್ದೆ ಕುರಿತು ಶುಕ್ರವಾರ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಹಾಗೂ ವಿಷಯ ನಿರ್ವಾಹಕರಿಗೆ ಜಿಲ್ಲಾಡಳಿತ ಭವನ ಆಡಿಟೋರಿಯಂ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಸರ್ಕಾರಿ ಕಚೇರಿಗಳ ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವದ ಉದ್ದೇಶಕ್ಕಾಗಿಯೇ ಮಾಹಿತಿ ಹಕ್ಕು ಕಾಯ್ದೆ ಜಾರಿಯಲ್ಲಿದೆ. ಈ ಕಾಯ್ದೆಯಡಿ ಸ್ವೀಕೃತವಾಗುವ ಅರ್ಜಿಗಳಿಗೆ ಇಲಾಖೆಗಳಿಂದ ಮಾಹಿತಿ ಒದಗಿಸಲು ಅಧಿಕಾರಿಗಳು ಯಾವುದೇ ರೀತಿಯ ಗೊಂದಲ ಮಾಡಿಕೊಳ್ಳಬಾರದು. ಅರ್ಜಿಗಳ ವಿಲೇಯಲ್ಲಿ ತೊಂದರೆ ಮಾಡಿಕೊಂಡರೆ ವಿಳಂಬವಾಗುತ್ತದೆ. ಈ ಹಿನ್ನೆಲೆಯಲ್ಲಿ ಕಾಯ್ದೆಯ ಬಗ್ಗೆ ಎಲ್ಲ ಅಧಿಕಾರಿಗಳು ಮೊದಲು ಸರಿಯಾಗಿ ಅರ್ಥೈಸಿಕೊಂಡು ನಿಯಮಾನುಸಾರ ಮಾಹಿತಿ ನೀಡಬೇಕು. ಅರ್ಜಿಗಳಿಗೆ ಉತ್ತರ ನೀಡಲು ಯಾವುದೇ ರೀತಿಯ ವಿಳಂಬ ಮಾಡಬಾರದು. ನಿಗದಿತ ಅವಧಿಯೊಳಗೆ ಮಹಿತಿಯನ್ನು ಅಥವಾ ಅವಶ್ಯವಿದ್ದಲ್ಲಿ ಹಿಂಬರಹ ನೀಡಬೇಕು. ಕಾಯ್ದೆಯಡಿ ಯಾವ ಮಾಹಿತಿ ಕೊಡಬೇಕು, ಕೊಡಬಾರದು ಎಂಬುದರ ಬಗ್ಗೆ ಸುಪ್ರೀಂಕೋರ್ಟ್, ಹೈಕೋರ್ಟ್‌ಗಳು ಅನೇಕ ಆದೇಶಗಳನ್ನು ಹೊರಡಿಸಿವೆ. ಸರ್ಕಾರವೂ ಸುತ್ತೋಲೆಗಳನ್ನು ಹೊರಡಿಸಿದೆ, ಇವೆಲ್ಲವುಗಳ ಬಗ್ಗೆ ಅಧಿಕಾರಿಗಳು ವೆಬ್‌ಸೈಟ್ ಮೂಲಕ ಮಾಹಿತಿ ಪಡೆಯಬಹುದು ಎಂದರು.

ಮಾಹಿತಿ ಹಕ್ಕು ಕಾಯ್ದೆಯಡಿ ಸರ್ಕಾರಿ ನೌಕರರ ಯಾವುದೇ ವೈಯಕ್ತಿಕ ಮಾಹಿತಿ ನೀಡುವಂತಿಲ್ಲ. ಕಾಯ್ದೆಯಡಿ ಇಲಾಖೆಗಳಿಂದ ಯಾವ, ಯಾವ ಮಾಹಿತಿ ನೀಡಬಹುದು ಎಂಬ ವಿವರಗಳನ್ನು ತಮ್ಮ ಇಲಾಖಾ ವೆಬ್‌ಸೈಟ್‌ಗಳಲ್ಲಿ ನಮೂದಿಸಬೇಕು. ಇದರಿಂದ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಹಾಕುವವರಿಗೂ ಅನುಕೂಲವಾಗುತ್ತದೆ. ಮಾಹಿತಿ ಹಕ್ಕು ಕಾಯ್ದೆಯ ಬಗ್ಗೆ ಅಧಿಕಾರಿಗಳಲ್ಲಿ ಹೆಚ್ಚಿನ ಅರಿವು ಮೂಡಿಸಲು ಈ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದ್ದು, ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ತರಬೇತಿ: ಬೆಳಗಾವಿಯ ಹಿರಿಯ ವಕೀಲರು ಹಾಗೂ ಮಾಹಿತಿ ಹಕ್ಕು ವಿಶೇಷ ತರಬೇತಿದಾರ ಅಶೋಕ ಹಲಗಲಿ ಅವರು ಮಾಹಿತಿ ಹಕ್ಕು ಕಾಯ್ದೆ ಬಗ್ಗೆ ವಿಶೇಷ ತರಬೇತಿ ನೀಡಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಕೃಷ್ಣಮೂರ್ತಿ ದೇಸಾಯಿ ಸೇರಿದಂತೆ ಮತ್ತಿತರರಿದ್ದರು. ಕಾರ್ಯಾಗಾರದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿಷಯ ನಿರ್ವಾಹಕರು ಭಾಗವಹಿಸಿದ್ದರು.

PREV

Recommended Stories

3ನೇ ಮಹಡಿಯಿಂದ ಆಯತಪ್ಪಿಬಿದ್ದು ಪಿಯು ವಿದ್ಯಾರ್ಥಿನಿ ಸಾವು
ಜೈಲೊಳಗೆ ಡ್ರಗ್ಸ್ ಸಾಗಿಸಲುಯತ್ನ: ವಾರ್ಡನ್ ಬಂಧನ