ನೀರಿನ ಸಂಗ್ರಹ, ಮೂಲಗಳ ಸ್ವಚ್ಛತೆಗೆ ಕ್ರಮ ಕೈಗೊಳ್ಳಿ

KannadaprabhaNewsNetwork |  
Published : Jun 17, 2026, 02:15 AM IST
ಪೋಟೊ16.2: ಕೊಪ್ಪಳ ನಗರದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರ ಕಛೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ (ಡಿ.ಡಬ್ಲ್ಯು.ಎಸ್.ಎಂ) ಸಮಿತಿ ಸಭೆ ನಡೆಯಿತು. | Kannada Prabha

ಸಾರಾಂಶ

ಪ್ರಸ್ತುತ ಮಳೆಗಾಲ ಆರಂಭವಾಗಿದ್ದು, ಈ ಅವಧಿಯಲ್ಲಿ ಸಾಂಕ್ರಾಮಿಕ ರೋಗ ಹರಡುವ ಸಂಭವ ಹೆಚ್ಚಿರುತ್ತದೆ

ಕೊಪ್ಪಳ: ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿನ ನೀರಿನ ಸಂಗ್ರಹ ಮತ್ತು ಮೂಲ ಸ್ವಚ್ಛತೆಗೆ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಜಿಪಂ ಸಿಇಒ ವರ್ಣಿತ್ ನೇಗಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ (ಡಿ.ಡಬ್ಲ್ಯು.ಎಸ್.ಎಂ) ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರಸ್ತುತ ಮಳೆಗಾಲ ಆರಂಭವಾಗಿದ್ದು, ಈ ಅವಧಿಯಲ್ಲಿ ಸಾಂಕ್ರಾಮಿಕ ರೋಗ ಹರಡುವ ಸಂಭವ ಹೆಚ್ಚಿರುತ್ತದೆ. ಹಾಗಾಗಿ ನೀರಿನ ಮೂಲ ಸ್ವಚ್ಛ ಮತ್ತು ಶುಚಿತ್ವ ಕಾಪಾಡಿಕೊಳ್ಳಬೇಕು. ಜಿಲ್ಲೆಯಾದ್ಯಂತ ಎಲ್ಲ ಹಳ್ಳಿಗಳಲ್ಲಿನ ಕುಡಿವ ನೀರಿನ ಸಂಗ್ರಹಣೆ ಮೂಲಗಳಾದ ಓಎಚ್.ಟಿ ಟ್ಯಾಂಕ್, ಸಣ್ಣ ನೀರಿನ ಟ್ಯಾಂಕ್ ಸೇರಿದಂತೆ ಇತರ ಕುಡಿಯುವ ನೀರು ಸಂಗ್ರಹಗಳ ಸ್ವಚ್ಛತೆಗೆ ಒತ್ತು ಕೊಡಬೇಕು. ಯಾವುದೇ ಪೈಪ್ ಲೈನ್ ಹೊಡೆದು ಹೋಗಿದ್ದಲ್ಲಿ ಅದನ್ನು ಸರಿಪಡಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು. ಬೋರ್ ವೆಲ್ ಅಥವಾ ನೀರು ಪೂರೈಕೆ ಪೈಪುಗಳಲ್ಲಿ ಕಲುಷಿತ ನೀರು ಸೇರಿದಂತೆ ನೋಡಿಕೊಳ್ಳಬೇಕು. ಕುಡಿಯುವ ನೀರನ್ನು ಕಡ್ಡಾಯವಾಗಿ ಪರೀಕ್ಷಿಸಿದ ಬಳಿಕವೇ ಪೂರೈಸಲು ಕ್ರಮ ವಹಿಸಬೇಕು. ಪರೀಕ್ಷೆಯಲ್ಲಿ ನೀರು ಕುಡಿಯಲು ಯೋಗ್ಯವಿಲ್ಲವೆಂದು ಕಂಡುಬಂದಲ್ಲಿ ತಕ್ಷಣ ಅಂತಹ ನೀರು ಪೂರೈಕೆ ತಡೆಯಲು ತ್ವರಿತ ಕ್ರಮವಹಿಸಬೇಕು. ಕುಡಿಯಲು ಯೋಗ್ಯವಿಲ್ಲದ ಬೋರ್ ವೆಲ್ ಸ್ಥಗಿತಗೊಳಿಸಬೇಕು. ಅಂತಹ ಗ್ರಾಮಗಳಿಗೆ ಟ್ಯಾಂಕರ್ ಮುಖಾಂತರವೇ ನಿರಂತರ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕು ಎಂದರು.

ಜಲ ಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆಗೆ ನಳದ ಸಂಪರ್ಕ ಕಲ್ಪಿಸುವ ನೀರು ಪೂರೈಕೆ ಮಾಡಲಾಗುತ್ತದೆ. ವಿವಿಧ ತಾಂತ್ರಿಕ ಕಾರಣಗಳಿಂದ ಕಾಮಗಾರಿ ಅಪೂರ್ಣಗೊಂಡಿದ್ದಲ್ಲಿ ತ್ವರಿತವಾಗಿ ಪೂರ್ಣಗೊಳಿಸಲು ಕ್ರಮ ವಹಿಸಿ.ಜಿಲ್ಲೆಯಲ್ಲಿ ಯಾವುದೇ ರೀತಿಯ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ನೋಡಿಕೊಂಡು ಸಮರ್ಪಕವಾಗಿ ನೀರು ಸರಬರಾಜು ಮಾಡಬೇಕು. ಕುಡಿಯುವ ನೀರು ಯೋಜನೆಗಳಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳ ಪೈಕಿ ಬಾಕಿ ಇರುವ ಟ್ಯಾಂಕ್ ನಿರ್ಮಾಣ, ಪೈಪ್‌ಲೈನ್ ಅಳವಡಿಕೆ, ವಿದ್ಯುತ್ ಸಂಪರ್ಕ ಸೇರಿದಂತೆ ಇತರೆ ಮುಕ್ತಾಯ ಹಂತದ ಕಾರ್ಯ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕೊಪ್ಪಳ ವಿಭಾಗದ ಕಾರ್ಯಪಾಲಕ ಅಭಿಯಂತರ ಮಹೇಶ ಶಾಸ್ತ್ರೀ ಸೇರಿದಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವಿವಿಧ ವಿಭಾಗಗಳ ಎಇಇ, ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ (ಡಿ.ಡಬ್ಲ್ಯು.ಎಸ್.ಎಂ) ಸಮಿತಿಯ ಸದಸ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯುವ ಕಾಂಗ್ರೆಸ್ ಜನರ ಧ್ವನಿಯಾಗಿ ಕಾರ್ಯ ನಿರ್ವಹಿಸಲಿ
ಸರ್ಕಾರದ ಯೋಜನೆ ಸಮರ್ಪಕ ತಲುಪಿಸಿ