ವಾಂತಿಭೇದಿ ಪ್ರಕರಣಗಳ ಹತೋಟಿಗೆ ಕ್ರಮ ವಹಿಸಿ: ದಿನೇಶ್‌ ಗುಂಡೂರಾವ್‌

KannadaprabhaNewsNetwork |  
Published : Oct 23, 2024, 01:45 AM IST
22ಎಚ್‌ಪಿಟಿ1- ಹೊಸಪೇಟೆಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ಪ್ರಗತಿಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಮಾತನಾಡಿದರು. | Kannada Prabha

ಸಾರಾಂಶ

ಹಳ್ಳಿ, ನಗರ, ಪಟ್ಟಣಗಳಲ್ಲಿ ವಾಂತಿ-ಭೇದಿ ಪ್ರಕರಣಗಳ ಬಗ್ಗೆ ಹೆಚ್ಚಿನ ನಿಗಾವಹಿಸಬೇಕು ಎಂದು ಸಚಿವ ದಿನೇಶ್ ಗುಂಡೂರಾವ್‌ ತಿಳಿಸಿದರು.

ಹೊಸಪೇಟೆ: ಕಲುಷಿತ ನೀರು ಸೇವನೆಯಿಂದ ವಾಂತಿ-ಭೇದಿ ಪ್ರಕರಣಗಳು ಹೆಚ್ಚು ಉಲ್ಬಣವಾಗುತ್ತಿದ್ದರೆ, ಅಂತಹ ಪ್ರದೇಶಗಳನ್ನು ಗುರುತಿಸಿ ಜಿಲ್ಲಾಡಳಿತಗಳಿಗೆ ಅಂಕಿ-ಅಂಶಗಳನ್ನು ಒದಗಿಸಬೇಕು. ಸಂಬಂಧಿಸಿದ ಇಲಾಖೆಗಳು ಸೇರಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ತಿಳಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಹಳ್ಳಿ, ನಗರ, ಪಟ್ಟಣಗಳಲ್ಲಿ ವಾಂತಿ-ಭೇದಿ ಪ್ರಕರಣಗಳ ಬಗ್ಗೆ ಹೆಚ್ಚಿನ ನಿಗಾವಹಿಸಬೇಕು. ಹರಪನಹಳ್ಳಿ ತಾಲೂಕಿನ ಟಿ. ತುಂಬಿಗೆರೆ ಗ್ರಾಮದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಇಂತಹ ಪ್ರಕರಣಗಳು ಉಲ್ಬಣಿಸದಂತೆ ಜಿಪಂ ಸಿಇಒ, ಡಿಎಚ್‌ಒಗಳು ಹಾಗೂ ಸಂಬಂಧಿಸಿದ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಪೌರಾಯುಕ್ತರು ಕೂಡ ಕ್ರಮವಹಿಸಬೇಕು ಎಂದು ಸಚಿವರು ಸೂಚಿಸಿದರು.

ಡಿಎಚ್‌ಒ ಡಾ. ಎಲ್‌.ಆರ್. ಶಂಕರನಾಯ್ಕ ಮಾತನಾಡಿ, ಟಿ. ತುಂಬಿಗೆರೆ ಗ್ರಾಮದಲ್ಲಿ ಈಗಾಗಲೇ ಆರೋಗ್ಯ ಇಲಾಖೆಯ ತಂಡ ಮೊಕ್ಕಾಂ ಹೂಡಿದೆ. ನಾಲ್ಕು ಮನೆಗಳಲ್ಲಿ ಈ ಸಮಸ್ಯೆ ಇದೆ. ಉಳಿದಂತೆ ಗ್ರಾಮದಲ್ಲಿ ಈ ರೀತಿ ಸಮಸ್ಯೆ ಕಂಡುಬಂದಿಲ್ಲ. ಇಲಿಮೂತ್ರ ಜ್ವರ ಇರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆಯೂ ವೈದ್ಯರು ಪರಿಶೀಲನೆ ನಡೆಸುತ್ತಿದ್ದಾರೆ. ಕುಡಿಯುವ ನೀರು ಹಾಗೂ ಸ್ವಚ್ಛತೆ ಸಮಸ್ಯೆಯಿಂದ ಈ ರೀತಿ ಸಮಸ್ಯೆ ಉಂಟಾಗಿದೆ ಎಂದರು.

ಜಿಪಂ ಸಿಇಒಗಳು ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಗ್ರಾಪಂ ಅಧಿಕಾರಿಗಳಿಗೂ ಶುದ್ಧ ಕುಡಿಯುವ ನೀರು ಒದಗಿಸುವ ಬಗ್ಗೆ ಕ್ರಮವಹಿಸಲು ಸೂಚಿಸಬೇಕು ಎಂದು ಸಚಿವರು ಸಭೆಯಲ್ಲಿ ಸೂಚಿಸಿದರು.

ವಿಜಯನಗರ ಜಿಪಂ ಸಿಇಒ ಅಕ್ರಂ ಶಾ ಪ್ರತಿಕ್ರಿಯಿಸಿ, ಈಗಾಗಲೇ ಈ ಬಗ್ಗೆ ಕ್ರಮವಹಿಸಲಾಗಿದ್ದು, ಟಿ. ತುಂಬಿಗೆರೆ ಗ್ರಾಮದಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಕುಡಿಯುವ ನೀರು ಹಾಗೂ ಸ್ವಚ್ಛತೆ ಕುರಿತು ಕೂಡ ನಿಗಾವಹಿಸಲಾಗಿದೆ ಎಂದರು.

ವೈದ್ಯರ ಕೊರತೆ ನಿಭಾಯಿಸಿ

ವಿಜಯನಗರ ಹಾಗೂ ಕೊಪ್ಪಳ ಉಭಯ ಜಿಲ್ಲೆಗಳಲ್ಲಿ ವೈದ್ಯರು ಹಾಗೂ ತಜ್ಞ ವೈದ್ಯರು, ತಂತ್ರಜ್ಞರ ಕೊರತೆ ಉಂಟಾಗದಂತೆ ಗುತ್ತಿಗೆ ಆಧಾರದ ಮೇಲೆ ವೈದ್ಯರನ್ನು ನೇಮಕ ಮಾಡಿಕೊಳ್ಳಬೇಕು. ಆಯಾ ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಸಿಇಒಗಳು ಡಿಎಚ್‌ಒಗಳ ಬಳಿ ಚರ್ಚಿಸಿ ಕ್ರಮವಹಿಸಬೇಕು. ಬರೀ ಆಸ್ಪತ್ರೆ ಕಟ್ಟಡ ಒದಗಿಸಿದರೆ ಸಾಲದು, ಅದಕ್ಕೆ ತಕ್ಕಂತೆ ವೈದ್ಯಕೀಯ ಸಿಬ್ಬಂದಿ ಕೂಡ ಒದಗಿಸಬೇಕು ಎಂದು ಸಚಿವರು ತಾಕೀತು ಮಾಡಿದರು.

ತಾಯಿ ಮತ್ತು ಶಿಶು ಮರಣವನ್ನು ಕಡಿಮೆ ಮಾಡಬೇಕು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಿಜೇರಿಯನ್‌ ಹೆರಿಗೆ ಕಡಿಮೆ ಮಾಡಬೇಕು. ಈ ಭಾಗದಲ್ಲಿ ಪೌಷ್ಟಿಕ ಆಹಾರಕ್ಕೆ ಒತ್ತು ನೀಡಬೇಕು. ಕೊಪ್ಪಳದಲ್ಲಿ ತಾಯಿ ಮತ್ತು ಶಿಶು ಮರಣ ಹೆಚ್ಚಿದೆ. ಇದನ್ನು ಕಡಿಮೆ ಮಾಡಬೇಕು ಎಂದು ಸೂಚಿಸಿದರು.

ಅಂಗನವಾಡಿ ಹಾಗೂ ಶಾಲೆಗಳಲ್ಲಿ ಶಾಲಾ ಮಕ್ಕಳ ಆರೋಗ್ಯ ದಾಖಲಾತಿಯನ್ನು ಸಮರ್ಪಕವಾಗಿ ಇಡಬೇಕು. ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳು ಈ ವಿಷಯದಲ್ಲಿ ಹಿಂದೆ ಬೀಳಬಾರದು ಎಂದು ಸೂಚಿಸಿದರು.

ಆರೋಗ್ಯದ ವಿಷಯದಲ್ಲಿ ಯಾವುದೇ ಕಾರಣಕ್ಕೂ ಹಿಂದೆ ಬೀಳಬಾರದು. ಈಗಾಗಲೇ ಕೆಕೆಆರ್‌ಡಿಬಿ ಅನುದಾನದಡಿ ಈ ಭಾಗದಲ್ಲಿ ಸೌಲಭ್ಯ ಒದಗಿಸಲು ಮುಖ್ಯಮಂತ್ರಿಯವರು ಸೂಚಿಸಿದ್ದಾರೆ. ಹಾಗಾಗಿ ಮೊದಲು ಉಪಕೇಂದ್ರಗಳು, ನಮ್ಮ ಕ್ಲಿನಿಕ್‌, ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಸೌಲಭ್ಯ ಒದಗಿಸಬೇಕು. ಜನರ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಸಚಿವರು ಇಲಾಖೆಗಳ ಅಧಿಕಾರಿಗಳಿಗೆ ತಿಳಿಸಿದರು.

ಆಯಾ ಆಸ್ಪತ್ರೆಗಳಲ್ಲಿ ಸ್ಥಳೀಯ ಮಟ್ಟದ ಆದಾಯ ಬಳಕೆ ಮಾಡಿಕೊಂಡು ಔಷಧ, ಯಂತ್ರೋಪಕರಣ ಖರೀದಿ ಜನರಿಗೆ ಆರೋಗ್ಯ ಸೇವೆ ಒದಗಿಸಬೇಕು. ಈ ವಿಷಯದಲ್ಲಿ ಕೊಪ್ಪಳದ ಗಂಗಾವತಿ ಆಸ್ಪತ್ರೆ ಉತ್ತಮ ಸಾಧನೆ ಮಾಡಿದೆ. ವಿಜಯನಗರದ ಹಡಗಲಿಯ ಆಸ್ಪತ್ರೆಯವರು ಬರೀ ನೆಪ ಹೇಳುತ್ತಿದ್ದಾರೆ. ಜನರಿಗೆ ಸೇವೆ ಒದಗಿಸಬೇಕು. ಗಂಗಾವತಿಯಂತೇ ಎಲ್ಲ ಆಸ್ಪತ್ರೆಗಳು ಕೆಲಸ ಮಾಡಬೇಕು. ಕೇಂದ್ರ ಕಚೇರಿಯಿಂದಲೇ ಎಲ್ಲವೂ ಆಗಬೇಕು ಎಂದು ಬಯಸದೇ ಸ್ಥಳೀಯ ಆದಾಯ ಬಳಕೆ ಮಾಡಿಕೊಂಡು, ಜನರಿಗೆ ಸೇವೆ ಒದಗಿಸಬೇಕು. ಆಯಾ ಶಾಸಕರ ಸಲಹೆ ಪಡೆದು ಕೆಲಸ ಮಾಡಬೇಕು ಎಂದು ಸಭೆಯಲ್ಲಿ ಆದೇಶಿಸಿದರು.

ಶಾಸಕರಾದ ಬಸವರಾಜ ರಾಯರೆಡ್ಡಿ, ಎಚ್.ಆರ್‌. ಗವಿಯಪ್ಪ, ರಾಘವೇಂದ್ರ ಹಿಟ್ನಾಳ್‌, ಡಾ. ಎನ್‌.ಟಿ. ಶ್ರೀನಿವಾಸ್‌, ಕೃಷ್ಣ ನಾಯ್ಕ, ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ, ಜಿಲ್ಲಾಧಿಕಾರಿ ಎಂ.ಎಸ್‌. ದಿವಾಕರ್‌, ಉಭಯ ಜಿಲ್ಲೆಗಳ ಡಿಎಚ್‌ಒಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿದ್ದರು.ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಖಚಿತ: ಸಚಿವ ಗುಂಡೂರಾವ್

ಕೂಡ್ಲಿಗಿ: ಕರ್ನಾಟಕದಲ್ಲಿ ನಡೆಯುವ ಮೂರು ಉಪಚುನಾವಣೆಯಲ್ಲಿ ಮೂರಕ್ಕೆ ಮೂರೂ ಕಾಂಗ್ರೆಸ್ ಅಭ್ಯರ್ಥಿಗಳೇ ಗೆಲುವು ಸಾಧಿಸುವುದು ಖಚಿತ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ವಿಶ್ವಾಸ ವ್ಯಕ್ತಪಡಿಸಿದರು.ಮಂಗಳವಾರ ಕೂಡ್ಲಿಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದರು.ಕಾಂಗ್ರೆಸ್ ಕರ್ನಾಟಕದಲ್ಲಿ ಸುಭದ್ರ ಆಡಳಿತ ನಡೆಸುತ್ತಿದ್ದು ಯಾವುದೇ ಅಡ್ಡಿಯಾಗದೆ ನಡೆಯುತ್ತಿರುವ ಮೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಗ್ಯಾರಂಟಿ ಎಂದರು.

ಸಂಡೂರು ಉಪಚುನಾವಣೆಗೆ ಈಗಾಗಲೇ ಬಿಜೆಪಿ ಅಭ್ಯರ್ಥಿ ಆಯ್ಕೆ ಮಾಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಯಾರು ಎನ್ನುವ ಪ್ರಶ್ನೆಗೆ ತುಕಾರಾಂ ನಿರ್ಧಾರದಂತೆ ತೀರ್ಮಾನಿಸಲಾಗುವುದು ಅಲ್ಲದೆ ಬಹುಶಃ ತುಕಾರಾಂ ಪತ್ನಿ ಅನ್ನಪೂರ್ಣ ಅವರಿಗೆ ಕಾಂಗ್ರೆಸ್ ಟಿಕೆಟ್ ಕೊಡುವ ಲಕ್ಷಣಗಳು ಇವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕೂಡ್ಲಿಗಿ ಶಾಸಕ ಡಾ ಶ್ರೀನಿವಾಸ್ ಜೊತೆಗಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಏಕಾದಶಿ ಪ್ರಯುಕ್ತ ಶರವಣ ಟ್ರಸ್ಟ್‌ನಿಂದ ಲಕ್ಷ ಲಡ್ಡು ಹಂಚಿಕೆ
ಹಳೆ ದ್ವೇಷ: ರಸ್ತೆಯಲ್ಲಿ ಅಟ್ಟಾಡಿಸಿ ಅಪ್ಪ, ಮಗನ ಮೇಲೆ ಹಲ್ಲೆ ನಡೆಸಿ ಪರಾರಿ