ರಸ್ತೆ ಅಪಘಾತಗಳ ನಿಯಂತ್ರಣಕ್ಕೆ ಕ್ರಮ ವಹಿಸಿ

KannadaprabhaNewsNetwork | Published : Jun 28, 2025 12:18 AM

ಹಾಸನ ಜಿಲ್ಲೆಯಲ್ಲಿ ರಸ್ತೆಯ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದರ ಜೊತೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ಕೆ.ಎಸ್ ಲತಾ ಕುಮಾರಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮನೋರಂಜನೆಯ ಮೂಲಕ ಸಂಚಾರಿ ನಿಯಮಗಳ ಬಗ್ಗೆ ಅರಿವು ಮೂಡಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು. ವಾಹನ ನಿಯಮಗಳನ್ನು ಉಲ್ಲಂಘನೆ ಮಾಡಿದರೆ ಎರಡು ಬಾರಿ ಕ್ಷಮೆಯಿದೆ. ಮೂರನೇ ಬಾರಿಗೆ ಉಲ್ಲಂಘನೆ ಮಾಡಿದರೆ ನಿರ್ದಾಕ್ಷ್ಯಣ್ಯವಾಗಿ ಚಾಲನ ಪರವಾನಗಿ ರದ್ದುಪಡಿಸಲು ಕ್ರಮ ವಹಿಸುವಂತೆ ಸೂಚಿಸಿದರು.

ಹಾಸನ: ಜಿಲ್ಲೆಯಲ್ಲಿ ರಸ್ತೆಯ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದರ ಜೊತೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ಕೆ.ಎಸ್ ಲತಾ ಕುಮಾರಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಸ್ತೆ ಸುರಕ್ಷತಾ ಕ್ರಮಗಳಿಗೆ ಸಂಬಂಧಿಸಿದಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನ್ಯೂನ್ಯತೆಗಳ ಬಗ್ಗೆ ಮುನ್ನೆಚ್ಚರಿಕೆವಹಿಸಿ ಸರಿಪಡಿಸುವ ಮೂಲಕ ಜವಾಬ್ದಾರಿಯುತವಾಗಿ ನಿರ್ವಹಣೆ ಮಾಡುವಂತೆ ತಿಳಿಸಿದರು.

ನಗರ ವ್ಯಾಪ್ತಿಯಲ್ಲಿ ಎಷ್ಟು ಅಪಘಾತಗಳು ಸಂಭವಿಸಿವೆ, ಇದಕ್ಕೆ ಕಾರಣ ಹಾಗೂ ಇವುಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ನೀಡುವಂತೆ ಸೂಚಿಸಿದರಲ್ಲದೆ ಸಂಚಾರಿ ನಿಯಮಗಳ ಕುರಿತು ಅರಿವು ಮೂಡಿಸಬೇಕು ಎಂದರು. ಅಪಘಾತಕ್ಕೆ ಕಾರಣವಾದ ಕುಡಿದು ವಾಹನ ಚಲಾಯಿಸುವುದು, ಅತೀ ವೇಗವಾಗಿ ವಾಹನ ಚಲಾಯಿಸುವುದು, ಸಂಚಾರಿ ನಿಯಮಗಳ ಉಲ್ಲಂಘನೆ ಮಾಡಿ ವಾಹನ ಚಲಾಯಿಸುವುದರಿಂದ ಅಪಘಾತಗಳು ಸಂಭವಿಸುತ್ತಿವೆ. ಈ ನಿಟ್ಟಿನಲ್ಲಿ ವೃತ್ತಿನಿರತ ವಾಹನ ಚಾಲಕರಿಗೆ ಓರಿಯೆಂಟೇಶನ್ ತರಬೇತಿ, ರಿಫ್ರೆಶ್‌ಮೆಂಟ್ ಕೋರ್ಸ್ ಆಯೋಜಿಸಲು ಸೂಚಿಸಿದರಲ್ಲದೆ, ಮನೋರಂಜನೆಯ ಮೂಲಕ ಸಂಚಾರಿ ನಿಯಮಗಳ ಬಗ್ಗೆ ಅರಿವು ಮೂಡಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು. ವಾಹನ ನಿಯಮಗಳನ್ನು ಉಲ್ಲಂಘನೆ ಮಾಡಿದರೆ ಎರಡು ಬಾರಿ ಕ್ಷಮೆಯಿದೆ. ಮೂರನೇ ಬಾರಿಗೆ ಉಲ್ಲಂಘನೆ ಮಾಡಿದರೆ ನಿರ್ದಾಕ್ಷ್ಯಣ್ಯವಾಗಿ ಚಾಲನ ಪರವಾನಗಿ ರದ್ದುಪಡಿಸಲು ಕ್ರಮ ವಹಿಸುವಂತೆ ಸೂಚಿಸಿದರು.ನಗರದಲ್ಲಿ ಶಿಸ್ತುಬದ್ಧ ಪಾರ್ಕಿಂಗ್ ವ್ಯವಸ್ಥೆಗೆ ಕ್ರಮ ವಹಿಸುವುದು ಜೊತೆಗೆ ಖಾಸಗಿ ವಾಹನಗಳನ್ನು ತಮ್ಮ ಸ್ವಂತ ಸ್ಥಳಗಳಲ್ಲಿ ನಿಲ್ಲಿಸಲು ಕ್ರಮವಹಿಸುವುದು. ಖಾಸಗಿ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಯುವ ಜನತೆ ನಿರ್ಲಕ್ಷ್ಯತೆಯಿಂದ ವಾಹನ ಚಾಲಾವಣೆ ಮಾಡುವುದರಿಂದ ಅಪಘಾತಗಳು ಸಂಭವಿಸುತ್ತಿರುವುದು ಕಂಡು ಬರುತ್ತಿದೆ ಇವರಿಗೆ ಜಾಗೃತಿ ಮೂಡಿಸುವುದು ಅಗತ್ಯವಿದೆ ಎಂದರು.

ಪಾದಚಾರಿಗಳ ಸ್ಥಳದಲ್ಲಿ ಪಾದಾರ್ಥಗಳನ್ನಿಟ್ಟು ವ್ಯಾಪಾರ ವ್ಯವಹಾರ ನಡೆಸುವುದರಿಂದ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗುವುದರ ಜೊತೆಗೆ ಅಪಘಾತಗಳು ಸಹ ಸಂಭವಿಸುತ್ತವೆ. ಈ ನಿಟ್ಟಿನಲ್ಲಿ ನಗರಸಭೆ ಸಂತೆ ನಡೆಸಲು ಒಂದು ನಿರ್ದಿಷ್ಟವಾದ ಸ್ಥಳ ನಿಗದಿಪಡಿಸಬೇಕು ಎಂದರು. ಟ್ರಾಫಿಕ್ ಸಿಗ್ನಲ್‌ಗಳಲ್ಲಿ ಸಿಸಿ ಕ್ಯಾಮರಾಗಳು ಸೂಕ್ತ ರೀತಿಯಲ್ಲಿ ಕಾರ್ಯ ನಿರ್ವಹಿಸುವುದು. ರಾಷ್ಟ್ರೀಯ ಹೆದ್ದಾರಿ ಟೋಲ್‌ಗಳಲ್ಲಿ ಹಾಗೂ ಅಗತ್ಯವಿರುವ ಸ್ಥಳಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಿ ವೇಗ ನಿಯಂತ್ರಿಸಲು ಕ್ರಮ ವಹಿಸುವುದು. ಹೆದ್ದಾರಿ ಪಕ್ಕದಲ್ಲಿ ಅನಧಿಕೃತ ಬೋರ್ಡ್‌ಗಳು ಇದ್ದಲ್ಲಿ ಅವುಗಳನ್ನು ತೆರವುಗೊಳಿಸುವುದು. ಅಪಘಾತಗಳನ್ನು ನಿಯಂತ್ರಿಸಲು ರಸ್ತೆ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದರು.ಎಲ್ಲಾ ವಾಹನಗಳಿಗೆ ಕಡ್ಡಾಯವಾಗಿ ರೇಡಿಯನ್ ಸ್ಟ್ರಿಪ್ ಅಳವಡಿಸಬೇಕು ಎಂದರಲ್ಲದೆ, ನಾಯಿಗಳು ವಾಹನಗಳಿಗೆ ಅಡ್ಡ ಬರುವುದರಿಂದಲೂ ಅಪಘಾತಗಳು ಸಂಭವಿಸುವುದರಿಂದ ನಾಯಿಗಳ ಜನನ ನಿಯಂತ್ರಣಕ್ಕೆ ಸ್ಥಳೀಯ ಸಂಸ್ಥೆಗಳು ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದರು.ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವೆಂಕಟೇಶ್ ನಾಯ್ಡು, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಗಿರೀಶ್, ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಜ್ ಕುಮಾರ್ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.