ಕನ್ನಡಪ್ರಭ ವಾರ್ತೆ ಹುಕ್ಕೇರಿ
ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಬುಧವಾರ ಆಯೋಜಿಸಿದ್ದ ಸಭೆಯಲ್ಲಿ ತಾಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ್ದ ಜನರು ತಮ್ಮ ಅಹವಾಲುಗಳನ್ನು ಪರಿಹರಿಸುವಂತೆ ಸಚಿವರ ಮುಂದೆ ಮನವಿ ಮಾಡಿದರು. ಈ ವೇಳೆ ಸಮಾಧಾನದಿಂದಲೇ ಜನರ ವಿವಿಧ ಸಮಸ್ಯೆಗಳಿಗೆ ಧ್ವನಿಗೆ ಕಿವಿಯಾದ ಸಚಿವ ಸತೀಶ ಜಾರಕಿಹೊಳಿ, ಶೀಘ್ರವೇ ಸೂಕ್ತ ಕ್ರಮ ಕೈಗೊಂಡು ಅಹವಾಲುಗಳನ್ನು ವಿಲೇವಾರಿ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಬೇಸಿಗೆಯಲ್ಲಿ ಜನ ಮತ್ತು ಜಾನುವಾರುಗಳಿಗೆ ಯಾವುದೇ ರೀತಿಯಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ನೀರಾವರಿ, ರಸ್ತೆ, ಚರಂಡಿ, ಬೀದಿ ದೀಪ ಅಳವಡಿಕೆ, ಸಮುದಾಯ ಭವನ ನಿರ್ಮಾಣ ಯೋಜನೆಗಳನ್ನು ಕಾಲಮಿತಿಯಲ್ಲಿ ಮುಕ್ತಾಯಗೊಳಿಸಬೇಕು. ಹುಕ್ಕೇರಿ ತಾಲೂಕಿನಲ್ಲಿ ಭೂಗಳ್ಳತನ ಪ್ರಕರಣ ವರದಿಯಾಗುತ್ತಿದ್ದು, ಈ ದಂಧೆಗೆ ಕಡಿವಾಣ ಹಾಕಲು ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹುಕ್ಕೇರಿ ತಾಲೂಕಿನ ಉತ್ತಮ ಫಲಿತಾಂಶಕ್ಕೆ ಅಗತ್ಯ ಕ್ರಮ ವಹಿಸಬೇಕು. ಈಗಾಗಲೇ ಬೇಡಿಕೆ ಅನುಸಾರ ಶಾಲಾ-ಅಂಗನವಾಡಿಗಳಿಗೆ ಸುಸಜ್ಜಿತ ಕಟ್ಟಡ ನಿರ್ಮಿಸಲಾಗುತ್ತಿದ್ದು, ಬರುವ ವರ್ಷದಲ್ಲಿಯೂ ಹೊಸ ಕಟ್ಟಡಗಳನ್ನು ನಿರ್ಮಿಸಲು ಕ್ರಮಕ್ರಕೈಗೊಳ್ಳಲಾಗುವುದು. ಅವರಗೋಳ ದಲಿತರ ಹಲವು ವರ್ಷಗಳ ಸ್ಮಶಾನಭೂಮಿ ಮಂಜೂರಾತಿ ಬೇಡಿಕೆಯನ್ನು ಈಡೇರಿಸಲಾಗುವುದು ಎಂದು ಅವರು ಹೇಳಿದರು.ಮಾಜಿ ಸಚಿವ ಶಶಿಕಾಂತ ನಾಯಿಕ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಶಾನೂಲ್ ತಹಶೀಲ್ದಾರ, ತಾಪಂ ಇಒ ಟಿ.ಆರ್.ಮಲ್ಲಾಡದ, ಮ್ಯಾನೇಜರ್ ಅವಿನಾಶ ಹೊಳೆಪ್ಪಗೋಳ, ಮುಖಂಡರಾದ ಅಶೋಕ ಪಟ್ಟಣಶೆಟ್ಟಿ, ಮಹಾಂತೇಶ ಮಗದುಮ್ಮ, ಇಲಿಯಾಸ್ ಇನಾಮದಾರ, ರಿಷಭ್ ಪಾಟೀಲ, ದಯಾನಂದ ಪಾಟೀಲ, ಅಕ್ಷಯ ವೀರಮುಖ, ಮಲ್ಲಿಕಾರ್ಜುನ ರಾಶಿಂಗೆ, ದಿಲೀಪ ಹೊಸಮನಿ, ಸಿದ್ರಾಮ ಖೋತ, ಕೆಂಪಣ್ಣ ಶಿರಹಟ್ಟಿ, ಪವನ ಪಾಟೀಲ, ಹಣಮಂತ ಶೇಖನವರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಬಾಕ್ಸ್.....
ಹುಕ್ಕೇರಿ: ಸಂಘ-ಸಂಸ್ಥೆಗಳ ಚುನಾವಣೆಯಲ್ಲಿ ಮಾಜಿ ಸಚಿವ ಎ.ಬಿ.ಪಾಟೀಲ ಹಾಗೂ ನಾವು ಬೇರೆ ಬೇರೆ. ಆದರೆ, ಪಕ್ಷದ ವಿಚಾರ ಬಂದಾಗ ನಾವು ಅವರು ಒಂದೇ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು.
ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಾರೆ. ಇದು ಬಿಜೆಪಿ ಹಾಗೂ ಕಾಂಗ್ರೆಸ್ ಸಮಸ್ಯೆಯಲ್ಲ. ಇದರ ಬಗ್ಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಕೂಡ ಒಂದು ಸಭೆ ಮಾಡಿದ್ದಾರೆ ಎಂದು ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.