ಹಾಸನ: ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಾಣಿಕೆ,ಮಾರಾಟ ಹಾಗೂ ಸೇವನೆಯನ್ನು ಪತ್ತೆಹಚ್ಚಿ ಸೂಕ್ತ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಸತ್ಯಭಾಮ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಎಲ್ಲಾ ಇಲಾಖೆಗಳ ಅಧಿಕಾರಿಗಳು ಪ್ರತಿ ಮಾಹೆಗೆ ನಿಗದಿಪಡಿಸಿರುವ ನಿರ್ದಿಷ್ಟ ಗುರಿಯನ್ನು ಕಡ್ಡಾಯವಾಗಿ ಸಾಧಿಸಲು ಸೂಚಿಸಿದರು. ಯಾವ ವ್ಯಾಪ್ತಿಯಲ್ಲಿ ಲೋಪವಾಗಿದೆ ಎಂಬುದನ್ನು ಗಮನಿಸಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳನ್ನೆ ಜವಾಬ್ದಾರರಾಗಿ ಮಾಡಲಾಗುವುದು ಎಂದು ತಿಳಿಸಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತ ಅವರು ಮಾತನಾಡಿ, ಇದು ಬಹಳ ಗಂಭೀರವಾದ ವಿಷಯ ಎಲ್ಲರೂ ಜಾಗ್ರತೆ ವಹಿಸಬೇಕು ಎಂದು ತಿಳಿಸಿದರು.
ಸರ್ಕಾರಿ ಮತ್ತು ಖಾಸಗಿ ವಸತಿ ನಿಲಯಗಳ ವಾರ್ಡನ್ ಅವರ ಪ್ರತ್ಯೇಕ ಗ್ರೂಪ್ ರಚಿಸಿ ಮಕ್ಕಳ ಚಲನವಲನ ಗಮನಿಸಿ ಗ್ರೂಪ್ನಲ್ಲಿ ಮಾಹಿತಿ ನೀಡುವಂತೆ ಸೂಚಿಸಿದರಲ್ಲದೆ, ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳುವಂತೆ ತಿಳಿಸಿದರು.ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್ ಕುಮಾರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವೆಂಕಟೇಶ್ ನಾಯ್ಡು, ತಮ್ಮಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅನಿಲ್, ಹಿಮ್ಸ್ ನಿರ್ದೇಶಕರಾದ ರಾಜಣ್ಣ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.