ಕನ್ನಡಪ್ರಭ ವಾರ್ತೆ ಚಾಮರಾಜನಗರ
ಮುಂಬರುವ ಬೇಸಿಗೆ ವೇಳೆ ಜಿಲ್ಲೆಯಲ್ಲಿ ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗೆ ಯಾವುದೇ ಕೊರತೆಯಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಸಮರ್ಪಕವಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರು ಪೂರೈಕೆಗೆ ಎಲ್ಲಿಯೂ ತೊಂದರೆಯಾಗಬಾರದು. ತುರ್ತು ಪರಿಹಾರಕ್ಕಾಗಿ ಕೈಗೆತ್ತಿಕೊಳ್ಳಲಾಗುತ್ತಿರುವ ಕುಡಿಯುವ ನೀರಿನ ಯೋಜನೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ಕ್ರಿಯಾ ಯೋಜನೆ ಅನುಸಾರ ಕಾಮಗಾರಿ ನಡೆಯಬೇಕು. ಬೇಸಿಗೆ ಸಂದರ್ಭದಲ್ಲಿ ನೀರಿನ ಕೊರತೆ ಎದುರಾಗಬಹುದಾದ ಗ್ರಾಮಗಳು ಹಾಗೂ ಪಟ್ಟಣ ಪ್ರದೇಶಗಳಿದ್ದಲ್ಲಿ ಈಗಿನಿಂದಲೇ ನೀರು ಒದಗಿಸಲು ಸಿದ್ಧತಾ ಕ್ರಮಗಳನ್ನು ಮಾಡಿಕೊಳ್ಳಬೇಕೆಂದು ತಿಳಿಸಿದರು.ಶುದ್ಧ ಕುಡಿಯುವ ನೀರು ಪೂರೈಕೆಯಾಗಬೇಕು. ಓವರ್ಹೆಡ್ ಟ್ಯಾಂಕ್, ತೊಂಬೆ, ಇನ್ನಿತರ ಕುಡಿಯುವ ನೀರಿನ ಸಂಗ್ರಹಗಾರಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಶುದ್ಧ ಕುಡಿಯುವ ನೀರಿನ ಘಟಕಗಳು ಸುಸ್ಥಿತಿಯಲ್ಲಿ ಇರಬೇಕು. ನೀರಿನ ಮಾದರಿಗಳನ್ನು ಪರೀಕ್ಷಿಸಿ ಕುಡಿಯಲು ಯೋಗ್ಯವೇ ಎಂದು ಖಾತರಿ ಪಡಿಸಿಕೊಳ್ಳಿ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಖುದ್ದು ಪರಿಶೀಲಿಸಿ, ಆರೋಗ್ಯ ಇಲಾಖೆ, ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳ ಸಹಕಾರದಿಂದ ಕುಡಿಯುವ ನೀರಿನ ಮಾದರಿ ಪರೀಕ್ಷೆ ವರದಿಗಳನ್ನು ಪಡೆದುಕೊಳ್ಳಿ ಎಂದರು.ಜಾನುವಾರುಗಳಿಗೆ ಅವಶ್ಯವಿರುವ ಪ್ರಮಾಣದಲ್ಲಿ ಮೇವು ದಾಸ್ತಾನು ಮಾಡಿಕೊಳ್ಳಿ. ಅಗತ್ಯವಿರುವೆಡೆ ಸರ್ಕಾರಿ ಭೂಮಿಗಳಲ್ಲಿ ಮೇವು ಬೆಳೆಯಲು ಕ್ರಮವಹಿಸಿ. ಈಗಾಗಲೇ ಮೇವಿನ ಬೀಜದ ಪೊಟ್ಟಣಗಳನ್ನು ವಿತರಿಸಿರುವ ಪ್ರದೇಶಗಳಲ್ಲಿ ಯಾವ ಪ್ರಮಾಣದಲ್ಲಿ ಮೇವು ಬೆಳೆಯಲಾಗುತ್ತಿದೆ ಎಂಬ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ. ಬೇಸಿಗೆ ವೇಳೆ ಮೇವಿನ ಕೊರತೆಯಾಗದಂತೆ ನೋಡಿಕೊಳ್ಳಿ ಎಂದು ಸೂಚಿಸಿದರು.ಬೇಸಿಗೆ ಸಂದರ್ಭದಲ್ಲಿ ಕಾಣಿಸಿಕೊಳ್ಳಬಹುದಾದ ಸಾಂಕ್ರಾಮಿಕ ರೋಗಗಳ ತಡೆಗೆ ಆರೋಗ್ಯ ಇಲಾಖೆ ವಿಶೇಷ ಕಣ್ಗಾವಲು ಇಡಬೇಕು. ಕಲುಷಿತ ನೀರು ಮತ್ತು ಆಹಾರದಿಂದ ಹರಡಬಹುದಾದ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಲು ವ್ಯಾಪಕವಾದ ಕ್ರಮಗಳಿಗೆ ಮುಂದಾಗಬೇಕಿದೆ. ನೈರ್ಮಲ್ಯ ವ್ಯವಸ್ಥೆ ಹಾಗೂ ಆರೋಗ್ಯ ಕಾಳಜಿಗಾಗಿ ಪಾಲಿಸಬೇಕಿರುವ ಸಲಹೆಗಳನ್ನು ಜನರಿಗೆ ನೀಡಬೇಕು ಎಂದರು. ತಾಲೂಕುಗಳಲ್ಲಿಯೂ ತಹಸೀಲ್ದಾರರು ಟಾಸ್ಕ್ ಫೋರ್ಸ್ ಸಮಿತಿ ಸಭೆಯನ್ನು ಇನ್ನು ೧೦ ದಿನಗಳೊಳಗೆ ಕರೆದು ಕುಡಿಯುವ ನೀರು, ಮೇವು, ಕೃಷಿ ಚಟುವಟಿಕೆಗಳಂತಹ ಇನ್ನಿತರ ಪ್ರಮುಖ ವಿಷಯಗಳನ್ನು ಚರ್ಚಿಸಿ ಕೈಗೊಳ್ಳಬೇಕಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ನಿರ್ಣಯ ತೆಗೆದುಕೊಳ್ಳಬೇಕು. ಈ ಕುರಿತ ವರದಿಯನ್ನು ಸಲ್ಲಿಸುವಂತೆ ಅವರು ನಿರ್ದೇಶನ ನೀಡಿದರು. ಕೃಷಿ, ತೋಟಗಾರಿಕೆ ಚಟುವಟಿಕೆಗಳು, ರೈತರಿಗೆ ಪರಿಹಾರ, ಫ್ರೂಟ್ಸ್ ಪ್ರಗತಿ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಸುಧೀರ್ಘವಾಗಿ ಸಭೆಯಲ್ಲಿ ಪರಿಶೀಲಿಸಲಾಯಿತು. ಎಡಿಸಿ ಗೀತಾ ಹುಡೇದ, ಜಿಪಂ ಮುಖ್ಯ ಯೋಜನಾಧಿಕಾರಿ ಪ್ರಭುಸ್ವಾಮಿ, ತಹಸೀಲ್ದಾರರಾದ ಬಸವರಾಜು, ಮಂಜುಳ, ಗುರುಪ್ರಸಾದ್, ರಮೇಶ್ ಬಾಬು, ಜಯಪ್ರಕಾಶ್, ಜಂಟಿ ಕೃಷಿ ನಿರ್ದೇಶಕ ಎಸ್.ಎಸ್. ಆಬಿದ್, ತೋಟಗಾರಿಕೆ ಉಪನಿರ್ದೇಶಕರಾದ ಶಿವಪ್ರಸಾದ್, ಪಶುಸಂಗೋಪನೆ ಇಲಾಖೆಯ ಉಪನಿರ್ದೇಶಕ ಡಾ. ಹನುಮೇಗೌಡ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಮಧುಸೂದನ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಾಮಚಂದ್ರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.