ನೀರಿನ ಅಭಾವ ಆಗದಂತೆ ಕ್ರಮ ಕೈಗೊಳ್ಳಿ: ಚಂದ್ರಶೇಖರ ಬಿ. ಕಂದಕೂರ

KannadaprabhaNewsNetwork |  
Published : Apr 09, 2026, 02:30 AM IST
ಸಭೆಯಲ್ಲಿ ಚಂದ್ರಶೇಖರ ಬಿ. ಕಂದಕೂರ ಮಾತನಾಡಿದರು. | Kannada Prabha

ಸಾರಾಂಶ

ನೀರಿನ ಸರಬರಾಜಿನಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆ ನೀಡಲಾಯಿತು.

ರೋಣ: ಬೇಸಿಗೆ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈಗಿನಿಂದಲೇ ಸಿದ್ಧತೆ ಕೈಗೊಳ್ಳುವುದು ಅತ್ಯಂತ ಅಗತ್ಯ. ಜನರಿಗೆ ಕುಡಿಯುವ ನೀರಿನ ತೊಂದರೆ ಎದುರಾಗುವ ಪರಿಸ್ಥಿತಿ ಬರಬಾರದು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ ತಿಳಿಸಿದರು.ಪಟ್ಟಣದ ತಾಪಂ ಸಭಾಭವನದಲ್ಲಿ ನಡೆದ ಮಹತ್ವದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಭೆಯಲ್ಲಿ ಬೇಸಿಗೆ ಹಂಗಾಮಿನ ಹಿನ್ನೆಲೆ ಕುಡಿಯುವ ನೀರಿನ ಸಮಸ್ಯೆ ಪ್ರಮುಖ ಚರ್ಚೆಯ ವಿಷಯವಾಗಿ ಹೊರಹೊಮ್ಮಿತು. ರೋಣ ಹಾಗೂ ಗಜೇಂದ್ರಗಡ ತಾಲೂಕುಗಳ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ನೀರಿನ ಕೊರತೆಯನ್ನು ಗಂಭೀರವಾಗಿ ಪರಿಗಣಿಸಿ, ಯಾವುದೇ ಗ್ರಾಮದಲ್ಲಿಯೂ ಕುಡಿಯುವ ನೀರಿನ ಅಭಾವ ಉಂಟಾಗದಂತೆ ತಕ್ಷಣ ಮತ್ತು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಹಾಳಾಗಿರುವ ಬೋರ್‌ವೆಲ್‌ಗಳನ್ನು ತ್ವರಿತವಾಗಿ ದುರಸ್ತಿ ಮಾಡುವುದು, ಅಗತ್ಯವಿರುವ ಕಡೆಗಳಲ್ಲಿ ಹೊಸ ಬೋರ್‌ವೆಲ್‌ಗಳ ತೋಡಿಕೆ, ಕುಡಿಯುವ ನೀರಿನ ಟ್ಯಾಂಕರ್‌ಗಳನ್ನು ಸಿದ್ಧವಾಗಿಡುವುದು ಹಾಗೂ ನೀರಿನ ಸಂಗ್ರಹಣೆ ಮತ್ತು ವಿತರಣೆ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದರು.ಇದೇ ಸಂದರ್ಭದಲ್ಲಿ ಗ್ರಾಪಂ ಮಟ್ಟದಲ್ಲಿ ನೀರಿನ ಮೂಲಗಳ ಸಮಗ್ರ ಪರಿಶೀಲನೆ ನಡೆಸಿ, ನೀರಿನ ಮಟ್ಟ ಕುಸಿಯುತ್ತಿರುವ ಪ್ರದೇಶಗಳನ್ನು ಗುರುತಿಸಿ ಮುಂಚಿತ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಯಿತು. ನೀರಿನ ಸರಬರಾಜಿನಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆ ನೀಡಲಾಯಿತು.

ಸಭೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಕ್ರಿಯಾ ಯೋಜನೆ ತಯಾರಿಕೆ ಕುರಿತು ಸಮಗ್ರ ಚರ್ಚೆ ನಡೆಸಿ, ಗ್ರಾಮೀಣ ಮಟ್ಟದಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸುವುದರ ಜತೆಗೆ ಅಭಿವೃದ್ಧಿ ಕಾಮಗಾರಿಗಳನ್ನು ವೇಗಗೊಳಿಸಲು ಸೂಚಿಸಲಾಯಿತು. ಇನ್ನು ಬೀದಿನಾಯಿಗಳ ಹಾವಳಿ ತಡೆಗಟ್ಟುವಿಕೆಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಲಾಯಿತು ಹಾಗೂ ಈ ಸಂಬಂಧ ಹಣ ಸಂಗ್ರಹಣೆ ಮತ್ತು ವ್ಯವಸ್ಥಿತ ನಿರ್ವಹಣೆ ಕುರಿತು ಚರ್ಚಿಸಲಾಯಿತು.

ಲೈಬ್ರರಿ ಸೆಸ್‌ನ್ನು ಜಿಲ್ಲಾ ಪಂಚಾಯಿತಿ ಖಾತೆಗೆ ಸರಿಯಾಗಿ ಜಮಾ ಮಾಡುವಂತೆ ಸೂಚನೆ ನೀಡಲಾಗಿದ್ದು, ಶೇ. 25 ಪ.ಜಾ., ಪ.ಪಂ. ಸಮುದಾಯದವರಿಗೆ ಮೀಸಲಾದ ಅನುದಾನದ ಸಮರ್ಪಕ ಬಳಕೆ ಬಗ್ಗೆ ವಿಶೇಷ ಗಮನ ಹರಿಸಲು ತಿಳಿಸಲಾಯಿತು. ಪಂಚತಂತ್ರ 2.0 ಯೋಜನೆಯ ವಾರ್ಷಿಕ ಮುಕ್ತಾಯದ ಹಿನ್ನೆಲೆ ಪ್ರಗತಿ ವರದಿಗಳನ್ನು ಪರಿಶೀಲಿಸಿ, ಬಾಕಿ ಉಳಿದಿರುವ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಚಿಸಲಾಯಿತು. ಸಭೆ ಅಂತ್ಯದಲ್ಲಿ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ನಿಖರ ಹಾಗೂ ಸಂಪೂರ್ಣ ದತ್ತಾಂಶ ಒದಗಿಸಲು ಸೂಚನೆ ನೀಡಲಾಯಿತು.ಈ ವೇಳೆ ತಾಪಂ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಪಂ ಆಡಳಿತಾಧಿಕಾರಿಗಳು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನವದಂಪತಿಗಳು ಅರಿತು ಸುಖ ಸಂಸಾರ ನಡೆಸಿ
ಯಾವುದೇ ಕಾರಣಕ್ಕೂ ಜನರಿಗೆ ತೊಂದರೆ ನೀಡಬಾರದು: ಹೆಬ್ಬಾರ