ತಪ್ಪಿತಸ್ಥರ ಶಿಕ್ಷೆಗೆ ಕ್ರಮವಹಿಸಿ: ಗೃಹ ಸಚಿವ ಜಿ.ಪರಮೇಶ್ವರ

KannadaprabhaNewsNetwork |  
Published : Jan 04, 2024, 01:45 AM IST
೩ಕೆಎಲ್‌ಆರ್-೧೩ಕೋಲಾರದ ಜಿಲ್ಲಾ ರಕ್ಷಣಾಧಿಕಾರಿ ಸಭಾಂಗಣದಲ್ಲಿ ಕೋಲಾರ-ಕೆಜಿಎಫ್ ಜಿಲ್ಲಾ ಪೊಲೀಸ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ಗೃಹಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿದರು. | Kannada Prabha

ಸಾರಾಂಶ

ಯಾವುದೇ ರೀತಿಯ ಅಪರಾಧ ಪ್ರಕರಣಗಳ ಆರೋಪಿಗಳನ್ನು ಪತ್ತೆಹಚ್ಚಿ ತನಿಖೆಯಿಂದ ಕೈತೊಳೆದುಕೊಳ್ಳಬೇಡಿ, ಆರೋಪಿತರಿಗೆ ನ್ಯಾಯಲಯದಿಂದ ಶಿಕ್ಷೆಯಾಗುವಂತೆ ಕ್ರಮವಹಿಸುವುದು ಪೊಲೀಸರ ಜವಾಬ್ದಾರಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಕೋಲಾರದಲ್ಲಿ ಪೊಲೀಸ್‌ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹೇಳಿದರು.

ಪೊಲೀಸ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ನಿರ್ದೇಶನ ಕನ್ನಡಪ್ರಭ ವಾರ್ತೆ ಕೋಲಾರ

ಯಾವುದೇ ರೀತಿಯ ಅಪರಾಧ ಪ್ರಕರಣಗಳ ಆರೋಪಿಗಳನ್ನು ಪತ್ತೆಹಚ್ಚಿ ತನಿಖೆಯಿಂದ ಕೈತೊಳೆದುಕೊಳ್ಳಬೇಡಿ, ಆರೋಪಿತರಿಗೆ ನ್ಯಾಯಲಯದಿಂದ ಶಿಕ್ಷೆಯಾಗುವಂತೆ ಕ್ರಮವಹಿಸುವುದು ಪೊಲೀಸರ ಜವಾಬ್ದಾರಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ನಿರ್ದೇಶನ ನೀಡಿದರು.

ಬುಧವಾರ ನಗರದ ಜಿಲ್ಲಾ ರಕ್ಷಣಾಧಿಕಾರಿ ಸಭಾಂಗಣದಲ್ಲಿ ಕೋಲಾರ-ಕೆಜಿಎಫ್ ಜಿಲ್ಲಾ ಪೊಲೀಸ್ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಕೆಲವು ಸೂಚನೆಗಳನ್ನು ನೀಡಿದರು.

ಪ್ರತಿ ತಿಂಗಳು ಎಸ್ಸಿ, ಎಸ್ಟಿ ಸಮುದಾಯಗಳ ಜೊತೆ ಸಭೆ ನಡೆಸಿ, ಅವರ ಕುಂದು ಕೊರತೆ ಆಲಿಸಬೇಕು, ಕಾಟಾಚಾರಕ್ಕೆ ಸಭೆ ನಡೆಸಿ ಕಳುಹಿಸುವುದನ್ನು ಸಹಿಸುವುದಿಲ್ಲ, ಅವರಿಗೆ ಸೂಕ್ತ ಪರಿಹಾರ ಕಲ್ಪಿಸುವ ಕೆಲಸವಾಗಬೇಕು, ಶೋಷಿತ ಸಮುದಾಯಗಳಿಗೆ ನ್ಯಾಯ, ರಕ್ಷಣೆ ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯ, ಈ ಬಗ್ಗೆ ನಿರ್ಲಕ್ಷ್ಯ ತೋರುವ ಅಧಿಕಾರಿ ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಮ ಜರುಗಿಸ ಲಾಗುವುದು ಎಂದು ಎಚ್ಚರಿಕೆ ನೀಡಿದರು.

ರಾಷ್ಟ್ರೀಯ-ರಾಜ್ಯ ಹೆದ್ದಾರಿಗಳಲ್ಲಿ ಅಪಘಾತಗಳಾಗುತ್ತಿವೆ, ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ, ಹೀಗಾಗಿ ಹೆದ್ದಾರಿಗಳಲ್ಲಿನ ಬ್ಲ್ಯಾಕ್‌ಸ್ಪಾಟ್‌ಗಳನ್ನು ಗುರುತಿಸಿ, ಸಮಸ್ಯೆಯನ್ನು ಪರಿಹರಿಸಲು ಕೈಗೊಳ್ಳಬೇಕಿರುವ ಅಗತ್ಯ ಕ್ರಮದ ಕುರಿತು ಹೆದ್ದಾರಿ ಪ್ರಾಧಿಕಾರದವರಿಗೆ ವರದಿ ನೀಡಬೇಕು, ಈ ಬಗ್ಗೆ ನಿರ್ಲಕ್ಷ್ಯವಹಿಸುವುದು ಬೇಡ ಎಂದರು.

ಮಕ್ಕಳಿಗೆ ಆಮಿಷವೊಡ್ಡಿ ದೌರ್ಜನ್ಯವೆಸಗುವುದು, ದುಶ್ಚಟಗಳಿಗೆ ದೂಡುತ್ತಿರುವ ಬಗ್ಗೆ ಪ್ರಕರಣಗಳು ವರದಿಯಾಗುತ್ತಿವೆ, ಮಹಿಳಾ-ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಜೊತೆಗೂಡಿ ಅರಿವು ಮೂಡಿ ಸುವ ಕೆಲಸ ಮಾಡಬೇಕು. ಮಹಿಳೆಯರು, ಮಕ್ಕಳ ಮೇಲೆ ದೌರ್ಜನ್ಯ ನಡೆದಿರುವ ಬಗ್ಗೆ ದೂರುಗಳು ಕೇಳಿಬಂದರೆ, ಕೂಡಲೇ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಬೇಕು. ಸಂತ್ರಸ್ತರಿಗೆ ನೆರವು ನೀಡಿ, ಸರಕಾರದಿಂದ ಅಗತ್ಯ ಪರಿಹಾರ ಕಲ್ಪಿಸಬೇಕು. ಅಲ್ಲದೇ, ತಪ್ಪಿತಸ್ಥರು ಕಾನೂನು ಪರಿಧಿಯಿಂದ ತಪ್ಪಿಸಿಕೊಳ್ಳದಂತೆ ಸೂಕ್ತ ನಿಗಾ ವಹಿಸಬೇಕು ಎಂದು ಸೂಚಿಸಿದರು.ಡಿಜಿಟಲ್ ಸಾಕ್ಷ್ಯ ಸಂಗ್ರಹಿಸಿ

ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ, ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು, ಪೋಕ್ಸೋ ಕೇಸ್ ಸೇರಿದಂತೆ ಇನ್ನಿತರ ಪ್ರಕರಣಗಳು ಎಷ್ಟೇ ಹಳೆಯದ್ದಾಗಿದ್ದರೂ ನಿರಂತರವಾಗಿ ನಿಗಾವಹಿಸಬೇಕು. ಆರೋಪಿಗಳಿಗೆ ನ್ಯಾಯಾಲಯದಿಂದ ಜಾಮೀನು ಸಿಗದಂತೆ ನೋಡಿಕೊಳ್ಳಬೇಕಿದೆ. ಹೀಗಾಗಿ ತನಿಖೆ ಸಂದರ್ಭದಲ್ಲಿ ಡಿಜಿಟಲ್ ಹಾಗೂ ತಾಂತ್ರಿಕ ಸಾಕ್ಷ್ಯಾಧಾರಗಳನ್ನು ಕಲೆಹಾಕಬೇಕು. ಇವು ನ್ಯಾಯಾಲಯದಲ್ಲಿ ಮಹತ್ವ ಪಡೆದುಕೊಂಡು, ತಪ್ಪಿತಸ್ಥರಿಗೆ ಶಿಕ್ಷೆ ಆಗುವ ಸಾಧ್ಯತೆ ಹೆಚ್ಚಿರುತ್ತದೆ. ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚನೆ ನೀಡಿದರು.ಡ್ರಗ್ಸ್ ಮುಕ್ತ ಕರ್ನಾಟಕ್ಕಾಗಿ ಪಣ

ಪಂಜಾಬ್‌ನಲ್ಲಿ ೧೮ ವರ್ಷದೊಳಗಿನ ಬಹುತೇಕ ಯುವಕರು ಮಾದಕ ವ್ಯಸನಕ್ಕೆ ಬಲಿಯಾಗಿದ್ದಾರೆ. ಇದು ನಮ್ಮ ರಾಜ್ಯಕ್ಕೆ ಬರಬಾರದು. ಸರ್ಕಾರವು ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣದ ಗುರಿ ಹೊಂದಲಾಗಿದೆ. ಹೀಗಾಗಿ ನಿರ್ಧಿಷ್ಟ ಅವಧಿಯಲ್ಲಿ, ಗುರಿ ತಲುಪಬೇಕಿದೆ. ಹೆಚ್ಚಿನ ಶ್ರಮವಹಿಸಿ ಕೆಲಸ ಮಾಡಬೇಕು. ಇದನ್ನು ಗಂಭೀರವಾಗಿ ಪರಿಗಣಿಸುವಂತೆ ತಿಳಿಸಿದರು.

ಸೈಬರ್ ಜಾಗೃತಿ ಅಗತ್ಯ

ಸೈಬರ್ ವಂಚಕರು ಇತ್ತೀಚೆಗೆ ಹಳ್ಳಿಗಳನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಜನರಿಗೆ ತಿಳುವಳಿಕೆ ಇಲ್ಲದಿರುವುದನ್ನೇ ಗುರಿಯಾಗಿಸಿಕೊಂಡು ಆಮಿಷಗಳನ್ನು ಒಡ್ಡಿ, ನಾನಾ ರೀತಿಯಲ್ಲಿ ವಂಚಿಸುತ್ತಿದ್ದಾರೆ. ಬೇರೆ ರಾಜ್ಯಗಳಲ್ಲಿ ಡೇಟಾ ಸಂಗ್ರಹಿಸಿ ಬ್ಲ್ಯಾಕ್‌ಮೇಲ್ ಮಾಡಿ ಹಣ ಕೀಳುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ಹೀಗಾಗಿ ದೆಹಲಿ, ಬೆಂಗಳೂರು ನಗರ ಪೊಲೀಸರನ್ನು ಅನುಸರಿಸಿ ಜನರಿಗೆ ಮುಂಜಾಗ್ರತೆ ಮೂಡಿಸುವ ಕೆಲಸ ಮಾಡಬೇಕು. ಜಿಲ್ಲಾ ಪೊಲೀಸರು ಅಧಿಕೃತ ಸಾಮಾಜಿಕ ಜಾಲತಾಣ ಬಳಸಬೇಕು. ಜಾಲತಾಣಗಳ ಮೂಲಕ ಜನರು ದೂರು ನೀಡಿದರೆ ಕ್ರಮಕೈಗೊಳ್ಳುವಂತೆ ಸೂಚಿಸಿದರು.

ಕೇಂದ್ರ ವಲಯ ಐಜಿಪಿ ಡಾ.ರವಿಕಾಂತೇಗೌಡ, ಕೋಲಾರ ಎಸ್‌ಪಿ ಎಂ.ನಾರಾಯಣ, ಕೆಜಿಎಫ್ ಎಸ್ಪಿ ಶಾಂತರಾಜು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಂ ಜಿ ವಿರೋಧಕ್ಕೆ ರೈತರಿಗೆ ಸಿಎಂ ಕರೆ
ನೀವೂ ಸಿಎಂ ಆಗಬೇಕು : ಡಿಕೆಗೆ ಪೂಜಾರಿ ಹಾರೈಕೆ