ರಾಷ್ಟ್ರೀಯ ಲೋಕ ಅದಾಲತ್‌ನ ಲಾಭ ಪಡೆದುಕೊಳ್ಳಿ: ಹಿರಿಯ ಸಿವಿಲ್ ನ್ಯಾಯಾಧೀಶ

KannadaprabhaNewsNetwork | Published : Nov 20, 2024 12:32 AM

ಸಾರಾಂಶ

ಜಿಲ್ಲೆಯಲ್ಲಿ ಡಿ. 14ರಂದು ನಡೆಯಲಿರುವ ರಾಷ್ಟ್ರೀಯ ಲೋಕ ಅದಾಲತ್ ಲಾಭವನ್ನು ಜಿಲ್ಲೆಯ ಸಾರ್ವಜನಿಕರು ಪಡೆದುಕೊಳ್ಳಬೇಕು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ್ ಎಸ್. ದರಗದಕನ್ನಡಪ್ರಭ ವಾರ್ತೆ ಕೊಪ್ಪಳ

ಜಿಲ್ಲೆಯಲ್ಲಿ ಡಿ. 14ರಂದು ನಡೆಯಲಿರುವ ರಾಷ್ಟ್ರೀಯ ಲೋಕ ಅದಾಲತ್ ಲಾಭವನ್ನು ಜಿಲ್ಲೆಯ ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ್ ಎಸ್. ದರಗದ ಹೇಳಿದರು.

ಇಲ್ಲಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗುತ್ತದೆ. ಸಿವಿಲ್ ಪ್ರಕರಣಗಳಿದ್ದರೆ ಕೋರ್ಟ್‌ ಫಿ ಕಟ್ಟುವುದು ತಪ್ಪುತ್ತದೆ. ಫ್ರೀ ಲಿಟಿಗೇಶನ್ ಪ್ರಕರಣಗಳಲ್ಲಿ ಜನರು ಕೋರ್ಟ್‌ಗಳಿಗೆ ಅಲಿಯುವುದು ತಪ್ಪುತ್ತದೆ. ಕೌಟುಂಬಿಕ ಸಮಸ್ಯೆಗಳ ಪ್ರಕರಣ, ಸಿವಿಲ್ ಪ್ರಕರಣ, ಲ್ಯಾಂಡ್ ಡಿಸ್ಪ್ಯೂಟ್, ಬ್ಯಾಂಕಿಂಗ್ ಸೇರಿದಂತೆ ಇತರೆ ಹಲವಾರು ಪ್ರಕರಣಗಳನ್ನು ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಇತ್ಯರ್ಥಗೊಳಿಸಲಾಗುತ್ತದೆ ಎಂದು ಹೇಳಿದರು.

ರಾಜಿ ಸಂಧಾನದ ಮೂಲಕ ಪ್ರಕರಣಗಳು ಇತ್ಯರ್ಥವಾಗುವುದರಿಂದ ಜನರಿಗೆ ಸಮಯ ಉಳಿಯುತ್ತದೆ. ಊರಿಂದ ಕೋರ್ಟ್‌ಗಳಿಗೆ ಅಲಿಯುವುದು ತಪ್ಪುತ್ತದೆ. ಖರ್ಚು ಉಳಿಯುವುದರ ಜೊತೆಗೆ ಕೆಲಸಕ್ಕೆ ಹೋಗಿ ದುಡಿಯುವವರಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು.

ಈ ಸಲದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 34420 ಪ್ರಕರಣಗಳು ಬಾಕಿ ಇದ್ದು, 1489 ಪ್ರಕರಣಗಳು ರಾಜಿ ಸಂಧಾನ ಆಗಲು ರೆಫರ್‌ ಆಗಿವೆ. ಕಳೆದ ಸಲದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 14 ದಂಪತಿಗ‍ಳನ್ನು ಒಂದು ಮಾಡಲಾಗಿದೆ ಎಂದರು.

ಡಿ. 14ರಂದು ನಡೆಯುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಕೊಪ್ಪಳ, ಗಂಗಾವತಿ, ಕುಷ್ಟಗಿ ಹಾಗೂ ಯಲಬುರ್ಗಾ ನ್ಯಾಯಾಲಯಗಳ ವ್ಯಾಪ್ತಿಯಲ್ಲಿ ಬರುವ ಹಾಗೂ ವಿವಿಧ ಇಲಾಖೆಗಳಲ್ಲಿ ರಾಜಿಯಾಗುವ ಪ್ರಕರಣಗಳನ್ನು ರಾಜಿ ಮಾಡಿಕೊಳ್ಳಲು ಅವಕಾಶವಿದ್ದು, ಇದರ ಸದುಪಯೋಗವನ್ನು ಜಿಲ್ಲೆಯ ಜನರು ಪಡೆದುಕೊಳ್ಳಬೇಕು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಿವಿಲ್ ಜಡ್ಜ್ ಮತ್ತು ಸಿಜೆಎಂ ಜೆ.ಎಮ್.ಎಫ್.ಸಿ ನ್ಯಾಯಾಧೀಶ ಮಲಕಾರಿ ರಾಮಪ್ಪ ಒಡೆಯರ್, ಪ್ರಧಾನ ಸಿವಿಲ್ ಜಡ್ಜ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶೆ ಭಾಗ್ಯಲಕ್ಷ್ಮೀ, ಹೆಚ್ಚುವರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶ ಆದಿತ್ಯ ಕುಮಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.

Share this article