ಕುಡಿವ ನೀರಿಗೆ ತೊಂದರೆಯಾಗದಂತೆ ಎಚ್ಚರ ವಹಿಸಿ: ಕೆ.ಆರ್.ನಂದಿನಿ

KannadaprabhaNewsNetwork |  
Published : Apr 29, 2026, 01:30 AM IST
೨೮ಕೆಎಂಎನ್‌ಡಿ-೩ಮಂಡ್ಯದ ಜಿಲ್ಲಾ ಪಂಚಾಯತ್‌ನ ಕೆಸ್ವಾನ್ ಸಭಾಂಗಣದಲ್ಲಿ ನಡೆದ ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಜಿಪಂ ಸಿಇಓ ಕೆ.ಆರ್.ನಂದಿನಿ  ಮಾತನಾಡಿದರು. | Kannada Prabha

ಸಾರಾಂಶ

ಕೊಳವೆಬಾವಿಗಳಲ್ಲಿ ನೀರಿನ ಇಳುವರಿ ಕಡಿಮೆಯಾದ ತಕ್ಷಣವೇ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳಿಗೆ ವಿಶೇಷ ಸೂಚನೆ ನೀಡಲಾಗಿದೆ. ಅದರಂತೆ ಕೊಳವೆಬಾವಿಗಳನ್ನು ಮರು ಆಳಗೊಳಿಸುವುದು, ಹೆಚ್ಚುವರಿ ಪೈಪ್ ಅಳವಡಿಸುವುದು, ಅಗತ್ಯವಿರುವ ಕಡೆಗಳಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯ

ಬೇಸಿಗೆ ಹಿನ್ನೆಲೆಯಲ್ಲಿ ಜಿಲ್ಲೆಯ ಗ್ರಾಮಾಂತರ ಪ್ರದೇಶದ ನಾಗರಿಕರಿಗೆ ಕುಡಿಯುವ ನೀರು ಸರಬರಾಜಿನಲ್ಲಿ ಯಾವುದೇ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಜಿಪಂ ಸಿಇಒ ಕೆ.ಆರ್.ನಂದಿನಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯ್ತಿ ಕೆಸ್ವಾನ್ ಸಭಾಂಗಣದಲ್ಲಿ ನಡೆದ ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಒಟ್ಟು ೨೮೯ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದೆಂಬ ಆತಂಕವಿದೆ. ಈಗಾಗಲೇ ೧೩ ಗ್ರಾಮಗಳಿಗೆ ಖಾಸಗಿ ಕೊಳವೆಬಾವಿಗಳ ಮೂಲಕ ಪರ್ಯಾಯವಾಗಿ ಕುಡಿಯುವ ನೀರು ಸರಬರಾಜು ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಉಳಿದ ಗ್ರಾಮಗಳಲ್ಲಿಯೂ ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

ಕೊಳವೆಬಾವಿಗಳಲ್ಲಿ ನೀರಿನ ಇಳುವರಿ ಕಡಿಮೆಯಾದ ತಕ್ಷಣವೇ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳಿಗೆ ವಿಶೇಷ ಸೂಚನೆ ನೀಡಲಾಗಿದೆ. ಅದರಂತೆ ಕೊಳವೆಬಾವಿಗಳನ್ನು ಮರು ಆಳಗೊಳಿಸುವುದು, ಹೆಚ್ಚುವರಿ ಪೈಪ್ ಅಳವಡಿಸುವುದು, ಅಗತ್ಯವಿರುವ ಕಡೆಗಳಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸುವುದು ಹಾಗೂ ಪಂಪ್ ಮತ್ತು ಮೋಟಾರ್‌ಗಳು ಕೆಟ್ಟು ಹೋದಲ್ಲಿ ತಕ್ಷಣವೇ ದುರಸ್ತಿ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿರುವ ಎಲ್ಲಾ ಕುಡಿಯುವ ನೀರಿನ ಮೂಲಗಳು, ಕೊಳವೆಬಾವಿಗಳು, ಪಂಪ್‌ಸೆಟ್‌ಗಳು ಹಾಗೂ ಓವರ್‌ಹೆಡ್ ಟ್ಯಾಂಕ್‌ಗಳನ್ನು ನಿಯಮಿತವಾಗಿ ಪರಿಶೀಲಿಸಿ, ಯಾವುದೇ ಸಮಸ್ಯೆ ಉಂಟಾಗದಂತೆ ಕ್ರಮವಹಿಸಲು ತಿಳಿಸಲಾಗಿದೆ. ಅಗತ್ಯವಿರುವ ಕಡೆಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಸೇರಿದಂತೆ ಪರ್ಯಾಯ ವ್ಯವಸ್ಥೆಗಳನ್ನು ಕೈಗೊಳ್ಳುವಂತೆ ತಿಳಿಸಿದರು.

ಬಿಸಿ ಗಾಳಿ ಹೆಚ್ಚಾಗುತ್ತಿದ್ದು, ಈ ಸಂದರ್ಭದಲ್ಲಿ ನಾಗರಿಕರ ಆರೋಗ್ಯದ ಮೇಲೆಯೂ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಜನರು ಮಧ್ಯಾಹ್ನ ವೇಳೆಯಲ್ಲಿ ಅನಗತ್ಯವಾಗಿ ಹೊರಗೆ ಹೋಗುವುದನ್ನು ತಪ್ಪಿಸಬೇಕು. ಸಾಕಷ್ಟು ನೀರು ಸೇವಿಸಬೇಕು ಮತ್ತು ನೆರಳು ಪ್ರದೇಶಗಳಲ್ಲಿ ವಿಶ್ರಾಂತಿ ಪಡೆಯಬೇಕಾಗಿದ್ದು, ಈ ಬಗ್ಗೆ ಗ್ರಾಪಂಗಳಲ್ಲಿ ಅರಿವು ಮೂಡಿಸಬೇಕು ಎಂದರು.

ಸಾರ್ವಜನಿಕರ ಅನುಕೂಲಕ್ಕಾಗಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸಹಾಯವಾಣಿ ತೆರೆಯಲಾಗಿದೆ. ಜಿಲ್ಲೆಯ ಸಾರ್ವಜನಿಕರು ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಜಿಲ್ಲಾ ಮಟ್ಟದ ಸಹಾಯವಾಣಿ ಸಂಖ್ಯೆ ೯೪೮೦೮೭೨೦೦೫ ಗೆ ಸಂಪರ್ಕಿಸಬಹುದಾಗಿದೆ. ತಾಲ್ಲೂಕು ಮಟ್ಟದಲ್ಲಿಯೂ ಸಂಬಂಧಿತ ಅಧಿಕಾರಿಗಳ ಮೊಬೈಲ್ ಸಂಖ್ಯೆಗಳ ಮೂಲಕ ದೂರು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ತಾಲೂಕು ಮಟ್ಟದ ಸಹಾಯವಾಣಿ ಸಂಖ್ಯೆಗಳು: ಕೆ.ಆರ್.ಪೇಟೆ: ೯೪೮೦೮೭೨೧೦೫, ೯೬೩೨೭೬೯೦೦೨, ಮದ್ದೂರು: ೯೪೮೦೮೭೨೧೧೦, ೯೬೧೧೧೫೬೫೩೮, ಮಳವಳ್ಳಿ: ೯೪೮೦೮೭೨೧೧೫, ೮೦೭೩೮೬೯೦೩೦, ಮಂಡ್ಯ: ೯೪೮೦೮೭೨೧೦೦, ೯೪೪೮೩೩೧೫೧೭, ನಾಗಮಂಗಲ : ೯೪೮೦೮೭೨೧೨೦, ೭೮೯೨೫೯೫೨೯೯, ಪಾಂಡವಪುರ: ೯೪೮೦೮೭೨೧೨೫, ೯೮೮೬೬೯೭೪೧೨, ಶ್ರೆರಂಗಪಟ್ಟಣ: ೯೪೮೦೮೭೨೧೩೦, ೯೯೦೦೮೪೮೪೦೮.

ಇದಲ್ಲದೇ, ಪ್ರತಿ ಸೋಮವಾರ ಜಿಲ್ಲೆಯ ಎಲ್ಲಾ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ ಕುಡಿಯುವ ನೀರು ಸರಬರಾಜಿನ ಸ್ಥಿತಿಗತಿ ಹಾಗೂ ಸಮಸ್ಯೆಗಳ ಕುರಿತು ಸಮಗ್ರವಾಗಿ ಪರಿಶೀಲನೆ ಮತ್ತು ಚರ್ಚೆ ನಡೆಸಲಾಗುತ್ತಿದೆ. ಅದೇ ರೀತಿ ತಾಲ್ಲೂಕು ಹಂತದಲ್ಲಿಯೂ ತಹಸೀಲ್ದಾರ್, ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಸಮನ್ವಯ ಸಭೆಗಳನ್ನು ನಡೆಸಿ, ಕುಡಿಯುವ ನೀರು ಸರಬರಾಜು ಸಮಸ್ಯೆಗಳ ಕುರಿತು ಚರ್ಚಿಸಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಡವಳಿಯನ್ನು ಜಿಲ್ಲಾ ಪಂಚಾಯ್ತಿಗೆ ನಿಯಮಿತವಾಗಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದರು.

ಸಾರ್ವಜನಿಕರೂ ಸಹ ಕುಡಿಯುವ ನೀರನ್ನು ಮಿತವಾಗಿ ಬಳಸುವ ಮೂಲಕ ನೀರಿನ ಸಂರಕ್ಷಣೆಗೆ ಸಹಕರಿಸುವಂತೆ ಜಾಗೃತಿ ಮೂಡಿಸಲು ಕ್ರಮ ವಹಿಸುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಯೋಜನಾ ನಿರ್ದೇಶಕರಾದ ಸುಂದರ್ ರಾಜ್, ಜಿಲ್ಲೆಯ ಎಲ್ಲಾ ತಾಪಂ ಇಒಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳ ಸಹಾಯಕ ಕಾರ್ಯಪಾಲಕ ಅಭಿಯಂತರರು ಮತ್ತು ಜಿಲ್ಲೆಯ ಎಲ್ಲಾ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ವಿಡಿಯೋ ಸಂವಾದದ ಮೂಲಕ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ರಾಮೀಣ ಸಮಸ್ಯೆ ಅರಿತು ಪರಿಹರಿಸಲು ಪ್ರಯತ್ನಿಸಿ: ದರ್ಶನ್ ಪುಟ್ಟಣ್ಣಯ್ಯ
ಸಾರಿಗೆ ಬಸ್‌ಗಳ ಕೆಲ ನಿರ್ವಾಹಕರಿಂದ ಶಕ್ತಿ ಯೋಜನೆ ದುರ್ಬಳಕೆ: ಮೂಡ್ಲೀಗೌಡ