ಹರಪನಹಳ್ಳಿ: ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಗಮನದಲ್ಲಿಟ್ಟುಕೊಂಡು ಬೂತ್ ಹಾಗೂ ವಾರ್ಡ್ ಮಟ್ಟದಲ್ಲಿ ಕಾಂಗ್ರೆಸ್ ಸಂಘಟನೆ ಮತ್ತಷ್ಟು ಬಲಪಡಿಸಬೇಕು ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ತಿಳಿಸಿದರು.
ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, ಸರ್ಕಾರದ ಗ್ಯಾರಂಟಿ ಯೋಜನೆಗಳು ಸೇರಿದಂತೆ ಜನಪರ ಕಾರ್ಯಕ್ರಮಗಳ ಕುರಿತು ಜನರಿಗೆ ಸಮಗ್ರ ಮಾಹಿತಿ ನೀಡಬೇಕು. ಬೂತ್ ಮಟ್ಟದಲ್ಲಿ ಪಕ್ಷದ ಕಾರ್ಯಕರ್ತರನ್ನು ಸಂಘಟಿಸಿ, ಪಕ್ಷದ ಸಂಘಟನೆ ಸದೃಢಗೊಳಿಸುವ ನಿಟ್ಟಿನಲ್ಲಿ ಪ್ರಚಾರ ಸಮಿತಿಯ ಪದಾಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು ಎಂದರು.
ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಈಗಿನಿಂದಲೇ ಸಿದ್ಧತೆ ಕೈಗೊಂಡು, ಪಕ್ಷ ಸೂಚಿಸುವ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು.ಗ್ರಾಪಂ ಮಟ್ಟದಲ್ಲಿ ಭಾರತ್ ಜೋಡೋ ಯುವ ಸಂಘ ಹಾಗೂ ಆರು ಗ್ಯಾರಂಟಿ ಯೋಜನೆಗಳ ಸಮಿತಿಗಳಿಗೆ ಸಕ್ರಿಯ ಮತ್ತು ಸಮರ್ಥ ಕಾರ್ಯಕರ್ತರನ್ನು ನಿಯೋಜಿಸುವ ಕಾರ್ಯಕ್ಕೂ ಆದ್ಯತೆ ನೀಡಬೇಕು ಎಂದರು.ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ.ವಿ.ಅಂಜಿನಪ್ಪ ಮಾತನಾಡಿ, ವಿಜಯನಗರ ಜಿಲ್ಲೆಯಲ್ಲಿಯೇ ಹರಪನಹಳ್ಳಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಪಕ್ಷ ಸಂಘಟನೆಯಲ್ಲಿ ಮುಂಚೂಣಿಯಲ್ಲಿದೆ. ಪ್ರಚಾರ ಸಮಿತಿಯ ಸಂಘಟನಾ ಚಟುವಟಿಕೆಗಳಿಗೆ ನಮ್ಮ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು.
ಇನ್ನೂ ಕೆಪಿಸಿಸಿ ಪ್ರಚಾರ ಸಮಿತಿ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿಗಳ ನೇತೃತ್ವದಲ್ಲಿ ಸೆ.11 ಮತ್ತು 12 ರಂದು ಹೊಸಪೇಟೆಯಲ್ಲಿ ನಡೆಯಲಿರುವ ಹೋರಾಟದಲ್ಲಿ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದರು.