ಬಳ್ಳಾರಿ: ನಗರದ ವಡ್ಡರಬಂಡೆ ಪ್ರದೇಶದಲ್ಲಿ ಡಿ. 31ರಂದು ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳಿದ ಆರೋಪಿಗಳನ್ನು ಬಂಧಿಸಬೇಕು. ಗೂಂಡಾ ಕಾಯ್ದೆಯಡಿ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ನದಾಫ್/ ಪಿಂಜಾರ ಸಂಘದಿಂದ ನಗರದಲ್ಲಿ ಪ್ರತಿಭಟನೆ ಜರುಗಿತು.
ಘಟನೆಯಲ್ಲಿ ಕೊಲೆಗೀಡಾಗಿರುವ ಸೈದುಲ್ಲಾ ಹಾಗೂ ರಜಾಕ್ ವಲಿ ಕುಟುಂಬವು ಅತ್ಯಂತ ಬಡತನ ಹಿನ್ನೆಲೆಯ ಕುಟುಂಬವಾಗಿದೆ. ಹತ್ಯೆಯಾದ ಸೈದುಲ್ಲಾ ಹಮಾಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಾ, ಕುಟುಂಬ ನಿರ್ವಹಣೆ ಮಾಡುತ್ತಿದ್ದರು. ಮಗನ ಸಾವಿನಿಂದ ಪೋಷಕರು ಬೀದಿಗೆ ಬಂದಿದ್ದಾರೆ. ಪೋಷಕರ ಮುಂದಿನ ಜೀವನ ನಿರ್ವಹಣೆಗೆ ಪರಿಹಾರ ನೀಡಬೇಕು. ಅಮಾಯಕರು ಹಾಗೂ ದುರ್ಬಲ ವರ್ಗದ ಜನರ ಮೇಲೆ ದಾಳಿ, ದಬ್ಬಾಳಿಕೆಗಳು ನಡೆಯುವುದನ್ನು ತಪ್ಪಿಸಬೇಕು. ಸಮಾಜಘಾತುಕ ಶಕ್ತಿಗಳನ್ನು ನಿಯಂತ್ರಿಸಲು ಹಾಗೂ ಇಂತಹ ಘಟನೆಗಳು ನಗರದಲ್ಲಿ ನಡೆಯದಂತೆ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಶಾಸಾಬ್, ಉಪಾಧ್ಯಕ್ಷ ಶೇಖ್ ಸಾಬ್, ಪ್ರಧಾನ ಕಾರ್ಯದರ್ಶಿ ಅಲ್ಲಾಬಕಾಷ್, ಮೌಲಾಲಿ ಸೇರಿದಂತೆ ಸಂಘದ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಜಿಲ್ಲಾಡಳಿತಕ್ಕೆ ಸಂಘದ ಪ್ರಮುಖರು ಮನವಿ ಸಲ್ಲಿಸಿದರು.