ಕಾರವಾರ: ಪ್ರಸಕ್ತ ಸಾಲಿನ ಮುಂಗಾರು ಅವಧಿಯಲ್ಲಿ ಜಿಲ್ಲೆಯಲ್ಲಿ ಯಾವುದೇ ಮಾನವ ಜೀವ ಹಾನಿ ಆಗದಂತೆ ಅಗತ್ಯವಿರುವ ಎಲ್ಲ ಗರಿಷ್ಠ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಯಾವುದೇ ರೀತಿಯ ವಿಪತ್ತುಗಳನ್ನು ಸಮರ್ಥವಾಗಿ ಎದುರಿಸುವ ಮೂಲಕ ಜಿಲ್ಲೆಯ ಸಾರ್ವಜನಿಕರ ರಕ್ಷಣೆಗೆ ಆದ್ಯತೆ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಸೂಚನೆ ನೀಡಿದರು.ಅವರು ಗುರುವಾರ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಪೂರ್ವ ಸಿದ್ಧತೆ ಕುರಿತು ಕೈಗೊಂಡಿರುವ ಕ್ರಮಗಳ ಕುರಿತು ವರ್ಚುಚಲ್ ಮೂಲಕ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯಲ್ಲಿನ ಶಾಲೆಗಳು ಮತ್ತು ಅಂಗನವಾಡಿ ಕಟ್ಟಡಗಳ ಬಳಿ ಇರುವ ಅಪಾಯಕಾರಿ ಮರಗಳನ್ನು ತಕ್ಷಣ ತೆರವುಗೊಳಿಸಬೇಕು. ಈ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿದ್ದರೆ ಪರ್ಯಾಯ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಬೇಕು. ಅರಣ್ಯ ಇಲಾಖೆಯಿಂದ ಅಪಾಯಕಾರಿ ಮರಗಳನ್ನು ತಕ್ಷಣವೇ ತೆರವುಗೊಳಿಸುವ ಕಾರ್ಯ ಮಾಡಬೇಕು ಎಂದರು.
ಮಳೆಯಿಂದ ಹಾನಿ ಸಂಭವಿಸಿದ್ದಲ್ಲಿ ಸಂಬಂದಪಟ್ಟವರಿಗೆ ತಕ್ಷಣವೇ ಪರಿಹಾರವನ್ನು ವಿತರಿಸಬೇಕು. ಸಂತ್ರಸ್ತರಿಗೆ ಪರಿಹಾರ ವಿತರಣೆ ಸಂದರ್ಭದಲ್ಲಿ ಅಂದಾಜು ಮಾಡುವ ನಷ್ಟವನ್ನು ಮಾನವೀಯ ನೆಲೆಯಲ್ಲಿ ಪರಿಗಣಿಸಿ, ಅವರಿಗೆ ಗರಿಷ್ಠ ಮೊತ್ತದ ಪರಿಹಾರ ವಿತರಣೆ ಮಾಡಬೇಕು. ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದ ಪರಿಹಾರ ವಿತರಣೆಗೆ ಯಾವುದೇ ಹಣಕಾಸಿನ ಕೊರತೆ ಇಲ್ಲವಾಗಿದ್ದು ಎಲ್ಲ ತಾಲೂಕುಗಳ ತಹಸೀಲ್ದಾರ್ ಗಳ ಖಾತೆಯಲ್ಲಿ ಸರಾಸರಿ 60 ರಿಂದ 70 ಲಕ್ಷ ರು. ಗಳ ಅನುದಾನವಿದ್ದು, ಇನ್ನೂ ಹೆಚ್ಚಿನ ಅನುದಾನದ ಅಗತ್ಯವಿದ್ದಲ್ಲಿ ಕೂಡಲೇ ಬಿಡುಗಡೆಗೊಳಿಸಲಾಗುವುದು ಎಂದರು.ಈ ಹಿಂದಿನ ಬಾರಿ ನೌಕಾನೆಲೆ ಪ್ರದೇಶದಲ್ಲಿನ ಜನವಸತಿ ಪ್ರದೇಶಗಳಿಗೆ ಮಳೆ ನೀರು ನುಗ್ಗಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಪ್ರಸ್ತುತ ಈ ಪ್ರದೇಶಗಳಲ್ಲಿ ಈ ಬಾರಿ ಯಾವುದೇ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಬೇಕು, ರಸ್ತೆಗಳ ಪಕ್ಕದಲ್ಲಿನ ಚರಂಡಿಗಳಲ್ಲಿ ಡ್ರಜ್ಜಿಂಗ್ ಮಾಡುವ ಮೂಲಕ ಮಳೆ ನೀರು ರಸ್ತೆಯಲ್ಲಿ ನಿಲ್ಲದಂತೆ ಎಚ್ಚರ ವಹಿಸಬೇಕು. ಗ್ರಾಪಂಗಳ ವ್ಯಾಪ್ತಿಯಲ್ಲಿಯೂ ಕೂಡ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗದಂತೆ ಎಚ್ಚರ ವಹಿಸಬೇಕು ಎಂದರು.
ಈಗಾಗಲೇ ಗುರುತಿಸಲಾಗಿರುವ ಗುಡ್ಡಕುಸಿತ ಪ್ರದೇಶಗಳಲ್ಲಿ ವಾಸವಾಗಿರುವ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಕಾರಣದಿಂದ ಅಪಘಾತ ಸಂಭವಿಸಿ ಅನಾಹುತವಾದಲ್ಲಿ ಕಾಮಗಾರಿ ನಿರ್ವಹಿಸುವ ಸಂಸ್ಥೆಯ ಅಧಿಕಾರಿಗಳ ಹೆಸರನ್ನು ನಮೂದಿಸಿ ಎಫ್.ಐಆರ್ ದಾಖಲಿಸುವಂತೆ ಸೂಚಿಸಿದರು.ಎಲ್ಲ ತಾಲೂಕುಗಳಲ್ಲಿ ತಮ್ಮ ವ್ಯಾಪ್ತಿಯಲ್ಲಿ ಹಾನಿ ಸಂಭವಿಸುವ ಪ್ರದೇಶಗಳನ್ನು ಸಾಕಷ್ಟು ಮುಂಚಿತವಾಗಿ ಗುರುತಿಸಿಕೊಳ್ಳಬೇಕು. ಅಲ್ಲಿನ ಜನರಿಗೆ ಅಗತ್ಯ ಮುನ್ಸೂಚನೆಗಳನ್ನು ನೀಡುವುದರ ಜೊತೆಗೆ ಸಮೀಪದಲ್ಲಿ ಕಾಳಜಿ ಕೇಂದ್ರಗಳನ್ನು ಗುರುತಿಸಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು. ಕಾಳಜಿ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ಯಾವುದೇ ಕೊರತೆಯಾಗದಂತೆ ಅಗತ್ಯ ಎಲ್ಲ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ಎಲ್ಲಾ ತಾಲೂಕುಗಳಲ್ಲಿ 24*7 ಕಾರ್ಯ ನಿರ್ವಹಿಸುವ ಕಂಟ್ರೋಲ್ ರೂಂ ಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಿ, ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ನಿರ್ದೇಶನ ನೀಡಿದರು.
ಜಲಾಶಯಗಳಿಂದ ನೀರು ಹೊರಬಿಡುವ ಸಮಯದಲ್ಲಿ ಸಮುದ್ರದ ಉಬ್ಬರ ಮತ್ತು ಇಳಿತವನ್ನು ತಿಳಿದುಕೊಂಡು ನೀರು ಬಿಡುಗಡೆ ಮಾಡಬೇಕು. ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯತೆ ಹೊಂದಿರಬೇಕು. ಸಹಕಾರದಿಂದ ಒಟ್ಟಾಗಿ ಕಾರ್ಯ ನಿರ್ವಹಿಸುವುದರ ಮೂಲಕ ಜಿಲ್ಲೆಯಲ್ಲಿ ಮಾನ್ಸೂನ್ ವೇಳೆಯಲ್ಲಿ ಜಿಲ್ಲೆಯ ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಅಗತ್ಯವಿರುವ ನೆರವು ಒದಗಿಸಬೇಕು ಎಂದರು.ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಮಾತನಾಡಿ, ಜಿಲ್ಲಾಡಳಿದಿಂದ ಈ ಬಾರಿಯ ಮಾನ್ಸೂನ್ ವಿಪತ್ತು ಎದುರಿಸುವ ಕುರಿತಂತೆ ಈಗಾಗಲೇ ನಿರಂತರವಾಗಿ ಸಭೆಗಳನ್ನು ನಡೆಸಿ ಎಲ್ಲಾ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಲಾಗಿದೆ. ಪ್ರಸ್ತುತ ಮಳೆಯಿಂದ ಪ್ರಾಣಹಾನಿಯಾದ ಒಬ್ಬರಿಗೆ ಈಗಾಗಲೇ ಪರಿಹಾರವನ್ನು ವಿತರಿಸಲಾಗಿದೆ. ಗುಡ್ಡ ಕುಸಿತ ಪ್ರದೇಶಗಳಲ್ಲಿ ನಿರಂತರವಾಗಿ ನಿಗಾ ವಹಿಸಲಾಗಿದ್ದು, ಆ ಪ್ರದೇಶದಲ್ಲಿ ಜನವಸತಿ ಇಲ್ಲದಂತೆ ಎಚ್ಚರ ವಹಿಸಲಾಗಿದೆ. ಅಪಾಯಕಾರಿ ಮರಗ ತೆರವು ಕಾರ್ಯ ನಡೆಯುತ್ತಿದೆ ಎಂದರು.
ಕಾಳಜಿ ಕೇಂದ್ರಗಳನ್ನು ಗುರುತಿಸಿಟ್ಟುಕೊಂಡಿದ್ದು, ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪ್ರತಿಯೊಂದು ಗ್ರಾಮ ಮಟ್ಟದಲ್ಲಿಯೂ ವಿಪತ್ತು ನಿರ್ವಹನೆಗೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಎಲ್ಲ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿರುವಂತೆ ಸೂಚನೆ ನೀಡಿದ್ದು, ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರದ ಕಂಟ್ರೋಲ್ ರೂಂ ನಲ್ಲಿ ಸ್ವೀಕಾರವಾಗುವ ದೂರುಗಳಿಗೆ ತಕ್ಷಣ ಸ್ಪಂದಿಸಲಾಗುತ್ತಿದೆ ಎಂದರು.ಜಿಪಂ ಸಿಇಒ ಈಶ್ವರ ಕಾಂದೂ, ಎಡಿಸಿ ಸಾಜಿದ್ ಮುಲ್ಲಾ, ಉಪ ವಿಭಾಗಾಧಿಕಾರಿ ಕನಿಷ್ಕ ಇದ್ದರು.