ಕುಡಿಯುವ ನೀರಿಗೆ ತೊಂದರೆಯಾಗದಂತೆ ಅಗತ್ಯ ಕ್ರಮಕೈಗೊಳ್ಳಿ: ಶಾಸಕ ಸಿ.ಪುಟ್ಟರಂಗಶೆಟ್ಟಿ

KannadaprabhaNewsNetwork | Updated : Mar 16 2024, 03:47 PM IST

ಸಾರಾಂಶ

ಕ್ಷೇತ್ರದ ಚಾಮರಾಜನಗರ ಪಟ್ಟಣ ಹಾಗೂ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದು ಗಮನಕ್ಕೆ ಬಂದಿದೆ. ಕ್ಷೇತ್ರದಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರು ಪೂರೈಸುವುದು ನಮ್ಮ ಜವಾಬ್ದಾರಿಯಾಗಿದೆ.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಎಂಎಸ್‌ಐಎಲ್ ಅಧ್ಯಕ್ಷ, ಶಾಸಕ ಸಿ. ಪುಟ್ಟರಂಗಶೆಟ್ಟಿ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಪ್ರವಾಸಿಮಂದಿರದಲ್ಲಿ ನಡೆದ ಬರ ಪರಿಹಾರ ನಿರ್ವಹಣೆ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬರ ಪರಿಹಾರದಲ್ಲಿ ಸಾಕಷ್ಟು ಹಣವಿದೆ. 

ಟೆಂಡರ್ ಆಗಿರುವ ಬೋರ್‌ವೆಲ್ ಕೊರೆಸುವುದು, ಚಾಮರಾಜನಗರ ಪಟ್ಟಣದಲ್ಲಿ 25ಲಕ್ಷ ರು. ಅನುದಾನದಲ್ಲಿ ಎಲ್ಲಿ ಆದ್ಯತೆ ಇದೆಯೋ ಅಲ್ಲಿ ತಕ್ಷಣವೇ ಹೊಸ ಬೋರ್‌ವೆಲ್ ಕೊರೆಸಿ ನೀರು ಪೂರೈಕೆ ಮಾಡುವುದು. 

ಅಲ್ಲದೆ ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿಯಲ್ಲಿ 40 ಲಕ್ಷ ಅನುದಾನವಿದ್ದು ಬರ ಅವರಿಸಿದ್ದು, ಮಳೆ ಇಲ್ಲದ ಕಾರಣದಿಂದ ಅಂತರ್ಜಲ ಕುಸಿದು ಕುಡಿಯುವ ನೀರಿನ ಸಮಸ್ಯೆ ತಲೆದೋರಿರುವುದರಿಂದ ಅಧಿಕಾರಿಗಳು ಕುಡಿಯುವ ನೀರಿಗೆ ಅಗತ್ಯ ಕ್ರಮಕೊಳ್ಳಬೇಕು ಎಂದರು.

ಕ್ಷೇತ್ರದ ಚಾಮರಾಜನಗರ ಪಟ್ಟಣ ಹಾಗೂ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದು ಗಮನಕ್ಕೆ ಬಂದಿದೆ. ಕ್ಷೇತ್ರದಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರು ಪೂರೈಸುವುದು ನಮ್ಮ ಜವಾಬ್ದಾರಿಯಾಗಿದೆ. ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮಕೈಗೊಳ್ಳಬೇಕು ಎಂದರು.

ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸಲು ಸರ್ಕಾರ ಸಿದ್ಧವಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕುಡಿಯುವ ನೀರಿಗೆ ಅನುದಾನ ಕೊಡುವುದಾಗಿ ತಿಳಿಸಿದ್ದಾರೆ. 

ಸರ್ಕಾರದಿಂದ ಅನುದಾನ ಕೊಡಿಸಲು ನಾನೂ ಬದ್ಧನಾಗಿದ್ದೇನೆ. ಚಾಮರಾಜನಗರ ಪಟ್ಟಣದ ವಾರ್ಡ್‌ಗಳಿಗೆ ಕುಡಿಯುವ ನೀರು ಒದಗಿಸಲು ವಿಶೇಷ ಒತ್ತು ನೀಡಲಾಗಿದೆ. 

ಹಳೆಯ ಬೋರ್‌ನಲ್ಲಿ ನೀರು ಬರುತ್ತದೆ ಎಂದರೆ ಅದನ್ನೇ ಸರಿಪಡಿಸಿ, ಎಲ್ಲೆಲ್ಲಿ ಹೊಸ ಬೋರ್, ಪೈಪ್‌ಲೈನ್ ಅವಶ್ಯಕತೆ ಇದೆಯೋ ಅಂತಹ ಕಡೆ ತುರ್ತಾಗಿ ಕಾಮಗಾರಿ ಮಾಡಿ ಜನರಿಗೆ ನೀರಿನ ಸಮಸ್ಯೆಯಾಗದಂತೆ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

Share this article