ರಸ್ತೆ ಅಪಘಾತಗಳು ಸಂಭವಿಸದಂತೆ ಅಗತ್ಯ ಕ್ರಮ ಕೈಗೊಳ್ಳಿ: ಡೀಸಿ

KannadaprabhaNewsNetwork |  
Published : May 15, 2024, 01:42 AM IST
ಡಿಸಿ, ಎಸ್ಪಿ ಸಭೆ | Kannada Prabha

ಸಾರಾಂಶ

ಅಪಘಾತಗಳು ಸಂಭವಿಸಿದ ತಕ್ಷಣ ದೂರದ ಆಸ್ಪತ್ರೆಗಳಿಗೆ ಹೋಗದೇ ಜಿಲ್ಲಾ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದರೆ ಬೇರೆಡೆಗೆ ತೆರಳಬೇಕು. ಅಪಘಾತಕ್ಕೀಡಾದವರನ್ನು ತಕ್ಷಣ ಅಸ್ಪತ್ರೆಗೆ ಸೇರಿಸಲು ಕ್ರಮ ಕೈಗೊಳ್ಳಬೇಕು.

ಕನ್ನಡಪ್ರಭ ವಾರ್ತೆ ತುಮಕೂರು

ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಪಘಾತಗಳು ಸಂಭವಿಸುತ್ತಿದ್ದು, ರಸ್ತೆ ಅಪಘಾತಗಳು ಸಂಭವಿಸದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ನಿರ್ಲಕ್ಷ್ಯ ತೋರುವ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಸಂಜೆ ನಡೆದ ಜಿಲ್ಲಾ ರಸ್ತೆ ಸುರಕ್ಷಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಸೇರಿದ ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಗುರುತಿಸಲಾಗಿರುವ 62 ಅಪಘಾತ ಸ್ಥಳಗಳಲ್ಲಿ ರಸ್ತೆಯ ಪ್ರಾರಂಭ ಮತ್ತು ಅಂತ್ಯದಲ್ಲಿ ಎಚ್ಚರಿಕೆ ಸೂಚನಾ ಫಲಕ, ಸ್ಪೀಡ್ ಬ್ರೇಕರ್, ಮಾರ್ಗ ಸೂಚಕಗಳನ್ನು ಅಳವಡಿಸಿ ಅಪಘಾತ ಪ್ರಮಾಣ ತಗ್ಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಅಪಘಾತಗಳು ಸಂಭವಿಸಿದ ತಕ್ಷಣ ದೂರದ ಆಸ್ಪತ್ರೆಗಳಿಗೆ ಹೋಗದೇ ಜಿಲ್ಲಾ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದರೆ ಬೇರೆಡೆಗೆ ತೆರಳಬೇಕು. ಅಪಘಾತಕ್ಕೀಡಾದವರನ್ನು ತಕ್ಷಣ ಅಸ್ಪತ್ರೆಗೆ ಸೇರಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಯಾವುದೇ ಕಾರಣಕ್ಕೂ ಟೆಂಪೋದಂತಹ ಗೂಡ್ಸ್ ವಾಹನಗಳಲ್ಲಿ ಜನರನ್ನು ಸಾಗಿಸಬಾರದು. ಒಂದು ವೇಳೆ ಅಂತಹ ಪ್ರಕರಣಗಳು ಕಂಡು ಬಂದಲ್ಲಿ ವಾಹನ ಮಾಲೀಕ ಮತ್ತು ಚಾಲಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕೆ.ಎಸ್.ಆರ್.ಟಿ.ಸಿ. ಇಲಾಖೆಯಿಂದ ಅಪಘಾತಗಳನ್ನು ತಡೆಯಲು ಚಾಲಕರಿಗೆ ನೀಡಿರುವ ತರಬೇತಿ ಬಗ್ಗೆ ವಿಭಾಗೀಯ ನಿಯಂತ್ರಣಾಧಿಕಾರಿಗಳಿಂದ ಮಾಹಿತಿ ಪಡೆದರು.

ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ. ಮಾತನಾಡಿ,ಜಿಲ್ಲೆಯಲ್ಲಿ ಅತಿಯಾದ ವೇಗ, ಚಾಲಕರ ನಿರ್ಲಕ್ಷ್ಯ, ಕುಡಿದು ವಾಹನ ಚಾಲನೆ ಮಾಡುತ್ತಿರುವುದರಿಂದ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿವೆ. ಜಿಲ್ಲೆಯಲ್ಲಿ ಒಟ್ಟು 260 ವಾಹನಗಳ ಪರವಾನಗಿಯನ್ನು ರದ್ದುಪಡಿಸಲಾಗಿದ್ದು, ಅದರಲ್ಲಿ 82 ಡ್ರಂಕ್ ಅಂಡ್ ಡ್ರೈವ್ ಪ್ರಕರಣಗಳು ದಾಖಲಾಗಿವೆ. ಡ್ರಂಕ್ ಅಂಡ್ ಡ್ರೈವ್ ಮಾಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಕುಡಿದು ವಾಹನ ಚಾಲನೆ ಮಾಡುವ ಚಾಲಕರ ವಾಹನ ಪರವಾನಗಿಯನ್ನು ರದ್ದು ಮಾಡುವಂತೆ ಆರ್.ಟಿ.ಒ ಅಧಿಕಾರಿಗೆ ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆ, ಮಹಾನಗರ ಪಾಲಿಕೆ ಆಯುಕ್ತ ಬಿ.ವಿ. ಆಶ್ವಿಜ, ಉಪ ವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಹೇಮಲತಾ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅತಿವೇಗ ಎಂದರೆ ನಿರ್ಲಕ್ಷ್ಯದ ಚಾಲನೆ ಅಲ್ಲ: ಹೈಕೋರ್ಟ್‌
‘ಜಾಹೀರಾತಲ್ಲಿ ಗಾಂಧೀಜಿ ಬಳಕೆ ಗಾಂಧೀಜಿಯರ ಮೌಲ್ಯಗಳ ಹತ್ಯೆ’