ಗದಗ: ಜನತಾ ದರ್ಶನವು ಸಾರ್ವಜನಿಕರ ಅಹವಾಲುಗಳಿಗೆ ತ್ವರಿತ ಪರಿಹಾರ ಒದಗಿಸುವ ಮಹತ್ವದ ವೇದಿಕೆ ಆಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಸಮರ್ಪಕವಾಗಿ, ಶಿಸ್ತಿನೊಂದಿಗೆ ಆಯೋಜಿಸಬೇಕು. ಯಾವುದೇ ತೊಂದರೆ ಉಂಟಾಗದಂತೆ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬ ಅರ್ಜಿದಾರರಿಗೂ ಸರಿಯಾದ ಮಾರ್ಗದರ್ಶನ ನೀಡಬೇಕು ಹಾಗೂ ಅವರ ಅರ್ಜಿಗಳನ್ನು ತಕ್ಷಣ ದಾಖಲಿಸಿ ಸಂಬಂಧಿಸಿದ ಇಲಾಖೆಗೆ ರವಾನಿಸುವ ವ್ಯವಸ್ಥೆ ಇರಬೇಕು ಎಂದರು.ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯ ಬಾಕಿ ಅರ್ಜಿಗಳ ವಿವರಗಳನ್ನು ಪೂರ್ವಭಾವಿಯಾಗಿ ಪರಿಶೀಲಿಸಿ, ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ನೀಡುವ ಮನೋಭಾವದಿಂದ ಕಾರ್ಯನಿರ್ವಹಿಸಬೇಕು. ಅರ್ಜಿಗಳ ವಿಲೇವಾರಿ ಪ್ರಕ್ರಿಯೆ ಪಾರದರ್ಶಕವಾಗಿದ್ದು, ಸಮಯಬದ್ಧವಾಗಿ ಪೂರ್ಣಗೊಳ್ಳಬೇಕು ಎಂದರು.
ಜನತಾ ದರ್ಶನ ಕಾರ್ಯಕ್ರಮವು ಜನರಲ್ಲಿ ಸರ್ಕಾರದ ಮೇಲೆ ವಿಶ್ವಾಸ ಹೆಚ್ಚಿಸುವ ಪ್ರಮುಖ ಅವಕಾಶವಾಗಿರುವುದರಿಂದ, ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಫೆ. 27ರಂದು ಬೆಳಗ್ಗೆ 10ರಿಂದ ಸಂಜೆ 5ರ ವರೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಜರುಗುವ ಜನತಾ ದರ್ಶನ ಕಾರ್ಯಕ್ರಮದಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಹಾಜರಾಗಿ ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕೆಂದರು.ಈ ವೇಳೆ ಜನತಾ ದರ್ಶನ ಕುರಿತು ವಿವಿಧ ಇಲಾಖೆಗಳಿಂದ ಸ್ವೀಕೃತವಾದ ಅರ್ಜಿಗಳ ವಿವರ, ಕೈಗೊಂಡ ಕ್ರಮಗಳ ಕುರಿತು ಚರ್ಚೆ ನಡೆಸಲಾಯಿತು.ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್.ಕೆ.ಆರ್, ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ., ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧ ಇಲಾಖೆಯ ಉಪನಿರ್ದೇಶಕಿ ಪದ್ಮಾವತಿ ಜಿ. ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.