ಎನ್ಡಿಆರ್ಎಫ್ ಇನ್ಸ್ಪೆಕ್ಟರ್ ಅಜಯ ಕುಮಾರ್ ಸಲಹೆ
ಕನ್ನಡಪ್ರಭ ವಾರ್ತೆ ನವಲಿ
ಕನಕಗಿರಿ ತಾಲೂಕಿನ ಚಿಕ್ಕಡಂಕನಕಲ್ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಬೆಟಾಲಿಯನ್ 10ನೇ ತಂಡದಿಂದ ವಿಪತ್ತು ನಿರ್ವಹಣೆಯ ಅಣುಕು ಪ್ರದರ್ಶನ ಹಾಗೂ ಜಾಗೃತಿ ಕಾರ್ಯಕ್ರಮ ಜರುಗಿತು.ಎನ್.ಡಿ.ಆರ್.ಎಫ್. ಇನ್ಸ್ಪೆಕ್ಟರ್ ಅಜಯಕುಮಾರ್ ಮಾತನಾಡಿ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಬೆಟಾಲಿಯನ್ 10ನೇ ತಂಡದಿಂದ ಸಂಭವನೀಯ ವಿಪತ್ತು, ಪ್ರವಾಹ ಸ್ಥಳಗಳಿಗೆ ಆಗಮಿಸಿ ಸಮುದಾಯ ಜಾಗೃತಿ ಕಾರ್ಯಕ್ರಮ ಮಾಡುತ್ತಿದ್ದೇವೆ. ಕೊಪ್ಪಳ ಜಿಲ್ಲೆಯ ನದಿ ಪಾತ್ರದ ಗ್ರಾಮಗಳಲ್ಲಿ ಹಾಗೂ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಗುತ್ತಿದೆ. ಸಂಭವನೀಯ ಅತಿವೃಷ್ಟಿ ಹಾಗೂ ಅನಾವೃಷ್ಟಿ ಸಂದರ್ಭದಲ್ಲಿ ಏನು ಕ್ರಮ ಕೈಗೊಳ್ಳಬೇಕು ಎಂಬುದನ್ನು ಜನರು ತಿಳಿದುಕೊಳ್ಳಬೇಕು ಎಂದರು.
ಪ್ರಕೃತಿ ವಿಕೋಪ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಪ್ರಥಮ ಚಿಕಿತ್ಸೆ, ಪ್ರವಾಹ ರಕ್ಷಣೆ, ಪ್ರಕೃತಿ ವಿಕೋಪದಿಂದ ಆಗುವ ಅನಾಹುತ, ಅನಿಲ ಸೋರಿಕೆ ತಡೆಗಟ್ಟುವಿಕೆ, ಸುನಾಮಿ, ಭೂಕಂಪ, ಅಗ್ನಿ ಅವಘಡ ಹಾಗೂ ಸಿಡಿಲು ಬಡಿತದಿಂದ ರಕ್ಷಣೆ, ಕಟ್ಟಡ ಕುಸಿತ, ರಾಸಾಯನಿಕ ಪದಾರ್ಥಗಳಿಂದ ಆಗುವ ಅನಾಹುತಗಳು, ಇನ್ನಿತರ ಅನಾಹುತಗಳಿಂದ ತಪ್ಪಿಸಿಕೊಳ್ಳಲು ಸಾರ್ವಜನಿಕರು ಯಾವ ರೀತಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎನ್ನುವ ಕುರಿತು ಎನ್ಡಿಆರ್ಎಫ್ ತಂಡದ ಸದಸ್ಯ ವಜ್ರಚೇತನ ಮಾಹಿತಿ ನೀಡಿದರು.ಎನ್ಡಿಆರ್ಎಫ್ ತಂಡದ ಸದಸ್ಯರು ಅಣಕು ಪ್ರದರ್ಶನ ನೀಡಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ತಾಪಂ ಸಹಾಯಕ ನಿರ್ದೇಶಕಿ ಶರಪೊನ್ನಿಸಾ ಬೇಗಂ, ಚಿಕ್ಕಡಂಕನಕಲ್ ಗ್ರಾಪಂ ಅಧ್ಯಕ್ಷೆ ನೀಲಮ್ಮ, ಉಪಾಧ್ಯಕ್ಷ ರಾಮಚಂದ್ರಗೌಡ, ಎನ್.ಡಿ.ಆರ್.ಎಫ್. ತಂಡದ ಎಎಸ್ಐ ಸೋಮ್ ಬಿರ್ ಕುಮಾರ್, ಕಂದಾಯ ನಿರೀಕ್ಷಕ ಹನುಮಂತಪ್ಪ, ಪಿಡಿಒ ನಾಗಪ್ಪ ಹಾಜರಿದ್ದರು.