ಹಗರಿಬೊಮ್ಮನಹಳ್ಳಿ: ತಾಲೂಕಿನ ತಂಬ್ರಹಳ್ಳಿ ಗ್ರಾಮದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ೧೫೦ನೇ ಜಯಂತಿ ಅಂಗವಾಗಿ ಕೆಪಿಜಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಪರಿಸರ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದರು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಪಿಎಸ್ಐ ನಾಗರಾಜ್ ಕೊಟಗಿ, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಗಿಡಗಳನ್ನು ನೆಡುವುದಷ್ಟೇ ಸಾಕಾಗುವುದಿಲ್ಲ. ಅವುಗಳನ್ನು ಪೋಷಿಸಿ ಬೆಳೆಸುವ ಜವಾಬ್ದಾರಿಯನ್ನು ಎಲ್ಲರೂ ವಹಿಸಬೇಕು. ವಿದ್ಯಾರ್ಥಿಗಳು ಬಾಲ್ಯದಿಂದಲೇ ಪರಿಸರದ ಬಗ್ಗೆ ಕಾಳಜಿ ಬೆಳೆಸಿಕೊಂಡರೆ ಭವಿಷ್ಯದಲ್ಲಿ ಹಸಿರು ಮತ್ತು ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ. ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಕನಿಷ್ಠ ಒಂದು ಸಸಿಯನ್ನಾದರೂ ನೆಟ್ಟು ಅದರ ಆರೈಕೆ ಮಾಡುವ ಸಂಕಲ್ಪ ಮಾಡಬೇಕು ಎಂದು ತಿಳಿಸಿದರು.
ಜಿಪಂ ಮಾಜಿ ಸದಸ್ಯ ಅಕ್ಕಿ ತೋಟೇಶ್ ಮಾತನಾಡಿ, ದೇಶದ ಏಕೀಕರಣದ ಶಿಲ್ಪಿ ಸರ್ದಾರ್ ವಲ್ಲಭಭಾಯಿ ಪಟೇಲ್ ದೇಶಭಕ್ತಿ, ಶಿಸ್ತು ಮತ್ತು ರಾಷ್ಟ್ರೀಯ ಏಕತೆಯ ಪ್ರತೀಕವಾಗಿದ್ದರು. ಅವರ ಆದರ್ಶಗಳು ಇಂದಿನ ಯುವಜನತೆಗೆ ಸ್ಫೂರ್ತಿದಾಯಕವಾಗಿದ್ದು, ಅವರ ಜಯಂತಿಯ ಅಂಗವಾಗಿ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶ ಸಾರುತ್ತಿರುವುದು ಅತ್ಯಂತ ಅರ್ಥಪೂರ್ಣವಾಗಿದೆ ಎಂದರು.ಕೆಪಿಜಿ ಪ್ರೌಢಶಾಲೆಯ ಪ್ರಶಾಂತ, ಗಡ್ಡಿ ಚನ್ನಬಸವ ಹಾಗೂ ಶಾಲೆಯ ವಿದ್ಯಾರ್ಥಿಗಳು ಉತ್ಸಾಹದಿಂದ ಸಸಿ ನೆಡುವ ಕಾರ್ಯದಲ್ಲಿ ಪಾಲ್ಗೊಂಡರು. ಇದೇ ವೇಳೆ ನೆಟ್ಟ ಸಸಿಗಳ ಸಂರಕ್ಷಣೆ ಮಾಡುವ ಮೂಲಕ ಪರಿಸರ ಉಳಿಸುವ ಸಂಕಲ್ಪವನ್ನು ಎಲ್ಲರೂ ಕೈಗೊಂಡರು.