ಅರ್ಹತೆಗನುಗುಣವಾಗಿ ಅನುಮತಿ ಪಡೆದ ವೈದ್ಯಕೀಯ ಪದ್ದತಿಯಲ್ಲಿ ಮಾತ್ರ ಸಾರ್ವಜನಿಕರಿಗೆ ಆರೋಗ್ಯ ಸೇವೆಗಳನ್ನು ನೀಡಬೇಕು.
ಕೆಪಿಎಂಇ ನೊಂದಣಿ ಮತ್ತು ಕುಂದುಕೊರೆತೆ ನಿವಾರಣಾ ಪ್ರಾಧಿಕಾರದ ಸಭೆ
ಕನ್ನಡಪ್ರಭ ವಾರ್ತೆ ಕಾರವಾರ
ಜಿಲ್ಲೆಯಲ್ಲಿ ನಿಯಮಬಾಹಿರವಾಗಿ ವೈದ್ಯಕೀಯ ವೃತ್ತಿ ನಡೆಸುತ್ತಿರುವ ನಕಲಿ ವೈದ್ಯರ ವಿರುದ್ಧ ಬರುವ ದೂರುಗಳ ಕುರಿತಂತೆ ಸಮಗ್ರವಾಗಿ ಪರಿಶೀಲನೆ ನಡೆಸಿ, ಅವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೆಪಿಎಂಇ ನೊಂದಣಿ ಮತ್ತು ಕುಂದುಕೊರೆತೆ ನಿವಾರಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ನಕಲಿ ವೈದ್ಯರ ವಿರುದ್ಧ ವಿಚಾರಣೆ ನಡೆಸಿ ಕಾನೂನಿನ ನಿಬಂಧನೆಗಳ ಅನುಸಾರ ಕ್ರಮ ಜರುಗಿಸಲು ಜಿಲ್ಲಾ ಮಟ್ಟದ ವಿಶೇಷ ಪಡೆ ರಚನೆ ಮಾಡಿದ ಜಿಲ್ಲಾಧಿಕಾರಿಗಳು, ನಕಲಿ ವೈದ್ಯರು ಮತ್ತು ಕ್ಲಿನಿಕ್ಗಳ ವಿರುದ್ಧ ಗರಿಷ್ಠ ಪ್ರಮಾಣದ ದಂಡ ವಿಧಿಸಿ, ಕ್ಲಿನಿಕ್ ಗಳನ್ನು ಬಂದ್ ಮಾಡುವ ಜೊತೆಗೆ ಇಂತಹ ಪ್ರಕರಣಗಳನ್ನು ಮತ್ತೂ ಮುಂದುವರೆಸುವವರ ವಿರುದ್ಧ ಪ್ರಕರಣ ದಾಖಲಿಸುವಂತೆ ನಿರ್ದೇಶನ ನೀಡಿದರು.
ಅರ್ಹತೆಗನುಗುಣವಾಗಿ ಅನುಮತಿ ಪಡೆದ ವೈದ್ಯಕೀಯ ಪದ್ದತಿಯಲ್ಲಿ ಮಾತ್ರ ಸಾರ್ವಜನಿಕರಿಗೆ ಆರೋಗ್ಯ ಸೇವೆಗಳನ್ನು ನೀಡಬೇಕು, ಅನುಮತಿಯಿಲ್ಲದ ವೈದ್ಯಕೀಯ ಪದ್ದತಿಯಲ್ಲಿ ಚಿಕಿತ್ಸೆ ಮತ್ತು ಔಷಧಗಳನ್ನು ನೀಡುವುದು ಕಂಡುಬಂದಲ್ಲಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ ಅವರು ಜಿಲ್ಲೆಯಾದ್ಯಂತ ಎಲ್ಲಾ ತಾಲೂಕುಗಳಲ್ಲಿ ಖಾಸಗಿ ಕ್ಲಿನಿಕ್ಗಳು, ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್ಗಳಲ್ಲಿ ನಕಲಿ ವೈದ್ಯರು ಇರುವ ಬಗ್ಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ನಿಯಮಿತವಾಗಿ ಪರಿಶೀಲನೆ ನಡೆಸಿ, ದೃಢಪಡಿಸಿಕೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ಏ. 2026ರಿಂದ ಇದುವರೆಗೆ ಕೆಪಿಎಂಇ ಕಾಯ್ದೆ ಉಲ್ಲಂಘಿಸಿರುವ 7 ನಕಲಿ ವೈದ್ಯರ ವಿರುದ್ಧ ಕ್ರಮ ಕೈಗೊಂಡು, ಅವರ ಕ್ಲಿನಿಕ್ ಮುಚ್ಚಿಸಲಾಗಿದ್ದು, ಒಟ್ಟು ₹1,45,000 ದಂಡ ವಸೂಲು ಮಾಡಲಾಗಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಂಜಯ ದೊಡ್ಡಮನಿ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಜಗದೀಶ ಯಾಜಿ, ಆರ್ಥೋಪೆಡಿಕ್ ವೈದ್ಯಕೀಯ ಸಂಘದ ಅಧ್ಯಕ್ಷ ಡಾ. ನಿತಿನ್ ಪಿಕಳೆ, ಐಎಂಎ ಅಧ್ಯಕ್ಷ ಡಾ. ಸುರೇಶ್ ಭಟ್, ಮಹಿಳಾ ಸಾಮಾಜಿಕ ಕಾರ್ಯಕರ್ತೆ ಯಶೋಧ ಹೆಗಡೆ, ವಕೀಲ ಡಾ. ಕೃಷ್ಣಾನಂದ ಬಿ. ನಾಯ್ಕ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಿನಿ ಬೊರಕರ್ ಮತ್ತಿತರರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.