ಮಹಿಳಾ ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ

KannadaprabhaNewsNetwork |  
Published : Jun 14, 2025, 12:18 AM IST
ಜಿಪಂ ಸಿಇಒ ರಾಹುಲ ಶಿಂಧೆ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನ ಸಭೆ ನಡೆಸಿದರು | Kannada Prabha

ಸಾರಾಂಶ

ಬಾಲ್ಯವಿವಾಹ ತಡೆಗಟ್ಟುವಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜವಾಬ್ದಾರಿ ಅತೀ ಮಹತ್ವದಾಗಿದೆ

ಕನ್ನಡಪ್ರಭ ವಾರ್ತೆ ಬೆಳಗಾವಿ

ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು. ಬಾಲ್ಯವಿವಾಹ ತಡೆಗಟ್ಟುವಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜವಾಬ್ದಾರಿ ಅತೀ ಮಹತ್ವದಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ತಿಳಿಸಿದರು.

ಜಿಪಂ ಸಭಾಂಗಣದಲ್ಲಿ ಗುರುವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಾಲ್ಯ ವಿವಾಹ ತಡೆಗಟ್ಟಲು ಸಂಬಂಧಿಸಿದ ಇಲಾಖೆಗಳು ತಮ್ಮ ಜವಾಬ್ದಾರಿ ಅರಿತು ಕಾರ್ಯ ಪ್ರವೃತ್ತರಾಗಬೇಕು. ಜಿಲ್ಲೆಯಲ್ಲಿ ಬಾಲ್ಯವಿವಾಹ ಜರುಗಿರುವ ಪ್ರಕರಣಗಳು ಕಂಡುಬಂದಲ್ಲಿ ಸಂಬಂಧಿಸಿದವರ ಮೇಲೆ ಶಿಸ್ತು ಕ್ರಮವಹಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ಪ್ರಕರಣಗಳು ಕಂಡುಬಂದಲ್ಲಿ ಇದಕ್ಕೆ ಕಾರಣಗಳನ್ನು ಹುಡುಕಿ ಅನೈತಿಕ ಸಾಗಾಣಿಕೆಗೆ ಕಡಿವಾಣ ಹಾಕಲು ಅಧಿಕಾರಿಗಳು, ಸಿಬ್ಬಂದಿ ಮುಂದಾಗಬೇಕು. ಈ ಕಾರ್ಯದಲ್ಲಿ ಸಂಬಂಧಿಸಿದ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು ಎಂದರು. ಸ್ವಾಧಾರ ಗೃಹಗಳಲ್ಲಿ ದಾಖಾಲಾಗಿರುವ ನಿವಾಸಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡಿ ಪುನರ್ವಸತಿ ನೀಡುವ ಕಾರ್ಯವಾಗಬೇಕು. ಈ ಕುರಿತು ಸಂಬಂಧಿಸಿದ ಅಧಿಕಾರಿಗಳು ಪರಿಶೀಲಿಸಿ ವರದಿ ನೀಡಲು ಸೂಚಿಸಿದರು.

ಚಿಕ್ಕೋಡಿಯಲ್ಲಿ ಪ್ರಾರಂಭಾವಗಿರುವ ಸಖಿ ಒನ್ ಘಟಕದಲ್ಲಿ ಪ್ರಕರಣಗಳ ಸಂಖ್ಯೆ ತುಂಬಾ ಕಡಿಮೆಯಾಗಿದ್ದು, ಸಖಿ ಒನ್ ಘಟಕ ಪ್ರಾರಂಭವಾಗಿರುವ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳುವುದರ ಮೂಲಕ ಜಾಗೃತಿ ಮೂಡಿಸಲು ತಿಳಿಸಿದರು.

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಉದ್ಯೋಗಸ್ಥ ಮಹಿಳೆಯರ ವಸತಿ ನಿಲಯಗಳ ಕುರಿತು ಪ್ರಚಾರ ಕೈಗೊಳ್ಳಬೇಕು. ಸ್ತ್ರೀ ಶಕ್ತಿ ಗುಂಪುಗಳಿಗಾಗಿ ಸವಿರುಚಿ ಕ್ಯಾಂಟಿನ್ ಪ್ರಾರಂಭಕ್ಕಾಗಿ ಒದಗಿಸಲಾದ ವಾಹನಗಳ ಮಾಹಿತಿ ಪಡೆದು ಅವರು ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕಳ ತಡೆಗಟ್ಟುವಿಕೆ ಕುರಿತು ಆಂತರಿಕ ದೂರು ನಿವಾರಣ ಸಮಿತಿಗಳು ರಚನೆಯಾಗುವುದರ ಕುರಿತು ಪರಿಶೀಲಿಸಬೇಕು. ಎಲ್ಲ ಇಲಾಖೆಗಳಲ್ಲಿ ಸಮಿತಿ ರಚನೆಯಾಗಿರುವುದರ ಕುರಿತು ಹದಿನೈದು ದಿನದೊಳಗಾಗಿ ವರದಿ ನೀಡಲು ಸೂಚಿಸಿದರು.

ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳನ್ನು ಪಿಎಂಜೆಜೆಬಿವೈ ಹಾಗೂ ಪಿಎಂಎಸ್‌ಪಿವೈ ಯೋಜನೆಗಳ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ಕ್ರಮ ವಹಿಸಲು ತಿಳಿಸಿದರು. ಜಿಲ್ಲೆಯಲ್ಲಿ ಬಾಲ ಆಧಾರ್‌ ನೋಂದಣಿ ಕಾರ್ಯ ಕುಂಠಿತವಾಗಿದ್ದು, ಅಂಗನವಾಡಿ ಕೇಂದ್ರದಲ್ಲಿನ ಮಕ್ಕಳ ಬಾಲ ಆಧಾರ್‌ ಮಾಡಿಸಲು ರೂಪುರೇಷೆಗಳನ್ನು ಸಿದ್ಧಪಡಿಸಿ ಅಭಿಯಾನದ ರೂಪದಲ್ಲಿ ಬಾಲ ಆಧಾರ್‌ ನೋಂದಣಿ ಕಾರ್ಯಕ್ಕೆ ಕ್ರಮಕೈಗೊಳ್ಳುವಂತೆ ಶಿಂಧೆ ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಆರ್.ನಾಗರಾಜ್ ಇಲಾಖೆ ವಿವಿಧ ಯೋಜನೆಗಳ ಮಾಹಿತಿ ನೀಡಿದರು. ಸಭೆಯಲ್ಲಿ ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಶ್ರುತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಈಶ್ವರ ಗಡಾದಿ, ಜಿಪಂ ಯೋಜನಾ ನಿರ್ದೆಶಕ ರವಿ ಬಂಗಾರೆಪ್ಪನವರ, ಮಹಿಳಾ ಅಭಿವೃದ್ಧಿ ಅಧಿಕಾರಿ ಅರ್ಚನಾ ಮತ್ತು ವಿವಿಧ ಇಲಾಖೆ ಅಧಿಕಾರಿಗಳು, ತಾಲೂಕು ಶಿಶು ಅಭಿವೃದ್ಧಿ ಯೊಜನಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಗವಂತನ ಶಕ್ತಿ ಪಡೆದವರಿಂದ ಡಿಕೆಶಿ ಸಿಎಂ ಆಗುವ ದಿನಾಂಕ ನಿಗದಿ : ಇಕ್ಬಾಲ್
ಜನ ನಂಗೆ ಇನ್ನೊಂದು ಅವಕಾಶ ಕೊಡಲಿ : ಎಚ್ಡಿಕೆ