ಭದ್ರಾವತಿ: ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಬುಧವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಸಚಿವರು ಭದ್ರಾಕಾಲೋನಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿ ಖಾಲಿ ಇರುವ ಜಾಗ ಪರಿಶೀಲನೆ ನಡೆಸಿ ತೆರಳಿದರು.ಶಾಸಕರ ಮನವಿ :
ಪ್ರಸ್ತುತ ೧೦೦ ಹಾಸಿಗೆಯುಳ್ಳ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಪ್ರತಿದಿನ ೧೦೦೦ಕ್ಕೂ ಹೆಚ್ಚು ರೋಗಿಗಳು ಚಿಕಿತ್ಸೆಗೆ ಬರುತ್ತಿದ್ದಾರೆ. ಈ ಆಸ್ಪತ್ರೆಯಲ್ಲಿ ಜಾಗದ ಕೊರತೆ ಇದ್ದು, ಅಲ್ಲದೆ ಹಲವು ಸಮಸ್ಯೆಗಳಿಂದ ಕೂಡಿದೆ. ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಭದ್ರಾ ಕಾಲೋನಿ ಪ್ರಾಥಮಿಕ ಆರೋಗ್ಯ ಕೇಂದ್ರದ ಪಕ್ಕದಲ್ಲಿ ಸುಮಾರು ೮ ಎಕರೆ ೦೫ ಗುಂಟೆ ಜಾಗವಿದ್ದು, ಈ ಜಾಗದಲ್ಲಿ ಹೊಸದಾಗಿ ೧೫೦ ಹಾಸಿಗೆಯ ಆಸ್ಪತ್ರೆ ಹಾಗೂ ತಾಯಿ ಮತ್ತು ಮಗು ಆಸ್ಪತ್ರೆ ಮಂಜೂರು ಮಾಡಬೇಕು.ತಾಲೂಕಿನ ದೊಣಬಘಟ್ಟ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಿಂಗನಮನೆ(ಬಿ.ಆರ್ ಪ್ರಾಜೆಕ್ಟ್) ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಬೇಕು. ನಗರಸಭೆ ವಾರ್ಡ್ ನಂ.೧ರ ಜೇಡಿಕಟ್ಟೆ ಹಾಗೂ ವಾರ್ಡ್ ನಂ.೨೫ರ ಬೊಮ್ಮನಕಟ್ಟೆ ಮತ್ತು ಬಾರಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರೇಹಳ್ಳಿಯಲ್ಲಿ ಹೊಸದಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸುವಂತೆ ಶಾಸಕರು ಮನವಿ ಮಾಡಿದ್ದಾರೆ.
ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಸ್ಥಳೀಯರಿಂದ ದೂರು:ತಾಲೂಕಿನ ಸರ್ಕಾರಿ ಆಸ್ಪತ್ರೆಗಳ ನ್ಯೂನ್ಯತೆಗಳಿಗೆ ಸಂಬಂಧಿಸಿದಂತೆ ಸಚಿವರಿಗೆ ದೂರುಗಳು ಸಲ್ಲಿಕೆಯಾಗಿದವು. ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಸಮರ್ಪಕವಾಗಿ ಚಿಕಿತ್ಸೆ ನೀಡುತ್ತಿಲ್ಲ. ತುರ್ತು ಚಿಕಿತ್ಸೆಗಾಗಿ ಬಂದವರನ್ನು ಸಹ ಗಂಟೆಗಟ್ಟಲೆ ಕಾಯಿಸಲಾಗುತ್ತಿದ್ದು, ಇದರಿಂದಾಗಿ ರೋಗಿಗಳು ನರಳುವ ಸ್ಥಿತಿಗೆ ತಲುಪಿ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಸಿ ತೀರ್ಥೇಶ್ ದೂರು ಸಲ್ಲಿಸಿದ್ದಾರೆ.
ಶಾಸಕ ಬಿ.ಕೆ.ಸಂಗಮೇಶ್ವರ್, ನಗರಸಭೆ ಅಧ್ಯಕ್ಷ ಮಣಿ ಎಎನ್ಎಸ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಶಿವಕುಮಾರ್, ತಹಸೀಲ್ದಾರ್ ಕೆ.ಆರ್.ನಾಗರಾಜು, ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ.ಅಶೋಕ್, ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಶಂಕರಪ್ಪ, ನಗರಸಭೆ ಪೌರಾಯುಕ್ತ ಪ್ರಕಾಶ್ ಚನ್ನಪ್ಪನವರ್, ಸದಸ್ಯರಾದ ಬಿ.ಕೆ.ಮೋಹನ್, ಚನ್ನಪ್ಪ, ಬಸವರಾಜ ಬಿ.ಆನೇಕೊಪ್ಪ, ಲತಾ ಚಂದ್ರಶೇಖರ್, ಸರ್ವಮಂಗಳ ಭೈರಪ್ಪ ಮತ್ತಿತರರಿದ್ದದರು.