ತಾಪಂ ಸಭಾಂಗಣದಲ್ಲಿ ಗ್ರೇಡ್ 2 ತಹಸೀಲ್ದಾರ್ ಮಂಜುನಾಥ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಕನ್ನಡಪ್ರಭ ವಾರ್ತೆ, ಕಡೂರು
ಗುರುವಾರ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗ್ರೇಡ್ 2 ತಹಸೀಲ್ದಾರ್ ಮಂಜುನಾಥ್ ಅಧ್ಯಕ್ಷತೆಯಲ್ಲಿ ನಡೆದ ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಸಭೆಯಲ್ಲಿ ತಾಪಂ ಕಾರ್ಯ ನಿರ್ವಹಣಾಧಿಕಾರಿ ಸಿ.ಆರ್. ಪ್ರವೀಣ್ ಅಧಿಕಾರಿಗಳಿಗೆ ಸೂಚನೆ ನೀಡಿ ಶಾಸಕ ಕೆ.ಎಸ್. ಆನಂದ್ ಅವರ ಸಲಹೆ, ಮಾರ್ಗದರ್ಶನದ ಮೇರೆಗೆ ಈ ಭಾರಿ ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ 76 ನೇ ಗಣರಾಜ್ಯೋತ್ಸವವನ್ನು ವಿಶಿಷ್ಟವಾಗಿ ಆಚರಿಸಲು ನಿರ್ಧರಿಸಲಾಗಿದೆ.
ಜ. 26ರ ಬೆಳಿಗ್ಗೆ ಗಣಪತಿ ಪೆಂಡಾಲ್ ನಿಂದ ಸ್ಥಬ್ದ ಚಿತ್ರಗಳು, ಡೊಳ್ಳು, ವೀರಗಾಸೆ, ಕಲಾ ತಂಡಗಳೊಂದಿಗೆ ಜನ ಪ್ರತಿನಿಧಿಗಳು, ಅಧಿಕಾರಿಗಳು, ಪೊಲೀಸರು, ಶಾಲಾ ಮಕ್ಕಳೊಂದಿಗೆ ಮೆರವಣಿಗೆ ಮೂಲಕ ತಾಲೂಕು ಕ್ರೀಡಾಂಗಣದ ವೇದಿಕೆಗೆ ಕರೆತರಲಾಗುವುದು ಕಡ್ಡಾಯವಾಗಿ ಎಲ್ಲ ಅಧಿಕಾರಿಗಳು, ನೌಕರರು, ಶಾಲಾ ಮಕ್ಕಳು ಭಾಗವಹಿಸಬೇಕು ಎಂದು ಸೂಚಿಸಲಾಯಿತು.ತಾಲೂಕು ಕಚೇರಿ, ತಾಪಂ ಸೇರಿ ವಿವಿಧ ಇಲಾಖೆ ಕಟ್ಟಡಗಳು, ಶಿವಮೊಗ್ಗ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಾಗುವ ಪಟ್ಟಣದ ರಸ್ತೆಗಳ ಎರಡೂ ಬದಿ ವಿದ್ಯುತ್ ದೀಪದ ಅಲಂಕಾರ ಮಾಡಲು ಕ್ರಮ ಕೈಗೊಳ್ಳಬೇಕು. ವಿಶೇಷವಾಗಿ ನಡೆಯುವ ಗಣರಾಜ್ಯೋತ್ಸವದಲ್ಲಿ ಆಯಾ ಇಲಾಖೆಗಳ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿ ನಿರ್ವಹಿಸಿ ಬೆಳಿಗ್ಗೆ ಮತ್ತು ಸಂಜೆ ನಡೆವ ರಾಷ್ಟ್ರೀಯ ಹಬ್ಬದ ಆಚರಣೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.
ವಿವಿಧ ಇಲಾಖೆ ಅಧಿಕಾರಿಗಳಾದ ಡಾ. ಉಮೇಶ್, ಡಾ. ರವಿಕುಮಾರ್, ನಾಗರತ್ನ, ರವಿಕುಮಾರ್, ಶಾಸಕರ ಆಪ್ತ ಕಾರ್ಯದರ್ಶಿ ಮಂಜುನಾಥ್, ಲಿಂಗರಾಜ್, ರೊ.ರಾಘವೇಂದ್ರ ಮತ್ತಿತರರು ಹಾಜರಿದ್ದರು.