ಜಿಲ್ಲಾ ಮಟ್ಟದಲ್ಲಿ ಕಾಣೆಯಾದ ಮಕ್ಕಳ ಪತ್ತೆಗೆ ಕಾರ್ಯಪಡೆ ರಚನೆ: ನ್ಯಾ. ರಾಜೇಶ್ ಹೊಸಮನೆ

KannadaprabhaNewsNetwork |  
Published : Jul 21, 2025, 12:00 AM IST
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಜರುಗಿದ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಮಕ್ಕಳ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂಸೇವಾ ಸಂಸ್ಥೆಗಳ ಮುಖ್ಯಸ್ಥರ ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಮಾತನಾಡಿದರು.  | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಅಪಹರಣ, ಕಾಣೆಯಾದ ಮಕ್ಕಳ ಬಗ್ಗೆ ವಿವಿಧ ಇಲಾಖೆಗಳೊಂದಿಗೆ ಪರಿಶೀಲನೆ ನಡೆಸಲಾಗುತ್ತಿದ್ದು, ಇತ್ಯರ್ಥವಾಗದೇ ಬಾಕಿ ಇರುವ ಪ್ರಕರಣಗಳ ಮಾಹಿತಿಯನ್ನು ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರಕ್ಕೆ ಪ್ರತಿ ಮಾಹೆ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಕಾರ್ಯಪಡೆ ರಚಿಸಲಾಗಿದೆ

ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರು, ಪ್ಯಾರಾಲೀಗಲ್ ಸ್ವಯಂ ಸೇವಕರೊಂದಿಗೆ ಸಭೆ

ಕನ್ನಡಪ್ರಭ ವಾರ್ತೆ ಬಳ್ಳಾರಿ

ಜಿಲ್ಲೆಯಲ್ಲಿ ಅಪಹರಣ, ಕಾಣೆಯಾದ ಮಕ್ಕಳ ಬಗ್ಗೆ ವಿವಿಧ ಇಲಾಖೆಗಳೊಂದಿಗೆ ಪರಿಶೀಲನೆ ನಡೆಸಲಾಗುತ್ತಿದ್ದು, ಇತ್ಯರ್ಥವಾಗದೇ ಬಾಕಿ ಇರುವ ಪ್ರಕರಣಗಳ ಮಾಹಿತಿಯನ್ನು ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರಕ್ಕೆ ಪ್ರತಿ ಮಾಹೆ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಕಾರ್ಯಪಡೆ ರಚಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್.ಹೊಸಮನೆ ಹೇಳಿದರು.

ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಮಕ್ಕಳ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರು, ಪ್ಯಾರಾಲೀಗಲ್ ಸ್ವಯಂ ಸೇವಕರೊಂದಿಗೆ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿ ಕಾಣೆಯಾದ ಮಕ್ಕಳ ಮನೆಗೆ ಭೇಟಿ ನೀಡಿ ಪ್ರಸ್ತುತ ವಸ್ತುಸ್ಥಿತಿಗಳ ಕುರಿತು ಮಾಹಿತಿ ಪಡೆಯಬೇಕು. ಜಿಲ್ಲೆಯಲ್ಲಿ ಸರ್ಕಾರಿ ಮತ್ತು ಸರ್ಕಾರೇತರ ಶಾಲಾ-ಕಾಲೇಜು, ವಸತಿ ನಿಲಯಗಳಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮಹಿಳೆಯರು ಮತ್ತು ಮಕ್ಕಳ ಕಾವಲು ಸಭೆ ಹಮ್ಮಿಕೊಂಡು ಆ ಸಭೆಯಲ್ಲಿ ಕಾಣೆಯಾದ ಮಕ್ಕಳ ಕುರಿತು ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಪೊಲೀಸ್ ಉಪ ಅಧೀಕ್ಷಕ ನವೀನ್ ಕುಮಾರ್ ಮಾತನಾಡಿ, ಎಲ್ಲಾ ಠಾಣೆಯ ಪೊಲೀಸ್ ಅಧಿಕಾರಿಗಳು ಹೆಚ್ಚಿನ ನಿಗಾವಹಿಸಿ ಕಾಣೆಯಾದ ಮಕ್ಕಳ ಕುರಿತು ಪತ್ತೆ ಹಚ್ಚಲು ಕ್ರಮವಹಿಸಬೇಕು. ಈ ಕುರಿತು ಪೊಲೀಸ್ ಇಲಾಖೆ ವತಿಯಿಂದ ತೆರೆದ ಮನೆ ಕಾರ್ಯಕ್ರಮವನ್ನು ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಹಮ್ಮಿಕೊಂಡು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಕಾಣೆಯಾದ ಮಕ್ಕಳ ಕುರಿತು ಈಗಾಗಲೇ ಘಟಕದಿಂದ ಜಾಗೃತಿ ಕಾರ್ಯಕ್ರಮ ಮತ್ತು ತರಬೇತಿ ಹಮ್ಮಿಕೊಳ್ಳಲಾಗುತ್ತಿದ್ದು, ಮಕ್ಕಳು ಕಾಣೆಯಾದ ತಕ್ಷಣ ಮಕ್ಕಳ ಸಹಾಯವಾಣಿ 1098 ಅಥವಾ 112 ಕರೆ ಮಾಡಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಳೆ ನಾಗಪ್ಪ ಹೇಳಿದರು.

ಬಳಿಕ ಮಕ್ಕಳ ಸಹಾಯವಾಣಿಯ ವಿನ್ಯಾಸಗೊಂಡ ಹೊಸ ಲೋಗೋ ಹೊಂದಿರುವ ಪೋಸ್ಟರ್ ಅನ್ನು ಗಣ್ಯರು ಬಿಡುಗಡೆಗೊಳಿಸಿದರು.

ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಉಮಾದೇವಿ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ವಿಜಯಲಕ್ಷ್ಮಿ ಮೈದೂರು, ಜಿಲ್ಲಾ ಬಾಲನ್ಯಾಯ ಮಂಡಳಿಯ ಸದಸ್ಯರಾದ ಪುಷ್ಪಲತಾ, ಮುನಿಯಪ್ಪ, ಮಕ್ಕಳ ವಿಶೇಷ ಪೊಲೀಸ್ ಘಟಕದ ಮುಖ್ಯಸ್ಥ ಚಂದ್ರಕಾಂತ್ ನಂದಾರೆಡ್ಟಿ, ಮಾನವ ಕಳ್ಳಸಾಗಣಿಕೆ ವಿರೋಧಿ ಘಟಕದ ಪೊಲೀಸ್ ಅಧಿಕಾರಿ ರಮೇಶ್ ಕುಲಕರ್ಣಿ, ಪ್ಯಾರಾಲೀಗಲ್ ವಾಲಂಟಿಯರ್ಸ್ ಆನಂದ್, ಶಿಲ್ಪಾ, ರೀಡ್ಸ್ ಸಂಸ್ಥೆಯ ತಿಪ್ಪೇಸ್ವಾಮಿ, ರೀಚ್ ಸಂಸ್ಥೆಯ ಹನುಮಂತಪ್ಪ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳಾದ ಸಿ.ಈಶ್ವರ ರಾವ್, ಡಿ.ಜಿ.ಮಂಜುನಾಥ, ಚನ್ನಬಸಪ್ಪ ಪಾಟೀಲ್ ಮತ್ತು ಮಕ್ಕಳ ವಿಶೇಷ ಪೊಲೀಸ್ ಘಟಕದ ಅಧಿಕಾರಿಗಳಾದ ಲಲಿತಮ್ಮ, ರಾಜು ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಸಕ್ಕೆ ಬೆಂಕಿ: ಹೊಗೆಯಿಂದ ಮನೆಯಲ್ಲಿ ಉಸಿರಾಡಲು ಆಗುತ್ತಿಲ್ಲ:ನಟಿ ಐಂದ್ರಿತಾ
ಕಟ್ಟುನಿಟ್ಟು ಮಾಡಿದರೂ ನಿಲ್ಲದ ಪರಪ್ಪನ ಅಗ್ರಹಾರ ಪವಾಡ