ಕನ್ನಡಪ್ರಭ ವಾರ್ತೆ ಗೌರಿಬಿದನೂರು
ಮಕ್ಕಳಿಗೆ ಪೋಷಕರು ಉನ್ನತ ಶಿಕ್ಷಣ ಕೊಡಿಸುವ ಗುರಿ ಹೊಂದಿರುವುದು ಹೆಚ್ಚು ಅರ್ಥಪೂರ್ಣವಾಗಿದ್ದರೂ ಶಿಕ್ಷಣದ ಜತೆಗೆ ಸಂಸ್ಕಾರ ಕಲಿಸಬೇಕಿದೆ. ಹೀಗಾದಾಗ ಮಾತ್ರ ಮಕ್ಕಳು ಪಡೆದ ಶಿಕ್ಷಣಕ್ಕೆ ಹೆಚ್ಚಿನ ಸಾರ್ಥಕತೆ ದೊರೆಯುತ್ತದೆ ಎಂದು ಜಗದ್ಗುರು ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ಅವರು ನಗರದ ಶ್ರೀ ವಿವೇಕಾನಂದ ಶಾಲೆಯಲ್ಲಿ ಆಯೋಜಿಸಿದ್ದ ವಿವೇಕೋತ್ಸವ ಸ್ಫೂರ್ತಿ ಕಾರ್ಯಕ್ರಮದಲ್ಲಿ ಶ್ರೀಗಳು ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಗುಣಾತ್ಮಕ ಶಿಕ್ಷಣ ಮತ್ತು ಉತ್ತಮ ಸಂಸ್ಕಾರ ನೀಡುವ ಮೂಲಕ ಮಕ್ಕಳನ್ನು ಸಮಾಜಕ್ಕೆ ಆಸ್ತಿಯನ್ನಾಗಿಸಿ, ಅವರ ಸಾಮರ್ಥ್ಯಕ್ಕೆ ತಕ್ಕಂತೆ ಕಲಿಕೆಗೆ ಪ್ರೋತ್ಸಾಹ ನೀಡಬೇಕು ಎಂದರು.ಜೀವನ ನಿರ್ವಹಣೆ ಕಲಿಸಿ
ಮಕ್ಕಳಿಗೆ ಕಲಿಕಾ ಹಂತದಲ್ಲಿ ಉತ್ತಮ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಕಲಿಸಬೇಕು, ಶಿಕ್ಷಕರು ಮತ್ತು ಪೋಷಕರು ವಿದ್ಯಾರ್ಥಿ ದೆಸೆಯಲ್ಲಿಯೇ ಕೇವಲ ಅಂಕಗಳಿಗೆ ಸೀಮಿತವಾದ ಶಿಕ್ಷಣಕ್ಕೆ ಒತ್ತು ಕೊಡದೆ, ಒತ್ತಡದಲ್ಲಿ ಎದೆಗುಂದದೆ ಜೀವನ ನಿರ್ವಹಣೆ ಮಾಡುವುದನ್ನು ಮಕ್ಕಳಿಗೆ ಕಲಿಸಬೇಕು ವಿದ್ಯಾರ್ಥಿಗಳು ಕಲಿತ ಪಾಠ ಮನನ ಮಾಡಿಕೊಳ್ಳಬೇಕು, ವಿದ್ಯೆಯಲ್ಲಿ ಆಸಕ್ತಿ ಇರಲಿ ಪರೀಕ್ಷೆಗಳಿಗೆ ಹೆದರಬಾರದು ಎಂದು ಕಿವಿಮಾತು ಹೇಳಿದರು.ಮೊಬೈಲ್ನಿಂದ ದುಷ್ಪರಿಣಾಮಆಡಳಿತ ಅಧಿಕಾರಿ, ಟಿ.ಎನ್. ರಾಮಪ್ಪ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿದೆ, ಪೋಷಕರು ಮಕ್ಕಳಿಗೆ ಮೊಬೈಲ್ ಗೀಳಿಗೆ ಬೀಳದಂತೆ ಎಚ್ಚರ ವಹಿಸಬೇಕು, ಆಧುನಿಕ ಯುಗದಲ್ಲಿ ಮೊಬೈಲ್ ಗಳು ಮಕ್ಕಳ ಮೇಲೆ ವ್ಯತಿರಿಕ್ತ ಪರಿಣಾಮಗಳು ಬೀರುತ್ತಿರುವುದು ಹೆಚ್ಚಾಗಿ ಕಂಡುಬರುತ್ತಿದೆ ಎಂದು ಕಿವಿಮಾತು ಹೇಳಿದರು.ಕಾರ್ಯದರ್ಶಿ, ನಂಜೇಗೌಡ ಮಾತನಾಡಿದರು. ಕಾರ್ಯಕ್ರಮದಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಹಾಗೂ ಕ್ರೀಡೆಗಳಲ್ಲಿ ಉತ್ತಮ ಪ್ರದರ್ಶನ ತೋರಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಬಿಇಒ ಶ್ರೀನಿವಾಸಮೂರ್ತಿ, ಪ್ರಾಂಶುಪಾಲ ಡಾ. ಶೈಲಜಾ ಸಪ್ತಗಿರಿ, ಜಿಪಂ ಮಾಜಿ ಅಧ್ಯಕ್ಷ ನರಸಿಂಹಮೂರ್ತಿ, ಪ್ರಾಂಶುಪಾಲ, ಮಂಜುನಾಥ್, ರವಿಕುಮಾರ್, ಡಾ. ಜಮುನಾಕೃಷ್ಣಮೂರ್ತಿ, ಚಂದ್ರಶೇಖರ್, ರಾಜಶೇಖರ್, ಆನಂದ್ ಡಾ. ಸಹನಾ ಹಾಗೂ ಪೋಷಕರು ಪಾಲ್ಗೊಂಡಿದ್ದರು.
.