ವಿಘ್ನೇಶ್ ಎಂ. ಭೂತನಕಾಡು
ಗೋಣಿಕೊಪ್ಪ ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕ ಹೆಚ್.ಕೆ ಕುಮಾರ್ ಶಾಲೆಯ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ರೂಪಿಸಿ, ಮಕ್ಕಳ ಶಿಕ್ಷಣದ ಉನ್ನತೀಕರಣಕ್ಕೆ ಶ್ರಮಿಸುತ್ತಿದ್ದಾರೆ.
ತಾನು ಕರ್ತವ್ಯ ನಿರ್ವಹಿಸುತ್ತಿರುವ ಶಾಲೆಯ ಭೌತಿಕ ಹಾಗೂ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದು, ತನ್ನದೇ ಆದ ಛಾಪು ಮೂಡಿಸಿ ತನ್ನನ್ನು ತಾನು ತೊಡಗಿಸಿಕೊಂಡು ಹಲವಾರು ವರ್ಷಗಳಿಂದ ತಾನು ಕರ್ತವ್ಯ ನಿರ್ವಹಿಸುತ್ತಿರುವ ಶಾಲೆಗಳಲ್ಲಿ ಹೊಸ ಬದಲಾವಣೆ ತಂದು ಅಭಿವೃದ್ಧಿಪಡಿಸಿದ್ದಾರೆ.ಮಕ್ಕಳಿಗೆ ಖಾಸಗಿ ಶಾಲೆಯಂತೆ ಗುಣಮಟ್ಟದ ಶಿಕ್ಷಣದ ಜೊತೆಗೆ ಸುರಕ್ಷಿತ, ಶಿಸ್ತಬದ್ಧ ಹಾಗೂ ಆರೋಗ್ಯಪೂರ್ಣ ವಾತಾವರಣ ಒದಗಿಸುತ್ತಿದ್ದಾರೆ. ಶಾಲಾ ವಾತಾವರಣ, ತರಗತಿ ಕೊಠಡಿಗಳು ಆಕರ್ಷಣೀಯವಾಗಿ ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿ ಮಾಡಿದ್ದಾರೆ. ಶಾಲೆಯಲ್ಲಿ ಸುಂದರ ಪಾರ್ಕ್, ಸ್ಮಾರ್ಟ್ ಕೊಠಡಿಗಳು, ಇಂಟರ್ ನೆಟ್, ಸಿಸಿ, ಕ್ಯಾಮೆರಾ, ಶುದ್ಧ ಕುಡಿಯವ ನೀರು, ಟೈಲ್ಸ್ ಅಳವಡಿಕೆ ಹೀಗೆ ಹಲವು ಕೆಲಸಗಳನ್ನು ಮಾಡಿ ಸರ್ಕಾರಿ ಶಾಲೆಯನ್ನು ಚೆಂದಗಾಣಿಸಿದ್ದಾರೆ.ಕಳೆದ ಬಾರಿ ನಡೆದ ಶತಮಾನೋತ್ಸವ ಸಂಭ್ರಮವನ್ನು ಅತ್ಯುತ್ತಮವಾಗಿ ಆಯೋಜಿಸುವ ಮೂಲಕ ರಾಜ್ಯಮಟ್ಟದಲ್ಲಿ ಗಮನ ಸೆಳೆಯಲಾಗಿತ್ತು. ಶಾಲೆಯಲ್ಲಿ, ಸಮಸ್ಯೆಯಾಗಿ ಕಾಡುತ್ತಿದ್ದ ಕುಡಿಯುವ ನೀರು, ಶುಚಿತ್ವ, ಕೊಠಡಿಗಳ ನವೀಕರಣ ಸೇರಿದಂತೆ ಹಲವಾರು ಕಾರ್ಯ ಯೋಜನೆಗಳನ್ನ ರೂಪಿಸುವ ಮೂಲಕ ಸರ್ಕಾರಿ ಶಾಲೆಯ ಮಕ್ಕಳ ಓದಿಗೆ ಪೂರಕ ವಾತಾವರಣ ನಿರ್ಮಿಸುವಲ್ಲಿ ಕುಮಾರ್ ಬಹುಮುಖ್ಯ ಪಾತ್ರ ನಿರ್ವಹಿಸುತ್ತಿದ್ದಾರೆ.ಸೋಮವಾರಪೇಟೆ ತಾಲೂಕಿನ ಹರಗ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 1991ರಲ್ಲಿ ವೃತ್ತಿ ಜೀವನ ಆರಂಭಿಸಿದ ಕುಮಾರ್ ಅವರು ಕಾಡು ಬೆಳೆದು ಮುಚ್ಚಿ ಹೋಗಿದ್ದ ಶಾಲೆಯ ಮೈದಾನವನ್ನು ದಾನಿಗಳ ಸಹಕಾರ ಮತ್ತು ಇಲಾಖೆಯ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿದರು. ಊರಿನ ದಾನಿಗಳ ನೆರವಿನೊಂದಿಗೆ ಶಾಲೆಯ ಗೇಟ್ ನಿರ್ಮಿಸಿ ಶಾಲಾ ಕಟ್ಟಡಕ್ಕೆ ಭದ್ರತೆ ಒದಗಿಸಿಕೊಟ್ಟರು.ಕಿರಂಗದೂರು, ಕೂಡುಮಂಗಳೂರು ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕೆಲಸ ನಿರ್ವಹಿಸಿದರು. ಕೂಡಿಗೆ ಸರ್ಕಾರಿ ಶಾಲೆಗೆ ಬಂದ ಮೇಲೆ ಶಾಲೆಬಿಟ್ಟು ಬೀದಿಯಲ್ಲಿ ಅಲೆಯುತ್ತಿದ್ದ ಮಕ್ಕಳನ್ನು ಮನ ಒಲಿಸಿ ಮರಳಿ ಶಾಲೆಗೆ ಸೇರಿಸುವಲ್ಲಿ ಸಫಲರಾದರು.