ರಾಮನಗರ: ಚನ್ನಪಟ್ಟಣ ತಾಲೂಕಿನ ಅಂಬಾಡಹಳ್ಳಿಯ ಯುಜಿಎಚ್ಪಿಎಸ್(ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ) ಯ ಸಹ ಶಿಕ್ಷಕಿ ಶಾಂತಮ್ಮ ರಾಜ್ಯ ಸರ್ಕಾರದಿಂದ ಕೈಗೊಳ್ಳಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಕಾರ್ಯವನ್ನು ಕೇವಲ 7 ದಿನಗಳಲ್ಲಿಯೇ ಪೂರ್ಣಗೊಳಿಸಿ ಶೇ.100ರಷ್ಟು ಸಾಧನೆ ಮಾಡಿದ್ದಾರೆ.
ಇದಕ್ಕೆ ಸಂಬಂಧಿಸಿದಂತೆ ಅಭಿನಂದನಾ ಪತ್ರ ನೀಡಿರುವ ಜಿಲ್ಲಾಧಿಕಾರಿ ಸಮೀಕ್ಷೆಗಾಗಿ ಚನ್ನಪಟ್ಟಣ ತಾಲೂಕಿನ ಹೊಡಿಕೆ ಹೊಸಹಳ್ಳಿ, ಚನ್ನಂಕೇಗೌಡನದೊಡ್ಡಿ ಹಾಗೂ ಗೋವಿಂದೇಗೌಡನದೊಡ್ಡಿಯಲ್ಲಿ 86 ಮನೆಗಳ ಸಮೀಕ್ಷಾ ಕಾರ್ಯವನ್ನು ಕೇವಲ 7 ದಿನಗಳಲ್ಲಿಯೇ ಶೇ.100ರಷ್ಟು ಪೂರ್ಣಗೊಳಿಸಿ ನಿಗದಿತ ಅವಧಿಗೂ ಮೊದಲೇ ಸಮೀಕ್ಷಾ ಕಾರ್ಯವನ್ನು ಪೂರ್ಣಗೊಳಿಸಿದ್ದಾರೆ ಎಂದು ತಿಳಿಸಿದರು.
ಸಮೀಕ್ಷೆಯಲ್ಲಿ ನೀವು ತೋರಿದ ಆಸಕ್ತಿ, ಉತ್ಸಾಹ ಮತ್ತು ಪ್ರಾಮಾಣಿಕ ಪ್ರಯತ್ನ ಸಮೀಕ್ಷೆ ಕಾರ್ಯ ತ್ವರಿತವಾಗಿ ಸಾಗಲು ಸಹಕಾರಿಯಾಗಿದೆ. ಸಮೀಕ್ಷಾ ಕಾರ್ಯಕ್ಕೆ ನೀವು ನೀಡಿದ ಸಹಕಾರ ಮತ್ತು ಉತ್ಸಾಹವನ್ನು ಜಿಲ್ಲಾಡಳಿತ ಪ್ರಶಂಸಿಸುತ್ತದೆ ಹಾಗೂ ತಮ್ಮ ಈ ಕಾರ್ಯಶ್ರದ್ಧೆಗೆ ನಾನು ವೈಯಕ್ತಿಕವಾಗಿ 1,001 ರು. ನೀಡಿ ಶ್ಲಾಘಿಸುತ್ತೇನೆ. ಸಮೀಕ್ಷಾ ಕಾರ್ಯದಲ್ಲಿ ತಾವು ತೋರಿಸಿದ ಉತ್ಸಾಹ ಮತ್ತು ಪ್ರಯತ್ನ ಇತರರಿಗೂ ಮಾದರಿಯಾಗಿದ್ದು, ತಮ್ಮ ಪ್ರಾಮಾಣಿಕ ಪ್ರಯತ್ನ ಮತ್ತು ಸಹಕಾರ ಮುಂದಿನ ದಿನಗಳಲ್ಲಿಯೂ ಇದೇ ರೀತಿ ಕಾರ್ಯಕ್ಷಮತೆಯನ್ನು ಜಿಲ್ಲಾಡಳಿತ ತಮ್ಮಿಂದ ಬಯಸುತ್ತದೆ ಎಂದು ತಮ್ಮ ಅಭಿನಂದನಾ ಪತ್ರದಲ್ಲಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಶಿಕ್ಷಕಿ ಶಾಂತಮ್ಮ ಪತಿ ಶಿವರಾಜ್ ಹಾಜರಿದ್ದರು.29ಕೆಆರ್ ಎಂಎನ್ 3.ಜೆಪಿಜಿ