ಚನ್ನಪಟ್ಟಣ: ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾಗಿದ್ದು, ಜಗತ್ತಿಗೆ ಮಾರ್ಗದರ್ಶನ ತೋರುವ ಮಹತ್ವದ ವೃತ್ತಿಯಾಗಿದೆ ಎಂದು ಪುಟ್ಟಸ್ವಾಮಿಗೌಡ (ಡಿಪಿಎಸ್) ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ರಂಗಸ್ವಾಮಿ ಮಾತನಾಡಿ, ಶಿಕ್ಷಕರು ವಿದ್ಯಾರ್ಥಿಗಳ ಬದುಕಿಗೆ ದಿಕ್ಕು ತೋರಿಸುವ ಮಾರ್ಗದರ್ಶಕರು. ಜ್ಞಾನ, ಮೌಲ್ಯ ಮತ್ತು ಸಂಸ್ಕಾರವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಮೂಲಕ ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಶಿಕ್ಷಕರನ್ನು ಗೌರವಿಸುವ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಪ್ರೋತ್ಸಾಹ ನೀಡುತ್ತಿರುವ ಭಾರತ ವಿಕಾಸ ಪರಿಷತ್ತಿನ ಕಾರ್ಯ ಶ್ಲಾಘನೀಯ ಎಂದರು.
ಉಪನ್ಯಾಸಕಿ ಶೈಲಜಾ ಮಾತನಾಡಿ, ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸುವುದು ಶಿಕ್ಷಕರಿಗೆ ದೇಶ ನೀಡಿರುವ ಗೌರವದ ಪ್ರತೀಕವಾಗಿದೆ. ಶಿಕ್ಷಕರ ದಿನಾಚರಣೆ ಕೇವಲ ಸನ್ಮಾನಕ್ಕೆ ಸೀಮಿತವಾಗದೆ, ಶಿಕ್ಷಕರು ತಮ್ಮ ಕರ್ತವ್ಯ ಹಾಗೂ ಜವಾಬ್ದಾರಿಯನ್ನು ಆತ್ಮಾವಲೋಕನ ಮಾಡಿಕೊಳ್ಳುವ ದಿನವಾಗಬೇಕು ಎಂದರು.ಭಾವಿಪ ಪ್ರಾಂತೀಯ ಸಂಘಟನಾ ಕಾರ್ಯದರ್ಶಿ ವಸಂತ್ ಕುಮಾರ್ ಮಾತನಾಡಿ, ಶಿಕ್ಷಕರು ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಾಣದ ಶಿಲ್ಪಿಗಳಾಗಿದ್ದು, ಶಿಕ್ಷಣದೊಂದಿಗೆ ಸಂಸ್ಕಾರ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಬೇಕು ಎಂದರು.
ಭಾವಿಪ ಖಜಾಂಚಿ ವಿ.ಟಿ. ರಮೇಶ್, ವಿಭಾಗೀಯ ಸಂಚಾಲಕ ರಾ.ಶಿ. ಬಸವರಾಜ್, ವಿ.ಸಿ. ಚಂದ್ರೇಗೌಡ, ಯೋಗಾನಂದ, ಚೌ.ಪು. ಸ್ವಾಮಿ, ಲಯನ್ಸ್ ಸಂಸ್ಥೆಯ ಅಧ್ಯಕ್ಷ ಎಚ್. ಗೋವಿಂದಯ್ಯ, ಭಾವಿಪ ಕಾರ್ಯದರ್ಶಿ ಯೋಗೇಶ್ ಚಕ್ಕೆರೆ ಇದ್ದರು.