ಉಡುಪಿ: ದೇಶದ ಭವಿಷ್ಯ ತರಗತಿಯೊಳಗೆ ರೂಪುಗೊಳ್ಳುತ್ತದೆ ಎನ್ನುವ ಮಾತಿದೆ. ದೇಶದ ಭವಿಷ್ಯ ರೂಪಿಸುವ ವಿದ್ಯಾರ್ಥಿಗಳನ್ನು ರೂಪಿಸುವವರು ಶಿಕ್ಷಕರು. ಆದ್ದರಿಂದ ಶಿಕ್ಷಕರು ಭವ್ಯ ಭಾರತ ನಿರ್ಮಿಸುವ ಶಿಲ್ಪಿಗಳು ಎಂದು ಶಾಸಕ ಯಶ್ಪಾಲ್ ಸುವರ್ಣ ಅಭಿಪ್ರಾಯಪಟ್ಟಿದ್ದಾರೆ.ಶುಕ್ರವಾರ ಜಿಲ್ಲಾಡಳಿತ ಹಾಗೂ ಡಾ.ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಆಶ್ರಯದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನಾಚರಣೆ ಪ್ರಯುಕ್ತ ಉಡುಪಿ ಜಿಲ್ಲಾ ಮತ್ತು ವಲಯ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಉತ್ತಮ ಗುಣಮಟ್ಟದ, ಶಿಸ್ತುಬದ್ಧ ಶಿಕ್ಷಣ ವ್ಯವಸ್ಥೆಯಿಂದಾಗಿ ಉಡುಪಿ ಜಿಲ್ಲೆಗೆ ಶಿಕ್ಷಣ ಕಾಶಿ ಎಂಬ ಹೆಸರು ಬಂದಿದೆ. ಈ ಗೌರವ ಉಳಿಸುವ ಹಾಗೂ ಬೆಳೆಸುವಲ್ಲಿ ಶಿಕ್ಷಕರು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದರು.
ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಸಾವಿತ್ರಿಬಾಯಿ ಫುಲೆ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ನಂತರ 15 ಶಿಕ್ಷಕರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಲಾಯಿತು. ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ಶಿಕ್ಷಕರ ದಿನಾಚರಣೆ ಅಂಗವಾಗಿ ಲೆಕ್ಕ ಪರಿಶೋಧಕ ಕಮಲಾಕ್ಷ ಕಾಮತ್ ವಿಶೇಷ ಉಪನ್ಯಾಸ ನೀಡಿದರು. ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಲ್, ಸಂಸದ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿ, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಶ್ಯಾಮಿಲಿ ಜಿ.ಶಂಕರ್, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಪನಿರ್ದೇಶಕ ಅಶೋಕ್ ಕಾಮತ್ ಮತ್ತಿತರರು ಇದ್ದರು. ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಲೋಕೇಶ್ ಸಿ. ಸ್ವಾಗತಿಸಿದರು. ಒಳಕಾಡು ಶಾಲೆಯ ಅಧ್ಯಾಪಕ ಗಣಪತಿ ಭಟ್ ನಿರೂಪಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಮ್ಮ ವಂದಿಸಿದರು.