ಶಿಕ್ಷಕರು ವಿದ್ಯಾರ್ಥಿಗಳ ಬದುಕಿನ ದಾರಿದೀಪ: ಎಸ್.ಐ. ಮುನವಳ್ಳಿ

KannadaprabhaNewsNetwork |  
Published : May 29, 2025, 12:16 AM IST
ಗದಗ ನಗರದ ಕೆಎಲ್‌ಇ ಸಂಸ್ಥೆಯ ಜಗದ್ಗುರು ತೋಂಟದಾರ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಶಿಕ್ಷಕರ ಸನ್ಮಾನ ಕಾರ್ಯಕ್ರಮದಲ್ಲಿ ಶಂಕ್ರಣ್ಣ ಮುನವಳ್ಳಿ ಮಾತನಾಡಿದರು. | Kannada Prabha

ಸಾರಾಂಶ

ಗದಗ ನಗರದ ಕೆಎಲ್‌ಇ ಸಂಸ್ಥೆಯ ಜಗದ್ಗುರು ತೋಂಟದಾರ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದ ಶಿಕ್ಷಕರ ಸನ್ಮಾನ ಕಾರ್ಯಕ್ರಮ ನಡೆಯಿತು.

ಗದಗ: ಶಿಕ್ಷಕರು ಕೇವಲ ಪಾಠ ಹೇಳುವವರಲ್ಲ. ಅವರು ವಿದ್ಯಾರ್ಥಿಗಳ ಬದುಕಿನ ದಾರಿದೀಪವಾಗಿದ್ದಾರೆ. ಕೇವಲ ಪಠ್ಯಕ್ರಮವನ್ನು ಪೂರ್ಣಗೊಳಿಸುವುದಿಲ್ಲ, ಬದಲಿಗೆ ನಮ್ಮ ವಿದ್ಯಾರ್ಥಿಗಳಲ್ಲಿ ಜ್ಞಾನದ ಹಸಿವನ್ನು, ಕುತೂಹಲವನ್ನು ಮತ್ತು ಸೃಜನಶೀಲತೆಯನ್ನು ಬಿತ್ತುವವರು ಶಿಕ್ಷಕರೇ ಎಂದು ಕೆಎಲ್ಇ ಸಂಸ್ಥೆಯ ನಿರ್ದೇಶಕ ಎಸ್.ಐ. ಮುನವಳ್ಳಿ ಹೇಳಿದರು.

ನಗರದ ಕೆಎಲ್‌ಇ ಸಂಸ್ಥೆಯ ಜಗದ್ಗುರು ತೋಂಟದಾರ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದ ಶಿಕ್ಷಕರ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಈ ಕಾಲೇಜಿನಲ್ಲಿರುವ ಉಪನ್ಯಾಸಕರು ತಮ್ಮ ವೃತ್ತಿಯ ಬಗ್ಗೆ ಅಪಾರ ಪ್ರೀತಿ ಮತ್ತು ಬದ್ಧತೆ ಹೊಂದಿದ್ದಾರೆ. ಪ್ರತಿದಿನವೂ ಅವರು ನಮ್ಮ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಲು ಶ್ರಮಿಸುತ್ತಾರೆ. ಅವರ ತಾಳ್ಮೆ, ಸಮರ್ಪಣೆ ಮತ್ತು ನಿಸ್ವಾರ್ಥ ಸೇವೆ ನಿಜಕ್ಕೂ ಶ್ಲಾಘನೀಯ ಎಂದರು.

ವಿಧಾನಪರಿಷತ್‌ ಸದಸ್ಯ ಎಸ್.ವಿ. ಸಂಕನೂರ ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಶಿಕ್ಷಕರು ಕೇವಲ ಪಾಠ ಹೇಳುವವರಲ್ಲ, ಬದಲಿಗೆ ವಿದ್ಯಾರ್ಥಿಗಳಿಗೆ ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಶಿಲ್ಪಿಗಳು. ಅವರ ನಿಸ್ವಾರ್ಥ ಸೇವೆಗೆ ನಾವು ಸದಾ ಋಣಿಯಾಗಿರಬೇಕು ಎಂದರು.

ಪದವಿ ಕಾಲೇಜು ಪ್ರಾಚಾರ್ಯ ಪಿ.ಜಿ. ಪಾಟೀಲ ಮಾತನಾಡಿ, 2020ರ ಹೊಸ ಶಿಕ್ಷಣ ನೀತಿಯಿಂದ ವಿಕಸಿತ ಭಾರತ ಎಂಬ ಕಲ್ಪನೆಗೆ ಪೂರಕವಾದ ಉದ್ಯೋಗ ಅವಕಾಶಗಳು, ನಾವಿನ್ಯತೆ, ಸಂಶೋಧನೆಗೆ ಅಡಿಪಾಯವಾಗುತ್ತದೆ. ಮುಂದೆ ಮಹಾವಿದ್ಯಾಲಯದಲ್ಲಿ ಬಿಎ-ಬಿಇಡಿ ಹಾಗೂ ಬಿಎಸ್‌ಸಿ-ಬಿಇಡಿ 2026-27ನೇ ಶೈಕ್ಷಣಿಕ ವರ್ಷದಲ್ಲಿ ಪ್ರಾರಂಭವಾಗುತ್ತಿದೆ ಎಂದರು.

ಪಪೂ ಕಾಲೇಜು ಪ್ರಾಚಾರ್ಯ ಎಸ್.ಬಿ. ಹಾವೇರಿ, ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ಎಸ್.ಪಿ. ಸಂಶಿಮಠ ಮುಂತಾದವರು ಮಾತನಾಡಿದರು. ಕಾಲೇಜಿನ ಶಿಕ್ಷಕರನ್ನು ಗೌರವಿಸಲಾಯಿತು. ಸೌಭಾಗ್ಯಾ ಹಿರೇಮಠ ಪ್ರಾರ್ಥಿಸಿದರು. ಆರ್.ಜಿ. ಪಾಟೀಲ ಹಾಗೂ ರೀಮಾ ಬಾಕಳೆ ಕಾರ್ಯಕ್ರಮ ನಿರೂಪಿಸಿದರು.

PREV

Recommended Stories

ರಾಜ್ಯದಲ್ಲಿ 3 ದಿನ ಭಾರೀ ಮಳೆ: 15 ಜಿಲ್ಲೆಗೆ ಯೆಲ್ಲೋ ಅಲರ್ಟ್‌
ವರ್ಗಾವಣೆ ಬಳಿಕ ಪೊಲೀಸರು ವರದಿ ಮಾಡಿಕೊಳ್ಳದಿದ್ದರೆ ಸಂಬಳ ಕಟ್‌ : ವೈದ್ಯಕೀಯ ರಜೆಗೆ ಬ್ರೇಕ್