ಉಳ್ಳಾಲ: ಶಿಕ್ಷಕರು ಯಾವುದೇ ರೀತಿಯ ದುರಾಚಾರಗಳಿಗೆ ಬಲಿಯಾಗದೆ ಪ್ರತಿಯೊಬ್ಬ ವಿದ್ಯಾರ್ಥಿಗಳ ಜೊತೆಗೆ ಪ್ರಾಮಾಣಿಕತೆಯಿಂದ ನಡೆದುಕೊಳ್ಳಬೇಕು. ಉತ್ತಮ ಶಿಕ್ಷಣ ನೀಡುವ ಮೂಲಕ ಮಕ್ಕಳ ಮನಸ್ಸನ್ನು ಗೆಲ್ಲಬೇಕು. ಮಕ್ಕಳಲ್ಲಿ ಉತ್ತಮ ಜೀವನ ಮೌಲ್ಯಗಳು ಹಾಗೂ ಸಾಮಾಜಿಕ ಕಾಳಜಿಯನ್ನು ಬೆಳೆಸುವ ಮೂಲಕ ಸಮಾಜವನ್ನೇ ಗೆಲ್ಲಲು ಸಾಧ್ಯ ಎಂದು ಜಿಲ್ಲಾ ಅತ್ಯುತ್ತಮ ಪ್ರಶಸ್ತಿ ವಿಜೇತ ನಿವೃತ್ತ ಮುಖ್ಯ ಶಿಕ್ಷಕರಾದ ರವೀಂದ್ರ ರೈ ಕಲ್ಲಿಮಾರ್ ಅವರು ಅಭಿಪ್ರಾಯಪಟ್ಟರು.ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ ಕುತ್ತಾರುವಿನ ಖಾಸಗಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಗೌರವ ಸನ್ಮಾನ ಮತ್ತು ಶಿಕ್ಷಕರ ದಿನಾಚರಣೆಯಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.ಕಾರ್ಯಕ್ರಮ ಉದ್ಘಾಟಿಸಿದ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಮತಾ ಡಿ.ಎಸ್. ಗಟ್ಟಿ ಮಾತನಾಡಿ ಅಬ್ಬಕ್ಕ ಉತ್ಸವ ಸಮಿತಿಯು ಅಬ್ಬಕ್ಕ ಉತ್ಸವ ಮಾತ್ರವಲ್ಲದೆ ಕಳೆದ 29 ವರ್ಷಗಳಿಂದ ನಿರಂತರವಾಗಿ ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದೆ. ಇಂತಹ ಕಾರ್ಯಗಳು ಸಮಾಜಕ್ಕೆ ದಾರಿ ತೋರಿಸುವಂತಹ ಮಾದರಿ ಕಾರ್ಯಕ್ರಮಗಳಾಗುತ್ತವೆ ಎಂದು ಹೇಳಿದರು.
ಮಲ್ಲಿಕಾ ಭಂಡಾರಿ, ಅನುಪಮಾ ಸಿ., ಶಶಿಕಲಾ ಗಟ್ಟಿ, ಕೆಎಂಕೆ ಮಂಜನಾಡಿ ಸನ್ಮಾನಪತ್ರಗಳನ್ನು ವಾಚಿಸಿದರು. ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಅಧ್ಯಕ್ಷರಾದ ದಿನಕರ ಉಳ್ಳಾಲ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಧನಲಕ್ಷ್ಮಿ ಗಟ್ಟಿ ನಿರೂಪಿಸಿದರು. ಕೋಶಾಧಿಕಾರಿ ಆನಂದ ಕೆ ಅಸೈಗೋಳಿ ವಂದಿಸಿದರು.ಜಿಲ್ಲಾ ಅತ್ಯುತ್ತಮ ಪ್ರಶಸ್ತಿ ವಿಜೇತ ನಿವೃತ್ತ ಮುಖ್ಯ ಶಿಕ್ಷಕರಾದ ರವೀಂದ್ರ ರೈ ಕಲ್ಲಿಮಾರ್, ನಿವೃತ್ತ ಮುಖ್ಯ ಶಿಕ್ಷಕರಾದ ಗಂಗಾ ಆನಂದ್, ನಿವೃತ್ತ ದೈಹಿಕ ಶಿಕ್ಷಕಿ ಜೆನೆಟ್ ಬೆನೆಡಿಕ್ಟ್ ಮಾಬೆನ್, ನಿವೃತ್ತ ಮುಖ್ಯ ಶಿಕ್ಷಕರಾದ ಆಯಿಷಾ ಭಾನು.ಕೆ ಅವರನ್ನು ಸನ್ಮಾನಿಸಲಾಯಿತು.ಪ್ರತಿಯೊಬ್ಬ ಮಹಿಳೆಯಲ್ಲೂ ತನ್ನದೇ ಆದ ಶಕ್ತಿ ಹಾಗೂ ಸಾಮರ್ಥ್ಯವಿದೆ. ಮಹಿಳೆಯರಿಗೆ ಗೌರವ ಇರುವಲ್ಲಿ ದೇವರ ಆಶೀರ್ವಾದ ಇರುತ್ತದೆ ಎಂಬ ನಂಬಿಕೆಯಿದೆ. ಮಹಿಳೆಯರು ಕೇವಲ ಮನೆ ಕೆಲಸಕ್ಕೆ ಸೀಮಿತವಾಗಿಲ್ಲ. ಅವರು ಕುಟುಂಬದ ಜವಾಬ್ದಾರಿಯೊಂದಿಗೆ ಸಮಾಜಮುಖಿ ಕಾರ್ಯಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡು ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡುತ್ತಿದ್ದಾರೆ.
। ಮಮತಾ.ಡಿ.ಎಸ್ ಗಟ್ಟಿ