ವಿದ್ಯಾರ್ಥಿಗಳ ಭವಿಷ್ಯ ಸುಭದ್ರ ಶಕ್ತಿ ಶಿಕ್ಷಕರಿಗಿದೆ: ಶಾಸಕ ಟಿ.ರಘುಮೂರ್ತಿ

KannadaprabhaNewsNetwork | Published : Mar 5, 2024 1:35 AM

ಚಳ್ಳಕೆರೆ ನಗರದ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ಶಿಕ್ಷಣ ಇಲಾಖೆ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಪ್ರೌಢಶಾಲಾ ಶಿಕ್ಷಕರ ತರಬೇತಿ ಕಾರ್ಯಗಾರಕ್ಕೆ ಶಾಸಕ ಟಿ.ರಘುಮೂರ್ತಿ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಚಳ್ಳಕೆರೆ

ಶೈಕ್ಷಣಿಕ ಕ್ಷೇತ್ರದಲ್ಲಿ ತಾಲ್ಲೂಕು ತನ್ನದೇಯಾದ ವೈಶಿಷ್ಟ್ಯತೆ ಹೊಂದಿದೆ. ಕಳೆದ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಒದಗಿಸುವಲ್ಲಿ ಚಳ್ಳಕೆರೆ ತಾಲ್ಲೂಕು ಸಫಲವಾಗಿದೆ. ಈ ಬಾರಿ ಎಲ್ಲರ ದೃಢಸಂಕಲ್ಪದಿಂದ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸುವ ಸಂಕಲ್ಪ ಮಾಡಿ ಎಂದು ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಮಂಡಳಿ ಅಧ್ಯಕ್ಷ, ಶಾಸಕ ಟಿ.ರಘುಮೂರ್ತಿ ತಿಳಿಸಿದರು.

ಅವರು, ತಾಲ್ಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ಶಿಕ್ಷಣ ಇಲಾಖೆ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಪ್ರೌಢಶಾಲಾ ಶಿಕ್ಷಕರ ತರಬೇತಿ ಕಾರ್ಯಾ ಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಮುಖ ಹಂತವಾಗಿದೆ. ವಿದ್ಯಾರ್ಥಿಗಳ ಭವಿಷ್ಯವನ್ನು ಸುಭದ್ರಗೊಳಿಸುವ ಏಕೈಕ ಶಕ್ತಿ ಶಿಕ್ಷಕರಿಗೆ ಮಾತ್ರ ಇದೆ. ಪರೀಕ್ಷೆ ಆರಂಭವಾಗಲು ಕೇವಲ ೨೩ ದಿನಗಳಿದ್ದು, ಈ ಅವಧಿಯಲ್ಲಿ ಮುಖ್ಯ ಶಿಕ್ಷಕರು ಶಾಲೆಯ ಸಹ ಶಿಕ್ಷಕರು ಎಲ್ಲರೂ ಜೊತೆ ಗೂಡಿ ಶೈಕ್ಷಣಿಕ ಪರಂಫರೆಯನ್ನು ಕಾಪಾಡಲು ಸಂಘಟಿತ ರಾಗಿ ಕಾರ್ಯನಿರ್ವಹಿಸಿ ಎಂದು ಕರೆ ನೀಡಿದರಲ್ಲದೆ, ಶಾಸಕರ ಅನುದಾನ ಡಿಎಂಎಫ್ ನಿಧಿಯಲ್ಲಿ ಸುಮಾರು ೩೦ ಕೋಟಿ ರು. ಹಣವನ್ನು ಶಿಕ್ಷಣ ಇಲಾಖೆಗೆ ನೀಡಿರುವುದಾಗಿ ತಿಳಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್, ಪ್ರಸ್ತುತ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ೫,೩೮೭ ವಿದ್ಯಾರ್ಥಿಗಳು ಆರ್ಹತೆ ಪಡೆದ್ದು, ೧೦೦ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿವೆ. ಉತ್ತಮ ಫಲಿತಾಂಶ ದಾಖಲಿಸಲು ಇಡೀ ಶಿಕ್ಷಣ ಇಲಾಖೆ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರ ಸಹಕಾರದಿಂದ ಹಲವಾರು ಕಾರ್ಯಗಳ ಮೂಲಕ ಗುಣಮಟ್ಟದ ಬೋಧನೆ ನೀಡಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಬೆಸ್ಕಾಂ ಇಲಾಖೆ ಹಮ್ಮಿಕೊಂಡಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಶಾಸಕರು ಪ್ರಶಸ್ತಿ ಪತ್ರ ವಿತರಿಸಿದರು.

ಕಾರ್ಯಕ್ರಮದಲ್ಲಿ ವ್ಯಕ್ತಿ ವಿಕಸನ ಸಂಪನ್ಮೂಲ ವ್ಯಕ್ತಿ ಜಗನ್ನಾಥನಾಡಿಗೇರ, ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಸುನೀಲ್‌ ನಾಯ್ಕ, ಅಕ್ಷರ ದಾಸೋಹ ಅಧಿಕಾರಿ ತಿಪ್ಪೇಸ್ವಾಮಿ, ಮಾರುತಿ ಭಂಡಾರಿ, ಗಿರೀಶ್, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಜಿ.ಟಿ.ವೀರಭದ್ರಪ್ಪ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಡಿ.ಟಿ.ಶ್ರೀನಿವಾಸ್, ಗೌರವಾಧ್ಯಕ್ಷ ಕೆ.ಪಿ.ತಿಪ್ಪೇಸ್ವಾಮಿ, ಪ್ರಧಾನ ಕಾರ್ಯದರ್ಶಿ ಪಾಲಯ್ಯ, ಬೆಸ್ಕಾಂ ಎಇಇ ರಾಜು ಮುಂತಾದವರು ಪಾಲ್ಗೊಂಡಿದ್ದರು.