ಕೊಪ್ಪಳ: ಸಾಮಾಜಿಕ,ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ಪ್ರಗತಿಯಲ್ಲಿ ಕೊಪ್ಪಳ ಜಿಲ್ಲೆ ಅತ್ಯುತ್ತಮ ಸಾಧನೆ ಮಾಡಿರುವುದು ಶ್ಲಾಘನೀಯ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
ಶಿಕ್ಷಕರು ಹಗಲಿರುಳು ಎನ್ನದೆ ಸಮೀಕ್ಷೆ ಕೆಲಸ ಮಾಡುತ್ತಿರುವುದು ಶ್ಲಾಘನೀಯ, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಸಹ ಶ್ರಮ ವಹಿಸುತ್ತಿದ್ದಾರೆ. ಹೀಗಾಗಿ ಜಿಲ್ಲೆಯ ಪ್ರಗತಿ ಮುಂಚೂಣಿಯಲ್ಲಿದೆ ಎಂದು ತಂಗಡಗಿ ತಿಳಿಸಿದರು.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷೆ ಶಂಶಾದಬೇಗ್ಂ ಮಾತನಾಡಿ, ರಾಜ್ಯ ಸಂಘದ ನಿರ್ದೇಶನದಂತೆ ಪ್ರಸಕ್ತ ಸಾಲಿನಲ್ಲಿ ದಸರಾ ರಜೆಯನ್ನು ಸರ್ಕಾರ ವಿಸ್ತರಣೆ ಮಾಡಿ ಶಿಕ್ಷಕರಿಗೆ ಅನುಕೂಲ ಮಾಡಿದೆ, ಅಲ್ಲದೆ ಜಿಲ್ಲಾಧಿಕಾರಿಗಳು ಹಾಗೂ ತಹಸೀಲ್ದಾರ್ ಮಾರ್ಗದರ್ಶನ, ಇಲಾಖೆಯ ಅಧಿಕಾರಿಗಳು ಸಮೀಕ್ಷೆ ಕೆಲಸಕ್ಕೆ ಸ್ಪಂದನೆ ಮಾಡುತ್ತಿರುವುದರಿಂದ ಶಿಕ್ಷಕರು ಸಮೀಕ್ಷೆಯ ಕೆಲಸ ಶ್ರದ್ಧೆಯಿಂದ ಮಾಡುತ್ತಿದ್ದಾರೆ ಎಂದು ಹೇಳಿದರು.ಸರ್ಕಾರಿ ಮಹಿಳಾ ನೌಕರರಿಗೆ ಋತುಚಕ್ರ ಅವಧಿಯಲ್ಲಿ ವೇತನ ಸಹಿತ ವಾರ್ಷಿಕವಾಗಿ 12 ದಿನಗಳ ಕಾಲ ರಜೆ ನೀಡಲು ಇತ್ತೀಚೆಗೆ ರಾಜ್ಯದ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿರುವುದು ಸಂಘದ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಹೇಳಿದರು.
ಹನುಮಸಾಗರ ಕೆಪಿಎಸ್ ಶಾಲೆಯ ಉಪ ಪ್ರಾಂಶುಪಾಲ ಎಚ್.ಎಚ್.ಇಲಕಲ್, ಬಾಗಲಕೋಟಿ ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾ ಕೋಶಾಧ್ಯಕ್ಷ ಮುತ್ತು ಬೀಳಗಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಉಮೇಶ ಕಂದಕೂರು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಖಜಾಂಚಿ ಉಮೇಶ ಲಮಾಣಿ, ಇಲಕಲ್ ತಾಲೂಕು ನೌಕರರ ಸಂಘದ ಅಧ್ಯಕ್ಷ ಪರಶುರಾಮ ಪಮ್ಮಾರ, ರಾಜ್ಯ ಪರಿಷತ್ ಸದಸ್ಯ ಈಶ್ವರ ಗದ್ದಿ, ಪತ್ತಿನ ಸಹಕಾರಿ ಸಂಘದ ನಿರ್ದೇಶಕಿ ಪವಿತ್ರಾ ಬೀಳಗಿ ಸೇರಿದಂತೆ ಇತರರು ಇದ್ದರು.