ಮುಖ್ಯ ಶಿಕ್ಷಕಿ ಸಿಲುಕಿಸಲು ಶಾಲೆ ಮಕ್ಳಿಂದ ಶೌಚ ತೊಳೆಸಿದ ಶಿಕ್ಷಕಿ!

KannadaprabhaNewsNetwork |  
Published : Feb 14, 2024, 02:16 AM IST
ಮಕ್ಕಳಿಂದ ಶೌಚಾಲಯ ಸ್ವಚ್ಛತೆ | Kannada Prabha

ಸಾರಾಂಶ

ಚಿಕ್ಕಬಳ್ಳಾಪುರ, ಕೋಲಾರ, ಶಿವಮೊಗ್ಗದಲ್ಲಿ ಮಕ್ಕಳ ಕೈಯಲ್ಲಿ ಶೌಚಾಲಯ ಸ್ವಚ್ಛಗೊಳಿಸಿದ ಶಿಕ್ಷಕರ ವಿರುದ್ಧ ಸರ್ಕಾರ ಕಠಿಣ ಕ್ರಮ ತೆಗೆದುಕೊಂಡ ಹೊರತಾಗಿಯೂ ರಾಜ್ಯದಲ್ಲಿ ಇಂಥ ಘಟನೆ ಅಲ್ಲಲ್ಲಿ ಬೆಳಕಿಗೆ ಬರುತ್ತಲೇ ಇದೆ.

ಕನ್ನಡಪ್ರಭ ವಾರ್ತೆ ದಾವಣಗೆರೆ

ಚಿಕ್ಕಬಳ್ಳಾಪುರ, ಕೋಲಾರ, ಶಿವಮೊಗ್ಗದಲ್ಲಿ ಮಕ್ಕಳ ಕೈಯಲ್ಲಿ ಶೌಚಾಲಯ ಸ್ವಚ್ಛಗೊಳಿಸಿದ ಶಿಕ್ಷಕರ ವಿರುದ್ಧ ಸರ್ಕಾರ ಕಠಿಣ ಕ್ರಮ ತೆಗೆದುಕೊಂಡ ಹೊರತಾಗಿಯೂ ರಾಜ್ಯದಲ್ಲಿ ಇಂಥ ಘಟನೆ ಅಲ್ಲಲ್ಲಿ ಬೆಳಕಿಗೆ ಬರುತ್ತಲೇ ಇದೆ. ಇದೀಗ ದಾವಣಗೆರೆ ತಾಲೂಕಿನ ಮೆಳ್ಳೆಕಟ್ಟೆ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿನಿಯರಿಂದ ಶಾಲಾ ಶೌಚಾಲಯ ಸ್ವಚ್ಛಗೊಳಿಸಿದ ವಿಡಿಯೋವೊಂದು ವೈರಲ್‌ ಆಗಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಆರಂಭದಲ್ಲಿ ಮುಖ್ಯಶಿಕ್ಷಕಿಯನ್ನು ಅಮಾನತು ಮಾಡಲಾಗಿತ್ತಾದರೂ ನಂತರ ವಿಚಾರಣೆ ಬಳಿಕ ಮುಖ್ಯಶಿಕ್ಷಕಿಯನ್ನು ಸಿಲುಕಿಸಲು ಸಹಶಿಕ್ಷಕಿಯೊಬ್ಬರು ಈ ಷಡ್ಯಂತ್ರ ರೂಪಿಸಿರುವುದು ಬಯಲಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯ ಶಿಕ್ಷಕಿಯ ಅಮಾನತು ಆದೇಶವನ್ನು ಹಿಂಪಡೆದು, ಸಹಶಿಕ್ಷಕಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.ಆಗಿದ್ದೇನು?:ಫೆ.8ರಂದು ವಿದ್ಯಾರ್ಥಿಗಳ ಕಲಿಕಾ ಪ್ರಗತಿಗೆ ತೊಂದರೆಯಾಗುತ್ತಿರುವುದು ಹಾಗೂ ಮುಖ್ಯ ಶಿಕ್ಷಕರಿಗೆ ಏರುಧ್ವನಿಯಲ್ಲಿ ಮಾತನಾಡಿರುವ ದುರ್ವರ್ತನೆ ವಿಚಾರವಾಗಿ ಮುಖ್ಯಶಿಕ್ಷಕಿ ಶೋಭಾ ಅವರು ಸಹಶಿಕ್ಷಕಿ ಸಾವಿತ್ರಮ್ಮಗೆ ನೋಟಿಸ್‌ ನೀಡಿದ್ದರು. ಆದರೆ ಇದಕ್ಕೆ ಉತ್ತರ ನೀಡದ ಸಾವಿತ್ರಮ್ಮ ಮುಖ್ಯ ಶಿಕ್ಷಕಿ ಶೋಭಾ ಹೆಸರು ಕೆಡಿಸಲು ಈ ರೀತಿ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸಿದ್ದರು. 10 ಮಂದಿ ವಿದ್ಯಾರ್ಥಿನಿಯರು ಶೌಚಾಲಯ ಸ್ವಚ್ಛಗೊಳಿಸುತ್ತಿರುವ ಸಂದರ್ಭದಲ್ಲಿ ವಿಡಿಯೋ ಮಾಡಿಕೊಂಡಿದ್ದ ಅವರು ನಂತರ ಅದನ್ನು ತಾವೇ ಮಾಧ್ಯಮಗಳಿಗೆ ಕಳುಹಿಸಿಕೊಟ್ಟಿದ್ದರು.

ಈ ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಮುಖ್ಯಶಿಕ್ಷಕಿಯನ್ನು ಅಮಾನತು ಮಾಡಿ ಶಿಕ್ಷಣ ಇಲಾಖೆ ಅಧಿಕಾರಿಗಳು ಆದೇಶ ಹೊರಡಿಸಿದ್ದರು. ಆದರೆ, ಇದರ ಹಿಂದೆ ಸಹಶಿಕ್ಷಕಿ ಕೈವಾಡ ಇರುವುದಾಗಿ ಮುಖ್ಯಶಿಕ್ಷಕಿ ಶಿಕ್ಷಣಾಧಿಕಾರಿಗಳಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಅಧಿಕಾರಿಗಳು ಸ್ಥಳ ಪರಿಶೀಲಿಸಿ ವಿದ್ಯಾರ್ಥಿಗಳ ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ.ಅಧಿಕಾರಿಗಳಿಗೆ ವಿದ್ಯಾರ್ಥಿಗಳು, ಎಸ್‌ಡಿಎಂಸಿ ಸದಸ್ಯರು ಸಹ ಶಿಕ್ಷಕಿಯೇ ಶೌಚಾಲಯ ಸ್ವಚ್ಛಗೊಳಿಸುವಂತೆ ಸೂಚಿಸಿದ್ದಾಗಿ ಹೇಳಿದ ಹಿನ್ನೆಲೆಯಲ್ಲಿ ಮುಖ್ಯಶಿಕ್ಷಕಿ ಅಮಾನತು ಆದೇಶ ಹಿಂಪಡೆಯಲಾಗಿದೆ.

PREV

Recommended Stories

ವಿಶ್ವದಲ್ಲೇ ಮೊದಲ ಬಾರಿ ಬನ್ನೇರುಘಟ್ಟದಲ್ಲಿ ಕರಡಿಗೆ ಕೃತಕ ಕಾಲು ಜೋಡಣೆ
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ