ಎಸ್‌ಐಆರ್‌ ಹಾಗೂ ಬಿಎಲ್‌ಒ ಕರ್ತವ್ಯದಿಂದ ಬೋಧನೆಗೆ ತೊಡಕು

KannadaprabhaNewsNetwork |  
Published : Aug 17, 2026, 02:00 AM IST
16ಎಚ್ಎಸ್ಎನ್10 :  | Kannada Prabha

ಸಾರಾಂಶ

ಶಿಕ್ಷಕರ ಮೂಲ ಕರ್ತವ್ಯ ಮಕ್ಕಳಿಗೆ ಶಿಕ್ಷಣ ನೀಡುವುದಾಗಿದೆ. ಆದರೆ ಕಳೆದ ಕೆಲವು ತಿಂಗಳಿನಿಂದ ರಾಜ್ಯದ ಶಿಕ್ಷಕರನ್ನು ಎಸ್‌ಐಆರ್‌, ಬಿಎಲ್‌ಒ ಸೇರಿದಂತೆ ಹಲವು ಸರ್ಕಾರಿ ಕಾರ್ಯಗಳಿಗೆ ನಿಯೋಜಿಸಲಾಗುತ್ತಿದೆ. ಇದರಿಂದ ಶಿಕ್ಷಕರು ಶಾಲೆಯಲ್ಲಿ ಮಕ್ಕಳಿಗೆ ಪಾಠ ಮಾಡಲು ಅಗತ್ಯವಾದ ಸಮಯವನ್ನು ಕಳೆದುಕೊಳ್ಳುವಂತಾಗಿದೆ. ಒಂದೆಡೆ ಪಠ್ಯಕ್ರಮ ಪೂರ್ಣಗೊಳಿಸುವ ಒತ್ತಡ, ಮತ್ತೊಂದೆಡೆ ವಿವಿಧ ಇಲಾಖೆಗಳ ಬೋಧನೇತರ ಕಾರ್ಯಗಳ ಜವಾಬ್ದಾರಿ ಶಿಕ್ಷಕರ ಮೇಲೆ ಬೀಳುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದರು. ಈ ಕುರಿತು ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಮಸೂದೆ ಮಂಡಿಸುವ ಪ್ರಯತ್ನ ನಡೆದಿದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕಾದ ಶಿಕ್ಷಕರನ್ನೇ ಎಸ್‌ಐಆರ್, ಬಿಎಲ್‌ಒ ಸೇರಿದಂತೆ ವಿವಿಧ ಬೋಧನೇತರ ಕಾರ್ಯಗಳಿಗೆ ನಿಯೋಜಿಸುವುದರಿಂದ ಶಿಕ್ಷಣ ವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಶಿಕ್ಷಕರನ್ನು ಅನ್ಯ ಕರ್ತವ್ಯಗಳಿಗೆ ನಿಯೋಜಿಸುವುದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಐತಿಹಾಸಿಕ ಕಾನೂನು ರೂಪಿಸಲು ಸಿದ್ಧತೆ ನಡೆಯುತ್ತಿದ್ದು, ಈ ಕುರಿತು ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಮಸೂದೆ ಮಂಡಿಸುವ ಪ್ರಯತ್ನ ನಡೆದಿದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಿ ತಿಳಿಸಿದರು.

ನಗರದ ಹಾಸನಾಂಬಾ ಕಲಾಕ್ಷೇತ್ರದಲ್ಲಿ ಭಾನುವಾರ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಹಾಸನ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭ ಹಾಗೂ ನಿವೃತ್ತ ಶಿಕ್ಷಕರ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿ, ಶಿಕ್ಷಕರ ಮೂಲ ಕರ್ತವ್ಯ ಮಕ್ಕಳಿಗೆ ಶಿಕ್ಷಣ ನೀಡುವುದಾಗಿದೆ. ಆದರೆ ಕಳೆದ ಕೆಲವು ತಿಂಗಳಿನಿಂದ ರಾಜ್ಯದ ಶಿಕ್ಷಕರನ್ನು ಎಸ್‌ಐಆರ್‌, ಬಿಎಲ್‌ಒ ಸೇರಿದಂತೆ ಹಲವು ಸರ್ಕಾರಿ ಕಾರ್ಯಗಳಿಗೆ ನಿಯೋಜಿಸಲಾಗುತ್ತಿದೆ. ಇದರಿಂದ ಶಿಕ್ಷಕರು ಶಾಲೆಯಲ್ಲಿ ಮಕ್ಕಳಿಗೆ ಪಾಠ ಮಾಡಲು ಅಗತ್ಯವಾದ ಸಮಯವನ್ನು ಕಳೆದುಕೊಳ್ಳುವಂತಾಗಿದೆ. ಒಂದೆಡೆ ಪಠ್ಯಕ್ರಮ ಪೂರ್ಣಗೊಳಿಸುವ ಒತ್ತಡ, ಮತ್ತೊಂದೆಡೆ ವಿವಿಧ ಇಲಾಖೆಗಳ ಬೋಧನೇತರ ಕಾರ್ಯಗಳ ಜವಾಬ್ದಾರಿ ಶಿಕ್ಷಕರ ಮೇಲೆ ಬೀಳುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದರು.

ಶಿಕ್ಷಕರನ್ನು ಶಿಕ್ಷಣೇತರ ಕಾರ್ಯಗಳಿಗೆ ನಿಯೋಜಿಸುವುದರಿಂದ ನೇರವಾಗಿ ಮಕ್ಕಳ ಶಿಕ್ಷಣದ ಮೇಲೆ ಪರಿಣಾಮ ಬೀರುತ್ತದೆ. ಪ್ರಾಥಮಿಕ, ಪ್ರೌಢಶಾಲೆ ಹಾಗೂ ಕಾಲೇಜು ಹಂತದ ಬೋಧನಾ ಸಿಬ್ಬಂದಿ ತಮ್ಮ ಮೂಲ ಕರ್ತವ್ಯದಲ್ಲಿ ತೊಡಗಿಸಿಕೊಂಡಾಗ ಮಾತ್ರ ಶೈಕ್ಷಣಿಕ ಗುಣಮಟ್ಟ ಹೆಚ್ಚಲು ಸಾಧ್ಯ. ಆದ್ದರಿಂದ ಬೋಧನಾ ಸಿಬ್ಬಂದಿಯನ್ನು ಅನಗತ್ಯವಾಗಿ ಇತರೆ ಇಲಾಖೆಗಳ ಕಾರ್ಯಗಳಿಗೆ ಬಳಸಿಕೊಳ್ಳುವುದನ್ನು ತಪ್ಪಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು. ವಯೋಮಿತಿಯನ್ನು ಪರಿಗಣಿಸಿ ಶಿಕ್ಷಕರಿಗೆ ವಿನಾಯಿತಿ ನೀಡುವ ವ್ಯವಸ್ಥೆ ರೂಪಿಸುವ ಅಗತ್ಯವಿದೆ ಎಂದು ಹೇಳಿದರು. ಶಿಕ್ಷಕರನ್ನು ಇತರೆ ಸರ್ಕಾರಿ ಕಾರ್ಯಗಳಿಗೆ ನಿಯೋಜಿಸುವ ಸಂದರ್ಭದಲ್ಲಿ ಅವರ ಸುರಕ್ಷತೆಯನ್ನೂ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಅನ್ಯ ಇಲಾಖೆಯ ಕರ್ತವ್ಯ ನಿರ್ವಹಿಸುವ ವೇಳೆ ಶಿಕ್ಷಕರು ಮೃತಪಟ್ಟರೆ ಅವರ ಕುಟುಂಬಕ್ಕೆ ₹ ೧ ಕೋಟಿ ಪರಿಹಾರ ನೀಡುವ ಐತಿಹಾಸಿಕ ಮಸೂದೆಯನ್ನು ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸುವ ನಿಟ್ಟಿನಲ್ಲಿ ಸಿದ್ಧತೆ ನಡೆದಿದೆ. ಮಸೂದೆಗೆ ಅನುಮೋದನೆ ದೊರೆತರೆ ಶಿಕ್ಷಕರಿಗೆ ಸರ್ಕಾರದ ವತಿಯಿಂದ ಹೆಚ್ಚಿನ ಭದ್ರತೆ ದೊರೆಯಲಿದೆ ಎಂದು ತಿಳಿಸಿದರು.

ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು:

೧೯೭೧-೭೨ರ ಕಾಲಘಟ್ಟದಲ್ಲಿ ಶಿಕ್ಷಕರ ಹಕ್ಕು ಹಾಗೂ ಬೇಡಿಕೆಗಳಿಗಾಗಿ ಸಂಘಟನೆ ರೂಪುಗೊಂಡಿತ್ತು. ಅಂದಿನಿಂದ ಇಂದಿನವರೆಗೆ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವುದು ಸಂಘಟನೆಯ ಪ್ರಮುಖ ಉದ್ದೇಶವಾಗಿದೆ. ಸಂಘಟನೆಯೊಳಗಿನ ಭಿನ್ನಾಭಿಪ್ರಾಯಗಳನ್ನು ವೈಯಕ್ತಿಕ ವಿಚಾರಗಳಾಗಿ ಪರಿಗಣಿಸಿ ಸಂಘಟನೆಯನ್ನು ದುರ್ಬಲಗೊಳಿಸುವ ಪ್ರಯತ್ನ ಮಾಡಬಾರದು ಎಂದು ಮನವಿ ಮಾಡಿದರು. ರಾಜ್ಯ ಶಿಕ್ಷಕರ ಸಂಘಟನೆ ಯಾರೊಬ್ಬರ ಮನೆಯ ಆಸ್ತಿಯೂ ಅಲ್ಲ, ಯಾರೊಬ್ಬರ ವೈಯಕ್ತಿಕ ಸ್ವತ್ತೂ ಅಲ್ಲ. ಹಾಸನ ಜಿಲ್ಲೆ ಶಿಕ್ಷಕರ ಸಂಘಟನೆಗೆ ತನ್ನದೇ ಆದ ಶ್ರೀಮಂತ ಪರಂಪರೆ ಹೊಂದಿದೆ. ಸಂಘಟನೆಯನ್ನು ಒಗ್ಗೂಡಿಸುವ ಕೆಲಸವನ್ನು ಕೃಷ್ಣೇಗೌಡ ಮತ್ತು ಅಣ್ಣಪ್ಪನವರು ಮಾಡಿದ್ದಾರೆ. ಮುಂದೆಯೂ ಶಿಕ್ಷಕರ ಹಿತಕ್ಕಾಗಿ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದರು.

ಬೋಧನಾ ಕಾರ್ಯಕ್ಕೆ ಅಡ್ಡಿಯಾಗದಿರಲಿ:

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಎಚ್.ಪಿ. ಸ್ವರೂಪ್, ಸರ್ಕಾರ ಜಾತಿ ಜನಗಣತಿ, ಎಸ್‌ಐಆರ್ ಸೇರಿದಂತೆ ವಿವಿಧ ಕಾರ್ಯಗಳನ್ನು ಕೈಗೊಂಡಾಗ ಅದರ ಅನುಷ್ಠಾನಕ್ಕೆ ಶಿಕ್ಷಕರನ್ನೇ ಹೆಚ್ಚಾಗಿ ಬಳಸಿಕೊಳ್ಳಲಾಗುತ್ತಿದೆ. ಶಿಕ್ಷಕರಿಗೆ ಕುಟುಂಬದ ಸಮಸ್ಯೆಗಳಿರಬಹುದು, ಮನೆಯಲ್ಲಿ ವಯಸ್ಸಾದ ಹಿರಿಯರಿರಬಹುದು, ಸ್ವಂತ ಆರೋಗ್ಯದ ಸಮಸ್ಯೆಗಳಿರಬಹುದು. ಆದರೆ ಇವುಗಳನ್ನು ಪರಿಗಣಿಸದೆ ಸರ್ಕಾರಿ ಆದೇಶದ ಮೇರೆಗೆ ಕಡ್ಡಾಯವಾಗಿ ಕಾರ್ಯನಿರ್ವಹಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು. ಶಿಕ್ಷಕರು ಶಾಲೆಯಲ್ಲಿ ಮಕ್ಕಳಿಗೆ ಶಿಕ್ಷಣ ನೀಡುವುದರ ಜೊತೆಗೆ ಸರ್ಕಾರ ವಹಿಸುವ ಹೆಚ್ಚುವರಿ ಕೆಲಸಗಳನ್ನೂ ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದಾರೆ. ಬೋಧನಾ ಕಾರ್ಯಕ್ಕೆ ಅಡ್ಡಿಯಾಗದಂತೆ ಹೆಚ್ಚುವರಿ ಜವಾಬ್ದಾರಿಗಳನ್ನು ನೀಡುವ ವ್ಯವಸ್ಥೆ ರೂಪಿಸಬೇಕು ಎಂದು ಆಗ್ರಹಿಸಿದರು.

ಕಾರ್ಯಕ್ರಮದಲ್ಲಿ ಸೇವೆಯಿಂದ ನಿವೃತ್ತರಾದ ಶಿಕ್ಷಕರನ್ನು ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು. ದೀರ್ಘಕಾಲ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಶಿಕ್ಷಕರ ಸೇವೆಯನ್ನು ಸ್ಮರಿಸಲಾಯಿತು. ಶಿಕ್ಷಕರಿಗೆ ಅಭಿನಂದನಾ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್. ಎಸ್. ಚೇತನ್, ಹಾಸನ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಎಸ್. ಕೃಷ್ಣಮೂರ್ತಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಿ.ಪಿ. ಕೃಷ್ಣಗೌಡ, ರಾಜ್ಯ ಸಂಘಟನಾ ಕಾರ್ಯದರ್ಶಿ ಸುಂದರೇಶ್, ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಕೆ. ರಘು, ಎಸ್‌ಸಿ/ಎಸ್‌ಟಿ ಸಂಘದ ಜಿಲ್ಲಾಧ್ಯಕ್ಷ ರಾಜೇಂದ್ರ ದೊಡ್ಡಮಗ್ಗೆ, ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಬಸವರಾಜು, ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಲಕ್ಷ್ಮೀಕಾಂತ್, ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷೆ ಆರ್. ಆಶಾ, ಚೈತ್ರಾ ಮಂಜೇಗೌಡ, ನಾಯಕರಹಳ್ಳಿ ಮಂಜೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ರಂಗನಾಥ್, ನಾರಾಯಣ್, ವರದರಾಜು, ಗೌರವಾಧ್ಯಕ್ಷ ಅಣ್ಣಪ್ಪ, ಆನಂದ್, ಉಮೇಶ್, ದಿನೇಶ್, ಪ್ರಧಾನ ಕಾರ್ಯದರ್ಶಿ ವಿ.ಜಿ. ದ್ಯಾವೇಗೌಡ, ತಾಲೂಕು ಅಧ್ಯಕ್ಷ ಗೌಡಲೋಹಿತ್, ಉಪಾಧ್ಯಕ್ಷ ಮೋಹನ್ ಕುಮಾರ್, ವಿಜಯ್ ಸೇರಿದಂತೆ ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು. ವಾಣಿ ಪ್ರಾರ್ಥಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೈಸ್‌ ರಸ್ತೇಲಿ ಟೋಲ್‌ ಸಂಗ್ರಹ ತಕ್ಷಣ ನಿಷೇಧಿಸಿ: ಸಚಿವ ಎಚ್‌ಡಿಕೆ
ಬಿ.ವೈ. ರಾಘವೇಂದ್ರ ಪ್ರಯತ್ನದಿಂದ ಜಿಲ್ಲೆ ಅಭಿವೃದ್ಧಿ: ಶಾಸಕ‌ ಆರಗ ಜ್ಞಾನೇಂದ್ರ