ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಅಡಕೆ ಬೆಳೆಗಾರರ ಬೇಡಿಕೆಗಳಿಗೆ ಸ್ಪಂದಿಸಿರುವ ಪ್ರಧಾನಮಂತ್ರಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇದೀಗ ಅಡಕೆ ಬೆಳೆ ಹಳದಿ ರೋಗ ಬಾಧಿತ ಸುಳ್ಯ ತಾಲೂಕಿನಲ್ಲಿ ಹಳದಿ ರೋಗದ ಲಕ್ಷಣ, ಪ್ರಸರಣ ಹಾಗೂ ವ್ಯಾಪ್ತಿ ಮುಂತಾದವಗಳ ಬಗ್ಗೆ ವೈಜ್ಞಾನಿಕವಾಗಿ ಅಧ್ಯಯನ ಮಾಡುವುದಕ್ಕೆ ಸುಧಾರಿತ ಡ್ರೋನ್ ಆಧಾರತ ವೈಮಾನಿಕ ಸಮೀಕ್ಷಾ ಕಾರ್ಯವನ್ನು ಆರಂಭಿಸಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಮಂಗಳೂರು
ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಅಡಕೆ ಬೆಳೆಗಾರರ ಬೇಡಿಕೆಗಳಿಗೆ ಸ್ಪಂದಿಸಿರುವ ಪ್ರಧಾನಮಂತ್ರಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇದೀಗ ಅಡಕೆ ಬೆಳೆ ಹಳದಿ ರೋಗ ಬಾಧಿತ ಸುಳ್ಯ ತಾಲೂಕಿನಲ್ಲಿ ಹಳದಿ ರೋಗದ ಲಕ್ಷಣ, ಪ್ರಸರಣ ಹಾಗೂ ವ್ಯಾಪ್ತಿ ಮುಂತಾದವಗಳ ಬಗ್ಗೆ ವೈಜ್ಞಾನಿಕವಾಗಿ ಅಧ್ಯಯನ ಮಾಡುವುದಕ್ಕೆ ಸುಧಾರಿತ ಡ್ರೋನ್ ಆಧಾರತ ವೈಮಾನಿಕ ಸಮೀಕ್ಷಾ ಕಾರ್ಯವನ್ನು ಆರಂಭಿಸಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.ಕಳೆದ ಆಗಸ್ಟ್ನಲ್ಲಿ ಕರ್ನಾಟಕದ ಅಡಕೆ ಬೆಳೆಯುವ ಜಿಲ್ಲೆಗಳ ಸಂಸದರು, ರಾಜ್ಯದ ಸಚಿವರು, ಅಡಕೆ ಬೆಳೆಗಾರರ ಸಂಸ್ಥೆಗಳನ್ನು ಒಳಗೊಂಡ ಜಂಟಿ ನಿಯೋಗ ದೆಹಲಿಯಲ್ಲಿ ಕೃಷಿ ಸಚಿವ ಶಿವರಾಜ್ ಚೌಹಾಣ್ ಅವರನ್ನು ಭೇಟಿ ಮಾಡಿ ಅಡಕೆ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮನವರಿಕೆ ಮಾಡಿತ್ತು. ಈ ವೇಳೆ ಸಂಸದ ಕ್ಯಾ. ಚೌಟ ಅವರು ಕೂಡ ಎಲೆ ಚುಕ್ಕೆ ಹಾಗೂ ಹಳದಿ ರೋಗ ಸೇರಿದಂತೆ ಅಡಕೆ ಬೆಳೆಗೆ ಕಾಡುತ್ತಿರುವ ಹಲವು ಸಮಸ್ಯೆಗಳಿಂದ ರೈತರು ತೀವ್ರ ನಷ್ಟ ಅನುಭವಿಸುತ್ತಿದ್ದು, ಅವರ ಸಂಕಷ್ಟಕ್ಕೆ ಸ್ಪಂದಿಸುವಂತೆ ಮಾನವಿ ಮಾಡಿದ್ದರು. ಈ ವೇಳೆ ಜಂಟಿ ನಿಯೋಗ ಅಡಕೆ ಹಳದಿ ಎಲೆ ಶಿಲೀಂದ್ರ ಮತ್ತು ಇತರ ರೋಗಗಳಿಂದ ದೀರ್ಘಾವಧಿಯ ಅಧ್ಯಯನ ಮಾಡಲು ಮತ್ತು ಪರಿಹಾರ ಕಂಡುಹಿಡಿಯಲು ಪ್ರತಿಷ್ಟಿತ ಸಂಶೋಧನಾ ಸಂಸ್ಥೆಯಿಂದ ಸಮಗ್ರ ಅಧ್ಯಯ ನಡೆಸಬೇಕು ಎಂಬ ಬೇಡಿಕೆ ಸಚಿವರ ಮುಂದಿಟ್ಟಿತ್ತು. ಈ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಸರ್ಕಾರ ನಿಯೋಗವನ್ನು ಕಳುಹಿಸಿದೆ.ಕೇಂದ್ರ ಸರ್ಕಾರ ನಿರ್ದೇಶನದಂತೆ ಕಾಸರಗೋಡಿನಲ್ಲಿರುವ ತೋಟಗಾರಿಕಾ ಬೆಳೆಗಳ ಸಂಶೋಧನಾ ಸಂಸ್ಥೆ(ಸಿಪಿಸಿಆರ್ಐ), ಬೆಂಗಳೂರಿನ ಇಸ್ರೋ ಸಂಶೋಧನಾ ವಿಭಾಗ ಹಾಗೂ ಹೈದರಾಬಾದ್ನ ಇಸ್ರೋ ವೈಮಾನಿಕ ವಿಭಾಗ ಜಂಟಿಯಾಗಿ ಈ ಸರ್ವೆ ಕಾರ್ಯವನ್ನು ಕೈಗೆತ್ತಿಕೊಂಡಿದೆ.
ಈ ತಂಡ ಸುಳ್ಯ ತಾಲೂಕಿನ ಆರಂತೋಡು ಮತ್ತು ಪೆರಾಜೆ ಗ್ರಾಮದಲ್ಲಿ ಡ್ರೋನ್ ಸಮೀಕ್ಷೆ ನಡೆಸುತ್ತಿದೆ. ಈ ಎರಡು ಪ್ರದೇಶಗಳ ಒಟ್ಟು 2.5 ಚದರ ಕಿ.ಮೀ. ವ್ಯಾಪ್ತಿಯಲ್ಲಿ ಈ ಸಮೀಕ್ಷಾ ಕಾರ್ಯ ನಡೆಯುತ್ತಿದೆ. ಸುಧಾರಿತ ಡ್ರೋನ್ ಮೂಲಕ ಅಡಕೆ ಮರಗಳ ಎಲೆಗಳ ಫೋಟೊ ಮತ್ತು ವಿಡಿಯೋ ಸೆರೆಹಿಡಿಯಲಾಗುತ್ತದೆ. ಇಲ್ಲಿನ ಚಿತ್ರಗಳನ್ನು ಸೂಕ್ಷ್ಮವಾಗಿ ವಿಶ್ಲೇಷಿಸಲಾಗುತ್ತದೆ. ಈ ಮೂಲ ಚಿತ್ರಗಳನ್ನು ಬೇಸ್ ಆಗಿ ಪರಿಗಣಿಸಿ ಅದನ್ನು ಇಸ್ರೋದ ಉಪಗ್ರಹಕ್ಕೆದತ್ತಾಂಶವಾಗಿ ನೀಡಿ, ಆ ಮೂಲಕ ಕೇವಲ ಪ್ರಾಯೋಗಿಕ ಪ್ರದೇಶವಲ್ಲದೆ, ದೊಡ್ಡ ವ್ಯಾಪ್ತಿಯಲ್ಲಿ ಒಟ್ಟು ಅಡಕೆ ಎಲೆ ಹಳದಿ ರೋಗ ಪೀಡಿತ ಪ್ರದೇಶಗಳ ಸಮಗ್ರ ಸಮೀಕ್ಷೆ ನಡೆಯಲಿದೆ ಎಂದು ಕ್ಯಾ. ಚೌಟ ಹೇಳಿದ್ದಾರೆ.ಅಡಕೆ ಬೆಳೆಗೆ ಬಾಧಿಸಿರುವ ಎಲೆ ಹಳದಿ ರೋಗ ಸಮಸ್ಯೆ ಪರಿಹಾರಕ್ಕೆ ಇದೊಂದು ಮಹತ್ವದ ಹೆಜ್ಜೆಯಾಗಿದ್ದು, ಈ ಸಮೀಕ್ಷೆಯಲ್ಲಿ ವೈಜ್ಞಾನಿಕ ಹಾಗೂ ನಿಖರ ಅಂಕಿ-ಅಂಶಗಳು ದೊರೆಯಲಿದೆ. ಅಲ್ಲದೆ, ಎಲೆ ಹಳದಿ ರೋಗ ಪೀಡಿತ ಅಡಕೆ ಮರಗಳಲ್ಲಿ ಆಗುವ ಬದಲಾವಣೆಗಳ ಬಗ್ಗೆಯೂ ನಿರಂತರ ನಿಗಾ ವಹಿಸಲಾಗುತ್ತದೆ. ಅಡಕೆ ಬೆಳೆಗೆ ಆಗುವ ರೋಗ ಪ್ರಸರಣದ ವೇಗ ಹಾಗೂ ವ್ಯಾಪ್ತಿ ಬಗ್ಗೆಯೂ ಮಾಹಿತಿ ಲಭ್ಯವಾಗಲಿದೆ ಎಂದು ಸಂಸದ ಕ್ಯಾ. ಚೌಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.