ಪರಶಿವಮೂರ್ತಿ ಮಾಟಲದಿನ್ನಿ
ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಉಚಿತ ಬಸ್ಪಾಸ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯಲ್ಲಿ ಕಳೆದ ಮೂರು ದಿನಗಳಿಂದ ಉಂಟಾಗಿರುವ ಸರ್ವರ್ ಸಮಸ್ಯೆಯಿಂದ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ.
ಬಸ್ಪಾಸ್ಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಮುಂದಾಗಿರುವ ವಿದ್ಯಾರ್ಥಿಗಳಿಗೆ ಸರ್ವರ್ ಸಮಸ್ಯೆ ಹಾಗೂ ನಿರ್ದಿಷ್ಟವಾಗಿ ಹತ್ತುವ (ಬೋರ್ಡಿಂಗ್ ಪಾಯಿಂಟ್), ಇಳಿಯುವ (ಡ್ರಾಪ್ ಪಾಯಿಂಟ್) ಸ್ಥಳವನ್ನು ತೋರಿಸಲುತ್ತಿಲ್ಲ. ಅಲ್ಲದೆ ಮೊಬೈಲ್ ಸಂಖ್ಯೆಗೆ ಒಟಿಪಿ ಬರುತ್ತಿಲ್ಲ. ಇದರಿಂದ ಅರ್ಜಿ ಪ್ರಕ್ರಿಯೆ ಪೂರ್ಣಗೊಳ್ಳುತ್ತಿಲ್ಲ.2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಬಸ್ಪಾಸ್ ಪಡೆಯಲು ಸಾವಿರಾರು ವಿದ್ಯಾರ್ಥಿಗಳು ಗ್ರಾಮ ಒನ್, ಕರ್ನಾಟಕ ಒನ್ ಸೇವಾ ಕೇಂದ್ರಗಳಿಗೆ ಭೇಟಿ ನೀಡುತ್ತಿದ್ದಾರೆ. ತಾಂತ್ರಿಕ ದೋಷಗಳಿಂದ ಅರ್ಜಿಗಳನ್ನು ಸಲ್ಲಿಸಲು ಸಾಧ್ಯವಾಗದೇ ವಿದ್ಯಾರ್ಥಿಗಳು ಮತ್ತು ಪೋಷಕರು ದಿನನಿತ್ಯವಾಗಿ ಪರದಾಡುವಂತಾಗಿದೆ.
ಕಳೆದ ಮೂರು ದಿನಗಳಿಂದ ಕರ್ನಾಟಕ ಒನ್ ಹಾಗೂ ಗ್ರಾಮ ಒನ್ ಕೇಂದ್ರಕ್ಕೆ ಬಸ್ ಪಾಸ್ ಅರ್ಜಿ ಸಲ್ಲಿಸಲು ಅಲೆದಾಡುತ್ತಿದ್ದರೂ ಒಟಿಪಿ ಬರುತ್ತಿಲ್ಲ. ದಿನನಿತ್ಯವೂ ಪ್ರಯಾಣ ವೆಚ್ಚ ಕೊಟ್ಟು ಶಾಲಾ ಕಾಲೇಜಿಗೆ ಹೋಗಿ ಬರಬೇಕಿದೆ. ಸರ್ವರ್ ಸಮಸ್ಯೆ ಬಗೆಹರಿಸಿ ವಿದ್ಯಾರ್ಥಿಗಳಿಗೆ ಅನೂಕೂಲ ಮಾಡಿಕೊಡಬೇಕಿದೆ.
ಹೊಸ ಬಸ್ ಪಾಸ್ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಒಟಿಪಿ ಸಮಸ್ಯೆ ಎದುರಾಗುತ್ತಿದ್ದು, ಸರಿಯಾಗಿ ಸರ್ವರ್ ಕಾರ್ಯನಿರ್ವಹಿಸುತ್ತಿಲ್ಲ. ವಿದ್ಯಾರ್ಥಿ ಸ್ವಂತ ಸ್ಥಳ ಹಾಗೂ ಶಾಲಾ-ಕಾಲೇಜು ಇರುವ ಸ್ಥಳದ ಬೋರ್ಡಿಂಗ್ ಪಾಯಿಂಟ್ ಹಾಗೂ ಡ್ರಾಪಿಂಗ್ ಪಾಯಿಂಟ್ ಸಮಸ್ಯೆ ಎದುರಾಗುತ್ತಿದೆ. ಅಧಿಕಾರಿಗಳು ಸಮಸ್ಯೆಗೆ ಪರಿಹಾರ ನೀಡಬೇಕು.
ಜೂ.13ರ ವರೆಗೆ 469 ಬಸ್ ಪಾಸ್ ವಿತರಿಸಲಾಗಿದ್ದು, ಸದ್ಯ ಸರ್ವರ್ ಸಮಸ್ಯೆ ಎದುರಾಗಿದೆ. ಬೋರ್ಡಿಂಗ್ ಪಾಯಿಂಟ್ ಹಾಗೂ ಡ್ರಾಪಿಂಗ್ ಪಾಯಿಂಟ್ ಬಗ್ಗೆ ಇರುವ ಸಮಸ್ಯೆಯನ್ನು ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ.
ಶೈಕ್ಷಣಿಕ ಭವಿಷ್ಯಕ್ಕೆ ಹಿನ್ನಡೆ:ವಿದ್ಯಾರ್ಥಿಗಳಿಗೆ ಬಸ್ಪಾಸ್ ಸೌಲಭ್ಯ ಅತ್ಯಂತ ಅಗತ್ಯವಾಗಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪ್ರತಿದಿನ ಹತ್ತಾರು ಕಿಲೋಮೀಟರ್ ದೂರ ಪ್ರಯಾಣಿಸಿ ಶಾಲಾ, ಕಾಲೇಜುಗಳಿಗೆ ಹಾಜರಾಗುತ್ತಾರೆ. ಬಸ್ಪಾಸ್ ಇಲ್ಲದೆ ಪ್ರಯಾಣ ವೆಚ್ಚ ಹೆಚ್ಚಾಗುವುದರಿಂದ ಆರ್ಥಿಕ ಹೊರೆ ಜತೆಗೆ ವಿದ್ಯಾರ್ಥಿಗಳು ತರಗತಿಗಳಿಗೆ ಗೈರಾಗುವ ಸಾಧ್ಯತೆಯೂ ಇರುತ್ತದೆ. ಸಂಬಂಧಿಸಿದ ಇಲಾಖೆಗಳು ಹಾಗೂ ತಾಂತ್ರಿಕ ತಜ್ಞರು ಕೂಡಲೇ ಸರ್ವರ್ ಸಮಸ್ಯೆ ಪರಿಹರಿಸಿ ಅರ್ಜಿ ಪ್ರಕ್ರಿಯೆ ಸುಗಮಗೊಳಿಸಬೇಕು ಎಂದು ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಗ್ರಹಿಸಿದ್ದಾರೆ.