ತಂತ್ರಜ್ಞಾನ ನಿಂತ ನೀರಿನಂತೆ ಸ್ಥಿರವಲ್ಲ

KannadaprabhaNewsNetwork |  
Published : Dec 20, 2025, 03:00 AM IST
ಬೆಳಗಾವಿಯ ಎಸ್‌ಜಿ ಬಿಐಟಿ ಕಾಲೇಜಿನಲ್ಲಿ ಪ್ರಥಮ ಅಂತಾರಾಷ್ಟ್ರೀಯ ಭವಿಷ್ಯಾತ್ಮಕ ತಂತ್ರಜ್ಞಾನಗಳ ಅಭಿವೃದ್ಧಿ ಸಮ್ಮೇಳನವನ್ನು ವಿಟಿಯು ಕುಲಪತಿ ಪ್ರೊ. ವಿದ್ಯಾಶಂಕರ ಉದ್ಘಾಟಿಸಿದರು | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ವಿಶ್ವದ ನಿರ್ಣಾಯಕ ತಂತ್ರಜ್ಞಾನಗಳಲ್ಲಿ ಕೃತಕ ಬುದ್ಧಿಮತ್ತೆ, ಬಾಹ್ಯಾಕಾಶ ಹಾಗೂ ಜೈವಿಕ ತಂತ್ರಜ್ಞಾನ ಪ್ರಮುಖವಾಗಿವೆ. ಈ ಕ್ಷೇತ್ರಗಳಲ್ಲಿನ ಸಂಶೋಧನೆಗೆ ಸಂಬಂಧಿಸಿದಂತೆ ಅಮೆರಿಕಾ ಮೊದಲ ಸ್ಥಾನದಲ್ಲಿದ್ದರೆ, ಚೀನಾ ದ್ವಿತೀಯ ಸ್ಥಾನದಲ್ಲಿದ್ದು, ಭಾರತ 9ನೇ ಸ್ಥಾನದಲ್ಲಿದೆ. ಹೀಗಾಗಿ ಮುಂದುವರಿದ ರಾಷ್ಟ್ರಗಳು ಮುಂದಿನ ದಿನಗಳಲ್ಲಿ ನಾವು ಜಗತ್ತನ್ನೇ ಆಳಬಲ್ಲೆವು ಎನ್ನುತ್ತಿವೆ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಅಭಿಪ್ರಾಯ ಪಟ್ಟರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ವಿಶ್ವದ ನಿರ್ಣಾಯಕ ತಂತ್ರಜ್ಞಾನಗಳಲ್ಲಿ ಕೃತಕ ಬುದ್ಧಿಮತ್ತೆ, ಬಾಹ್ಯಾಕಾಶ ಹಾಗೂ ಜೈವಿಕ ತಂತ್ರಜ್ಞಾನ ಪ್ರಮುಖವಾಗಿವೆ. ಈ ಕ್ಷೇತ್ರಗಳಲ್ಲಿನ ಸಂಶೋಧನೆಗೆ ಸಂಬಂಧಿಸಿದಂತೆ ಅಮೆರಿಕಾ ಮೊದಲ ಸ್ಥಾನದಲ್ಲಿದ್ದರೆ, ಚೀನಾ ದ್ವಿತೀಯ ಸ್ಥಾನದಲ್ಲಿದ್ದು, ಭಾರತ 9ನೇ ಸ್ಥಾನದಲ್ಲಿದೆ. ಹೀಗಾಗಿ ಮುಂದುವರಿದ ರಾಷ್ಟ್ರಗಳು ಮುಂದಿನ ದಿನಗಳಲ್ಲಿ ನಾವು ಜಗತ್ತನ್ನೇ ಆಳಬಲ್ಲೆವು ಎನ್ನುತ್ತಿವೆ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಅಭಿಪ್ರಾಯ ಪಟ್ಟರು.

ಶಿವಬಸವ ನಗರದ ಎಸ್.ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶುಕ್ರವಾರ ಜರುಗಿದ ಪ್ರಥಮ ಅಂತಾರಾಷ್ಟ್ರೀಯ ಭವಿಷ್ಯಾತ್ಮಕ ತಂತ್ರಜ್ಞಾನಗಳ ಅಭಿವೃದ್ಧಿ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಭಾರತ ಈ ಎಲ್ಲ ರಾಷ್ಟ್ರಗಳಿಗೆ ಪೈಪೋಟಿ ನೀಡಬೇಕೆಂದರೆ ಮೊದಲು ಈ ಮೂರು ಕ್ಷೇತ್ರಗಳಲ್ಲಿ ಉನ್ನತ ಸಂಶೋಧನೆ ಮಾಡಬೇಕು. ತಂತ್ರಜ್ಞಾನ ನಿಂತ ನೀರಿನಂತೆ ಸ್ಥಿರವಾಗಿರುವುದಿಲ್ಲ, ಬದಲಿಗೆ ಅದು ಪ್ರತಿನಿತ್ಯ ಬದಲಾಗುತ್ತಿರುತ್ತದೆ. ದೇಶದ ಇಂದಿನ ಯುವ ಸಂಶೋಧಕರು ಇದನ್ನರಿತು ಲಭ್ಯ ಅವಕಾಶಗಳನ್ನು ಬಳಸಿಕೊಂಡು ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತವನ್ನು ಮುನ್ನಡೆಸಬೇಕು ಎಂದು ಅಭಿಪ್ರಾಯ ಹಂಚಿಕೊಂಡರು.

ಸಂಶೋಧನೆಗಳು ಪತ್ರಿಕಾ ವರದಿಗಳಿಗೆ ಮಾತ್ರ ಸೀಮಿತವಾಗಬಾರದು, ಬದಲಿಗೆ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸಬೇಕು. ಜಗತ್ತಿನ ಎಲ್ಲಾ ರಾಷ್ಟ್ರಗಳಿಗಿಂತ ಭಾರತ ಅತಿ ಹೆಚ್ಚು ಸಕ್ಕರೆ ಕಾಯಿಲೆ ರೋಗಿಗಳನ್ನು ಹೊಂದಿದೆ. ತಂತ್ರಜ್ಞಾನದ ಸಂಶೋಧಕರು ಏಕಮುಖವಾಗಿ ಯೋಚಿಸದೇ ಆರೋಗ್ಯ ಕ್ಷೇತ್ರದಲ್ಲಿನ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹಾವೇರಿ ವಿಶ್ವವಿದ್ಯಾಲಯದ ಕುಲಪತಿ ಡಾ.ಸುರೇಶ ಜಂಗಮಶೆಟ್ಟಿ ಮಾತನಾಡಿ, ಶಕ್ತಿಯ ಸದ್ಬಳಕೆ ಕುರಿತಾದ ದತ್ತಾಂಶಗಳು ದೇಶದಲ್ಲಿ‌ ನಿಖರವಾಗಿ ಲಭ್ಯವಿರದ ಕಾರಣ ಅನೇಕ ರಾಜ್ಯಗಳು ಇಂದು ಶಕ್ತಿಯ ಕೊರತೆ ಅನುಭವಿಸುತ್ತಿವೆ. ಸಂಶೋಧಕರಾದವರಿಗೆ ದತ್ತಾಂಶಗಳ ದಾಖಲೀಕರಣ ಬಹಳ ಪ್ರಮುಖವಾದದ್ದಾಗಿದೆ ಎಂಬುದನ್ನು ತಿಳಿಸಿದರು.

ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ನಾಗನೂರು ರುದ್ರಾಕ್ಷಿ ಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ, ಅಂತಾರಾಷ್ಟ್ರೀಯ ಮಟ್ಟದ ವಿಚಾರ ಸಂಕೀರ್ಣಗಳಲ್ಲಿ ಸಂಶೋಧನಾ ಪಬಂಧಗಳ ಮಂಡನೆಯೇ ವಿದ್ಯಾರ್ಥಿಗಳ ಜೀವನದಲ್ಲಿ ಒಂದು ದೊಡ್ಡ ಸಾಧನೆ. ವಿದ್ಯಾರ್ಥಿ ದೆಸೆಯಲ್ಲಿಯೇ ದೊರೆತ ಸಂಶೋಧನಾ ಗುಣವನ್ನು ಪೋಷಿಸಿ, ರಾಷ್ಟ್ರದ ಪ್ರಗತಿಗೆ ಸಹಕಾರಿಯಾಗುವ ಸಂಶೋಧನೆಗಳನ್ನು ಕೈಗೊಳ್ಳಲು ಪ್ರಯತ್ನಿಸಬೇಕು ಎಂದರು.

ಎಸ್.ಜಿ.ಬಿ.ಐ.ಟಿ ಕಾಲೇಜಿನ ಸ್ಥಾನಿಕ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಎಫ್.ವಿ.ಮಾನ್ವಿ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಚಾರ್ಯ ಡಾ.ಬಿ.ಆರ್.ಪಟಗುಂದಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕರಾದ ಡಾ.ಸುಪಣ್ಣ.ಎಸ್.ಶಿರಗುಪ್ಪೆ, ಡಾ.ಶಂಕರಗೌಡ ಪಾಟೀಲ, ಡಾ.ಅಶೋಕ ಹುಲಗಬಾಳಿ ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಸಕ್ಕೆ ಬೆಂಕಿ: ಹೊಗೆಯಿಂದ ಮನೆಯಲ್ಲಿ ಉಸಿರಾಡಲು ಆಗುತ್ತಿಲ್ಲ:ನಟಿ ಐಂದ್ರಿತಾ
ಕಟ್ಟುನಿಟ್ಟು ಮಾಡಿದರೂ ನಿಲ್ಲದ ಪರಪ್ಪನ ಅಗ್ರಹಾರ ಪವಾಡ