ಹದಿಹರೆಯದವರೇ ಹೆಚ್ಚು ಮಾದಕ ವ್ಯಸನಿಗಳು

KannadaprabhaNewsNetwork | Published : Jun 28, 2025 12:18 AM

ಇತ್ತೀಚಿನ ದಿನಗಳಲ್ಲಿ ಹದಿಹರೆಯದವರು ಮತ್ತು ಕಾಲೇಜು ವಿದ್ಯಾರ್ಥಿಗಳು ಹೆಚ್ಚಾಗಿ ಮಾದಕ ವಸ್ತುಗಳ ವ್ಯಸನಿಗಳಾಗಿದ್ದಾರೆ ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿಗಳಾದ ಡಾ ನಾಗೇಶ್.ಪಿ ಆರಾಧ್ಯ ಕಳವಳ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗದ ಮನೋವೈದ್ಯರಾದ ಡಾ. ಶಿಲ್ಪ ಅವರು ಮಾದಕ ವಸ್ತು ಎಂದರೇನು, ಇವುಗಳ ಬಳಕೆಗೆ ಕಾರಣಗಳು ಮತ್ತು ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ ಚಿಕಿತ್ಸೆಯ ಕುರಿತಂತೆ ಸವಿವರವಾಗಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಇತ್ತೀಚಿನ ದಿನಗಳಲ್ಲಿ ಹದಿಹರೆಯದವರು ಮತ್ತು ಕಾಲೇಜು ವಿದ್ಯಾರ್ಥಿಗಳು ಹೆಚ್ಚಾಗಿ ಮಾದಕ ವಸ್ತುಗಳ ವ್ಯಸನಿಗಳಾಗಿದ್ದಾರೆ ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿಗಳಾದ ಡಾ ನಾಗೇಶ್.ಪಿ ಆರಾಧ್ಯ ಕಳವಳ ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಹಾಸನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಹಾಸನ ಮತ್ತು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ, ಹಾಗೂ ಸಂತ ಜೋಸೇಫರ ಪದವಿಪೂರ್ವ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಾದಕ ವಸ್ತು ವ್ಯಸನ ಮತ್ತು ಅಕ್ರಮ ಕಳ್ಳ ಸಾಗಣೆ ವಿರೋಧಿ ದಿನದ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಿದ ಅವರು, ಮಾದಕ ವಸ್ತುಗಳಿಂದ ಉಂಟಾಗುವ ಪರಿಣಾಮಗಳಿಂದ ಆರೋಗ್ಯ ಮತ್ತು ಅವರ ಜೀವನವನ್ನು ಹಾಳು ಮಾಡಿಕೊಳ್ಳುತ್ತಿರುವ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿದರು. ಮನೋಚೈತನ್ಯ ಕ್ಲಿನಿಕ್‌ನಡಿಯಲ್ಲಿ ಜಿಲ್ಲಾ ಮಾನಸಿಕ ಆರೋಗ್ಯ ತಂಡವು ಕಾರ್ಯ ನಿರ್ವಹಿಸುತ್ತಿದ್ದು, ತಂಡದ ದೂರವಾಣಿ ಸಂಖ್ಯೆ: ೯೩೫೩೫೯೭೫೨೧ ಆಗಿದ್ದು ಯಾವುದೇ ಮಾನಸಿಕ ಸಮಸ್ಯೆಗಳಿದ್ದಲ್ಲಿ ಸಂಪರ್ಕಿಸಬಹುದಾಗಿರುತ್ತದೆ ಎಂದರು.

ಬೇಲೂರು ತಾಲೂಕಿನಲ್ಲಿ ನಿಮ್ಹಾನ್ಸ್, ಬೆಂಗಳೂರು ಇವರ ಸಹಯೋಗದೊಂದಿಗೆ ನಮನ್ ಕಾರ್ಯಕ್ರಮ (ತಾಲ್ಲೂಕು ಮಾನಸಿಕ ಆರೋಗ್ಯ ಕಾರ್ಯಕ್ರಮ) ನಡೆಯುತ್ತಿರುವುದಾಗಿ ತಿಳಿಸಿದರು ಹಾಗೂ ಜಿಲ್ಲಾ ಆಸ್ಪತ್ರೆ, ಹಾಸನ ಕೊಠಡಿ ಸಂಖ್ಯೆ-೨೦ ಮಾನಸಿಕ ಆರೋಗ್ಯ ವಿಭಾಗ ಇಲ್ಲಿ ವ್ಯಸನಿಗಳಿಗೆ ಮಾದಕ ವ್ಯಸನದಿಂದ ಮುಕ್ತಿ ಹೊಂದಲು ಉಚಿತ ಚಿಕಿತ್ಸೆ ದೊರೆಯುತ್ತದೆ ಹಾಗೂ ಹಲವು ಮದ್ಯಪಾನ ವ್ಯಸನಮುಕ್ತಿ ಚಿಕಿತ್ಸಾ ಕೇಂದ್ರಗಳಲ್ಲಿಯೂ ಮಾದಕ ವಸ್ತು ವ್ಯಸನಕ್ಕೆ ಬಲಿಯಾದವರಿಗೆ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಇಂತಹ ದಿನಾಚರಣೆಗಳನ್ನು ನಡೆಸುವ ಉದ್ದೇಶ ಹಾಗೂ ಗುರಿಯ ಬಗೆಗೆ ವಿವರಿಸುತ್ತಾ ವಿದ್ಯಾರ್ಥಿಗಳಿಗೆ ಉಚಿತ ಮಾನಸಿಕ ಆರೋಗ್ಯ ಸಹಾಯವಾಣಿ ೧೪೪೧೬ನ ಬಗ್ಗೆ ತಿಳಿಸುತ್ತಾ ಈ ಉಚಿತ ದೂರವಾಣಿಯು ದಿನದ 24 ಗಂಟೆಯೂ ಕೆಲಸ ನಿರ್ವಹಿಸುತ್ತಿದ್ದು ಮಾನಸಿಕ ಆರೋಗ್ಯ ಕುರಿತ ಯಾವುದೇ ವಿಚಾರವನ್ನು ಪರಿಹರಿಸಿಕೊಳ್ಳ ಬಹುದಾಗಿದೆ ಎಂದು ತಿಳಿಸಿದರು.ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗದ ಮನೋವೈದ್ಯರಾದ ಡಾ. ಶಿಲ್ಪ ಅವರು ಮಾದಕ ವಸ್ತು ಎಂದರೇನು, ಇವುಗಳ ಬಳಕೆಗೆ ಕಾರಣಗಳು ಮತ್ತು ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ ಚಿಕಿತ್ಸೆಯ ಕುರಿತಂತೆ ಸವಿವರವಾಗಿ ತಿಳಿಸಿದ್ದಾರೆ.ಸಂತ ಜೋಸೇಫರ ಪದವಿ ಪೂರ್ವ ಕಾಲೇಜಿನ ಫಾದರ್ ಮೆಲ್‌ವಿನ್ ಎಂ ಮೆಂಡೋನ್ಸಾ ಅವರು ಮಾತನಾಡಿ, ಮಾನಸಿಕ ಸಮಸ್ಯೆಗಳು ಯಾರಿಗಾದರೂ ಬರಬಹುದು. ಬಂದಂತಹ ಸಮಯದಲ್ಲಿ ಸೂಕ್ತ ಚಿಕಿತ್ಸೆಯನ್ನು ಪಡೆಯಬೇಕು ಹಾಗೂ ಇಂತಹ ಅರಿವು ಕಾರ್ಯಾಗಾರಗಳ ಮೂಲಕ ವಿದ್ಯಾರ್ಥಿಗಳು ಮಾದಕ ವಸ್ತುಗಳ ಬಳಕೆಯನ್ನು ತಡೆಗಟ್ಟಬೇಕು, ದೈಹಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯವು ಅವಶ್ಯಕವಾಗಿದ್ದು, ವಿದ್ಯಾರ್ಥಿಗಳು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಮಂಜುಳಾ ಮತ್ತಿತರರು ಹಾಗೂ ಕಾಲೇಜು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.