ಧಾರವಾಡ:
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಾಯುಕ್ತ ದಾಳಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿಯೇ ಸಿಕ್ಕಿಬಿದ್ದ ತಹಸೀಲ್ದಾರ್ ಸಚ್ಚಿದಾನಂದ ಕುಚನೂರ ಹಿಂದೆ ರಾಜಕೀಯ ವ್ಯಕ್ತಿಗಳಿದ್ದು, ಅವರ ಬಗ್ಗೆಯೂ ಲೋಕಾಯುಕ್ತರು ವಿಚಾರಣೆ ನಡೆಸಬೇಕು. ಈ ಘಟನೆಯು ನಾಚಿಕೆ ಪಡುವಂತಾಗಿದೆ. ಜಿಲ್ಲೆಯ ಬಹುತೇಕ ಎಲ್ಲ ಇಲಾಖೆಗಳಲ್ಲಿ ಭ್ರಷ್ಟ ಅಧಿಕಾರಿಗಳು ತುಂಬಿಕೊಂಡಿದ್ದಾರೆ. ಅದರಲ್ಲಿಯೂ ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ ಎಂದು ಆರೋಪಿಸಿದರು.
ಇತ್ತೀಚಿನ ದಿನಗಳಲ್ಲಿ ಭೂಮಿ ಬೆಲೆ ಹೆಚ್ಚಳ ಆಗಿದ್ದರಿಂದ ನಗರ ಪಕ್ಕದ ರೈತರ ಜಮೀನಿಗಳ ದಾಖಲೆ ತಿದ್ದುಪಡಿ ಮಾಡಿ, ನಕಲಿ ದಾಖಲೆ ಸೃಜಿಸಿ ವಂಚಿಸುವ ದಂಧೆ ಅವ್ಯಾಹತವಾಗಿ ನಡೆಯುತ್ತಿದೆ. ಧಾರವಾಡ ಸುತ್ತಲಿನ ಗುಡ್ಡ-ಬೆಟ್ಟಗಳು ರಿಯಲ್ ಎಸ್ಟೇಟ್ ದಂಧೆಕೋರರ ಪಾಲಾಗುತ್ತಿವೆ. ಜಿಲ್ಲಾಧಿಕಾರಿಗಳು ಏನು ಮಾಡುತ್ತಿದ್ದಾರೆ? ಅಧಿಕಾರಿಗಳು ಭೂ ದಾಖಲೆಗಳಲ್ಲಿ ಮನಬಂದಂತೆ ತಿದ್ದುಪಡಿ ಮಾಡುತ್ತಾ, ಶ್ರೀಮಂತ ಕುಳಗಳು ಖರೀದಿ ಮಾಡಿದ ನಂತರ ದಾಖಲೆ ಸರಿಪಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆಪಾದಿಸಿದರು.ಕೋಟಿ ಹಣ ನೀಡಿ ವಗಾವಣೆ ಮಾಡಿಸಿಕೊಂಡು ಬಂದಿದ್ದು, ನಮ್ಮನ್ನು ಯಾರೂ ಏನೂ ಮಾಡಲಾರರು ಎಂದು ಅಧಿಕಾರಿಗಳು ಬಹಿರಂಗವಾಗಿ ಹೇಳಿಕೊಳ್ಳುತ್ತಿದ್ದಾರೆ. ವಾಸ್ತವ ಪರಿಸ್ಥಿತಿ ಹೀಗಿದ್ದರೂ ಜನಪ್ರತಿನಿಧಿಗಳು ಮೌನ ವಹಿಸಿರುವುದು ಏಕೆ ಎಂದು ಪ್ರಶ್ನಿಸಿದರು. ಇಂತಹ ಭ್ರಷ್ಟ ಅಧಿಕಾರಿಗಳ ವರ್ಗಾವಣೆಗೆ ಶಿಫಾರಸು ಪತ್ರ ನೀಡಿದವರ ಬಗ್ಗೆಯೂ ತನಿಖೆ ಆಗಬೇಕು ಎಂದು ಆಗ್ರಹಿಸಿದರು.