ಕನ್ನಡಪ್ರಭ ವಾರ್ತೆ ಮಂಡ್ಯ
೨೦೦ ಕೋಟಿ ವರ್ಷಗಳ ಇತಿಹಾಸವಿರುವ ಭೂಮಿಯನ್ನು ಭವಿಷ್ಯದ ದೃಷ್ಟಿಯಿಂದ ಉಳಿಸುವ ಕೆಲಸವಾಗಬೇಕಿದೆ. ಇದಕ್ಕಾಗಿ ವಿದ್ಯಾರ್ಥಿಗಳಿಗೆ ಭೂಮಿಯ ಮಹತ್ವವನ್ನು ತಿಳಿಸಿಕೊಡುವುದು ಅವಶ್ಯಕವಾಗಿದೆ ಎಂದು ಪಿಇಟಿ ನಿರ್ದೇಶಕ ಡಾ.ರಾಮಲಿಂಗಯ್ಯ ತಿಳಿಸಿದರು.ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪರಿಸರ ರೂರಲ್ ಡೆವಲಪ್ಮೆಂಟ್ ಸೊಸೈಟಿ ವತಿಯಿಂದ ‘ನಮ್ಮ ಭೂಮಿ ನಮ್ಮ ಭವಿಷ್ಯ’ ಎಂಬ ಘೋಷವಾಕ್ಯದಡಿ ವಿಶ್ವ ಪರಿಸರ ದಿನದ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿ ಕಾವೇರಿ ಉದ್ಯಾನವನದಲ್ಲಿ ಮಾಧ್ಯಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಚಿತ್ರಕಲಾ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.ಅಭಿವೃದ್ಧಿ ಹೆಸರಲ್ಲಿ ಮರಗಳನ್ನು ಕಡಿಯುತ್ತಿರುವುದರಿಂದ ಇತ್ತೀಚಿನ ವರುಷಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ಮನೆಯಲ್ಲಿ ಗಿಡಗಳನ್ನು ನೆಟ್ಟು ಪೋಷಿಸುವುದರಿಂದ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಹೇಳಿದರು.ಜಿಲ್ಲಾ ಪರಿಸರ ಅಧಿಕಾರಿ ಬಿ.ಪಿ.ಗೀತಾ ಮಾತನಾಡಿ, ಹಸಿರು ನಾಡು ಎನ್ನುವ ಮಂಡ್ಯ ಜಿಲ್ಲೆಯಲ್ಲಿ ಈ ಬಾರಿಯ ಬೇಸಿಗೆ ಬಿಸಿಲು ಜನರಿಗೆ ಎಷ್ಟೊಂದು ಕಷ್ಟ ಕೊಟ್ಟಿದೆ ಎಂಬುದನ್ನು ಅರಿತು ಪರಿಸರ ಉಳಿವಿಗಾಗಿ ಜನರು ಗಿಡ-ಮರಗಳನ್ನು ಬೆಳೆಸುವಂತೆ ಸಲಹೆ ನೀಡಿದರು.ಮಾನವ ದುರಾಸೆಗೊಳಗಾಗಿ ಪರಿಸರವನ್ನು ಹಾಳು ಮಾಡುತ್ತಿದ್ದಾನೆ. ಮುಂದಿನ ಪೀಳಿಗೆಗೆ ಪರಿಸರ ಉಳಿಸಲು ಇಂತಹ ಚಿತ್ರಕಲಾ ಸ್ಪರ್ಧೆಗಳನ್ನು ಆಯೋಜಿಸಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು. ೧೯೭೨ ರಿಂದ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಿಕೊಂಡು ಬರಲಾಗುತ್ತಿದ್ದು, ಈ ಭಾರಿ ‘ನಮ್ಮ ಭೂಮಿ ನಮ್ಮ ಭವಿಷ್ಯ’ ಎಂಬ ಘೋಷವಾಕ್ಯದಡಿ ವಿಶ್ವ ಪರಿಸರ ದಿನ ಆಚರಿಸಲಾಗುತ್ತಿದೆ ಎಂದರು. ಪರಿಸರ ಸಂಸ್ಥೆಯ ಅಧ್ಯಕ್ಷ ಮಂಗಲ ಎಂ.ಯೋಗೀಶ್ ಮಾತನಾಡಿ, ರಚನಾತ್ಮಕವಾಗಿ ಪರಿಸರಸ್ನೇಹಿ ಚಟುವಟಿಕೆಗಳನ್ನು ಯುವ ಜನತೆಯಲ್ಲಿ ಹಮ್ಮಿಕೊಳ್ಳುವ ಮೂಲಕ ಕಾರ್ಯಕ್ರಮ ರೂಪಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ ಕುರಿತು ಚಿತ್ರಕಲಾ ಸ್ಪರ್ಧೆ ಏರ್ಪಡಿಸಿರುವುದರಿಂದ ಮಕ್ಕಳಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡುತ್ತದೆ ಎಂದು ನುಡಿದರು. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಂಡ್ಯದಲ್ಲಿ ಸೈಕಲ್ ಜಾಥಾ ಹಮ್ಮಿಕೊಳ್ಳುವ ಮೂಲಕ ಮಿಮ್ಸ್ ಆಸ್ಪತ್ರೆ ರೋಗಿಗಳಿಗೆ ಪರಿಸರಸ್ನೇಹಿ ಬಟ್ಟೆ ಬ್ಯಾಗುಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.ಉಪ ಪರಿಸರ ಅಧಿಕಾರಿಗಳಾದ ಅಶ್ವಿನಿ, ಭವ್ಯ, ಗಾಯಕ ಸಂತೆಕಸಲಗೆರೆ ಬಸವರಾಜ್ ಸೇರಿದಂತೆ ಇತರರಿದ್ದರು.