ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಕಾಂಗ್ರೆಸ್ ಪಕ್ಷದ ಸಾಧನೆಗಳ ಬಗ್ಗೆ ಸಾಮಾನ್ಯ ಜನರಿಗೆ ತಿಳಿಸಿ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗೆ ಗೆಲುವಿಗೆ ಶ್ರಮಿಸೋಣ ಎಂದು ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಹೇಳಿದರು.ಲೋಕಸಭಾ ಚುನಾವಣೆ ಸಂಬಂಧ ಪಟ್ಟಣದ ನಂಜಮ್ಮ ಮುದ್ದೇಗೌಡ ಕಲ್ಯಾಣ ಸಮುದಾಯ ಭವನದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ಸಭೆ ಮತ್ತು ನೂತನ ಕಾಂಗ್ರೆಸ್ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರ ಬದುಕನ್ನು ಶಕ್ತಿಯುತ ಮಾಡುವ ಹಾಗೂ ಜನ ಸಾಮಾನ್ಯರ ಜೀವನಕ್ಕೆ ಬಲ ನೀಡಲು ನೆರವಾಗಿವೆ. ಶ್ರೀ ಸಾಮಾನ್ಯರ ಬದುಕನ್ನು ಬದಲಾಯಿಸಲು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದರು.ಪ್ರಧಾನಿ ನರೇಂದ್ರ ಮೋದಿ ಸರ್ಕಾರದಿಂದ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ತಲುಪಿವೆ. ಪ್ರಧಾನಿ ಮೋದಿ ದೇಶದ ಜನರನ್ನು ಮೋಡಿ ಮಾಡಿ ಅಧಿಕಾರ ನಡೆಸುತ್ತಿದ್ದಾರೆ. ಈ ಬಗ್ಗೆ ಜನರಿಗೆ ತಿಳಿಸಬೇಕಿದೆ ಎಂದು ಹೇಳಿದರು.
ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಮಾತನಾಡಿ, ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳು ಲೋಕಸಭಾ ಚುನಾವಣೆಯಲ್ಲಿ ಗೆಲುವಿಗೆ ಸಹಕಾರಿಯಾಗಿವೆ. ಹೈಕಮಾಂಡ್ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಅಧಿಕೃತ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರನ್ನು ಘೋಷಿಸಿದೆ. ನಾವು, ನೀವೆಲ್ಲರೂ ಮತ ಹಾಕುವ ಮೂಲಕ ಅವರನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು.ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣಗೌಡ ಮಾತನಾಡಿ, ಕಾಂಗ್ರೆಸ್ ನಾಯಕರು ಒಮ್ಮತದಿಂದ ನನ್ನನ್ನು ಅಭ್ಯರ್ಥಿಯಾಗಿ ಘೋಷಿಸಿದ್ದಾರೆ. ನನಗೆ ಭಗವಂತ ಎಲ್ಲವನ್ನೂ ಕರುಣಿಸಿದ್ದಾನೆ. ಜನರ ಸೇವೆ ಮಾಡಲು ಜಿಲ್ಲೆಯ ಜನ ಹೆಚ್ಚಿನ ಮತಗಳಿಂದ ಜಯಶೀಲರನ್ನಾಗಿ ಮಾಡುವಂತೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯಾಧ್ಯಕ್ಷ ಎಂ.ಚಿದಂಬರ್, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಮಾಜಿ ಶಾಸಕ ಬಿ.ಪ್ರಕಾಶ್, ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎಲ್.ದೇವರಾಜು, ಮತ್ತಿಘಟ್ಟ ಕೃಷ್ಣಮೂರ್ತಿ, ಕಾಂಗ್ರೆಸ್ ಮುಖಂಡ ಬೂಕನಕೆರೆ ವಿಜಯರಾಮೇಗೌಡ, ಕೆಪಿಸಿಸಿ ಸದಸ್ಯ ಕಿಕ್ಕೇರಿ ಸುರೇಶ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಅಂಜನಾ ಶ್ರೀಕಾಂತ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಳಹಳ್ಳಿ ವಿಶ್ವನಾಥ್, ನಾಗೇಂದ್ರ ಕುಮಾರ್, ಮುಖಂಡರಾದ ಲಕ್ಷ್ಮಿಪುರ ಅಕ್ಕಿ ಮಂಜು, ಡಾ.ಕೆ.ಸಿ ಶ್ರೀಕಾಂತ್, ತಾಲೂಕು ಕಾಂಗ್ರೆಸ್ ವಕ್ತಾರರಾದ ಇಂದಿರಾ ಸತೀಶ್ಬಾಬು, ಜಿಪಂ ಮಾಜಿ ಸದಸ್ಯ ಕೋಡಿಮಾರನಹಳ್ಳಿ ದೇವರಾಜ್, ಅಲ್ಪಸಂಖ್ಯಾತ ನಗರ ಘಟಕ ಅಧ್ಯಕ್ಷ ಅಯಾಜ್ ಸರೀಫ್, ಮಹಿಳಾ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಮೀನಾಕ್ಷಿ ಸೇರಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.