ವಾಲ್ಮೀಕಿ ಸಂಶೋಧನಾ ಕೇಂದ್ರ ಸ್ಥಾಪನೆಗೆ ಸ್ಥಳ ಗುರುತಿಸಲಾಗಿದ್ದು ಈ ಜಾಗದ ಕಾಂಪೌಂಡ್ ನಿರ್ಮಾಣಕ್ಕೆ 10 ಲಕ್ಷ ರು. ಬಿಡುಗಡೆಗೊಳಿಸಿ ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು. ದೇವನಹಳ್ಳಿಯಲ್ಲಿ ವಾಲ್ಮೀಕಿ ಜಯಂತಿ ಉದ್ಘಾಟಿಸಿ ಮಾತನಾಡಿದರು.
ವಾಲ್ಮೀಕಿ ಜಯಂತಿ ಸಮಾರಂಭ ಉದ್ಘಾಟನೆ
ಕನ್ನಡಪ್ರಭ ವಾರ್ತೆ ದೇವನಹಳ್ಳಿ
ತಾಲೂಕಿನ ಹುರುಳುಗುರ್ಕಿ ಬಳಿ ವಾಲ್ಮೀಕಿ ಸಂಶೋಧನಾ ಕೇಂದ್ರ ಸ್ಥಾಪನೆಗೆ ಸ್ಥಳ ಗುರುತಿಸಲಾಗಿದ್ದು ಈ ಜಾಗದ ಕಾಂಪೌಂಡ್ ನಿರ್ಮಾಣಕ್ಕೆ 10 ಲಕ್ಷ ರು. ಬಿಡುಗಡೆಗೊಳಿಸಿ ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ತಾಲೂಕಿನ ಡಾ.ಅಂಬೇಡ್ಕರ್ ಭವನದಲ್ಲಿ ವಾಲ್ಮೀಕಿ ಜಯಂತಿ ಉದ್ಘಾಟಿಸಿ ಮಾತನಾಡಿದ ಅವರು, ವಾಲ್ಮೀಕಿ ರಾಮಾಯಣ ಎಂದೆಂದಿಗೂ ಸಾರ್ವಕಾಲಿಕ. ಪ್ರತಿಯೊಬ್ಬರೂ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ರಾಜ್ಯದ ವಾಲ್ಮೀಕಿ ಸಮಾಜದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಒತ್ತು ನೀಡುತ್ತಿದೆ. ವಾಲ್ಮೀಕಿ ವಸತಿ ಶಾಲೆಗಳು ಆರಂಭಿಸುವ ಮೂಲಕ ಗುಣಮಟ್ಟದ ಶಿಕ್ಷಣದ ಜತೆಗೆ ಮಕ್ಕಳ ಸರ್ವತೋಮುಖ ಅಭಿವೃದ್ಧಿ ಮಾಡಲಾಗುವುದು ಎಂದರು.
ಜಿಲ್ಲೆಯಲ್ಲಿ ಪರಿಶಿಷ್ಟ ವರ್ಗದ ಬಾಲಕಿಯರ ವಸತಿ ಶಾಲೆ ಶೀಘ್ರದಲ್ಲೇ ಆರಂಭಿಸಲಾಗುವುದು. ತಾಲೂಕಿನ ಗೋಖರೆ ರಸ್ತೆಯಲ್ಲಿ ವಾಲ್ಮಿಕಿ ಭವನ ನಿರ್ಮಾಣವಾಗಿದ್ದು ಉಳಿದಿರುವ ಬಾಕಿ ಕೆಲಸಕ್ಕೆ ಒಂದು ಕೋಟಿ ರು. ಅಗತ್ಯವಿದೆ. ಸದ್ಯಕ್ಕೆ 50 ಲಕ್ಷ ರು. ಬಿಡುಗಡೆ ಮಾಡುವುದಾಗಿ ತಿಳಿಸಿದರು.
ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ವಿ.ತಿಮ್ಮೇಶ್ ಪ್ರಭು ಮಹರ್ಷಿ ವಾಲ್ಮೀಕಿ ಕುರಿತು ಉಪನ್ಯಾಸ ನೀಡಿದರು. ಜಿಲ್ಲಾಧಿಕಾರಿ ಡಾ.ಶಿವಶಂಕರ್, ಜಿಪಂ ಸಿಇಒ ಡಾ.ಅನುರಾಧ, ತಹಸೀಲ್ದಾರ್ ಬಾಲಕೃಷ್ಣ, ತಾಪಂ ಇಒ ಶ್ರೀನಾಥಗೌಡ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಬಿ.ರಾಜಣ್ಣ, ತಾಲೂಕು ಅಧ್ಯಕ್ಷ ಸಿ.ಜಗನ್ನಾಥ್, ಬಯಪ ಅಧ್ಯಕ್ಷ ಶಾಂತಕುಮಾರ್, ಮುಖಂಡರಾದ ವಿ.ಮಂಜುನಾಥ್, ಪ್ರಸನ್ನಕುಮಾರ್, ಲೋಕೇಶ್, ಡಾ.ಮೂರ್ತಿ ಇತರರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.