ಬಜೆಟ್‌ನಲ್ಲಿ ಶೇ.24.1 ಮೀಸಲಾತಿ ಕಡ್ಡಾಯಕ್ಕೆ ದಸಂಸ ಪಟ್ಟು; ಮನವಿ

KannadaprabhaNewsNetwork |  
Published : Feb 11, 2026, 02:30 AM IST
 | Kannada Prabha

ಸಾರಾಂಶ

ವಿವಿಧ ಬೇಡಿಕೆಗಳನ್ನು ಮುಂದಿಟ್ಟು ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಮಂಗಳವಾರ ಕಾರವಾರದಲ್ಲಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಕಾರವಾರ

ಮುಂಬರುವ 2026-27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ದಲಿತರ ಜನಸಂಖ್ಯೆಗೆ ಅನುಗುಣವಾಗಿ ಶೇ.24.1ರಷ್ಟು ಅನುದಾನವನ್ನು ಕಡ್ಡಾಯವಾಗಿ ಮೀಸಲಿಡಬೇಕು. ಜೊತೆಗೆ ಅಭಿವೃದ್ಧಿಗೆ ಮೀಸಲಾದ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ನಿಧಿಗಳನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸುವುದನ್ನು ತಡೆಯಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.

ವಿವಿಧ ಬೇಡಿಕೆಗಳನ್ನು ಮುಂದಿಟ್ಟು ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಮಂಗಳವಾರ ಕಾರವಾರದಲ್ಲಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದರು.

ಸಂವಿಧಾನದ ಆಶಯದಂತೆ ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳ ಅಭಿವೃದ್ಧಿಗೆ ಮೀಸಲಾದ ಹಣವನ್ನು ಅವರ ಏಳಿಗೆಗಾಗಿಯೇ ಬಳಸಬೇಕು. ಆದರೆ ಕಾಂಗ್ರೆಸ್ ಸರ್ಕಾರ ಸುಮಾರು ₹25 ಸಾವಿರ ಕೋಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿದ್ದು ಇದು ದಲಿತರ ಮೇಲಿನ ಸ್ಪಷ್ಟ ವಂಚನೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮೀಸಲಿಟ್ಟ ಹಣ ದುರ್ಬಳಕೆಯಾಗದಂತೆ ಕಾಯ್ದೆಗೆ ತಿದ್ದುಪಡಿ ತರಲೇಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಒಟ್ಟು 19 ಬೇಡಿಕೆ ಮುಂದಿಟ್ಟಿದ್ದು, ಭೂಮಿ ಮತ್ತು ವಸತಿ ವಿಷಯದಲ್ಲಿ ಪ್ರಮುಖ ಒತ್ತಾಯ ಮಾಡಲಾಗಿದೆ. ಬಗರ್ ಹುಕುಂ ಸಾಗುವಳಿ ಸಕ್ರಮಗೊಳಿಸಬೇಕು. ನಿವೇಶನ ರಹಿತರಿಗೆ ಜಮೀನು ಖರೀದಿಗೆ ನೀಡುವ ಮೊತ್ತವನ್ನು ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಮೂರರಿಂದ ನಾಲ್ಕು ಪಟ್ಟು ಹೆಚ್ಚಿಸಬೇಕು. ಪಿಟಿಸಿಎಲ್ ಕಾಯ್ದೆಯಲ್ಲಿ ಗ್ರ್ಯಾಂಟೆಡ್ ಲ್ಯಾಂಡ್ ಎಂಬ ಪದದ ಬದಲು ಸರ್ಟೇನ್ ಲ್ಯಾಂಡ್ ಎಂದು ತಿದ್ದುಪಡಿ ತರಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.

ಆರ್ಥಿಕ ನೆರವಿನ ಭಾಗವಾಗಿ ದೇವದಾಸಿಯರು, ವಿಧವೆಯರು, ವೃದ್ಧರು, ವಿಕಲಚೇತನರು ಮತ್ತು ಮಂಗಳಮುಖಿಯರಿಗೆ ನೀಡುವ ಮಾಸಾಶನವನ್ನು ₹5,000ಕ್ಕೆ ಹೆಚ್ಚಿಸಬೇಕು. ಬಡವರಿಗೆ ಮನೆ ನಿರ್ಮಾಣಕ್ಕೆ ನೀಡುವ ಸಹಾಯಧನವನ್ನು ₹5 ಲಕ್ಷಕ್ಕೆ ಏರಿಸಬೇಕು ಎಂದು ಆಗ್ರಹಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಭೂ ರಹಿತ ಎಸ್‌ಸಿ ಮತ್ತು ಎಸ್‌ಟಿ ಕುಟುಂಬಗಳಿಗೆ ಅರಣ್ಯ ನಿಯಮಗಳ ಅಡಿಯಲ್ಲಿ ಗಿಡಮರಗಳಿಲ್ಲದ 1 ಹೆಕ್ಟೇರ್ ಭೂಮಿಯನ್ನು ಹಣ್ಣಿನ ಗಿಡಗಳ ಬೆಳೆಸಲು ಲೀಸ್ ಆಧಾರದಲ್ಲಿ ನೀಡಬೇಕು ಎಂಬ ಬೇಡಿಕೆಯನ್ನೂ ಮುಂದಿಟ್ಟಿದ್ದಾರೆ. ಜೊತೆಗೆ ಮರ್ಯಾದಾ ಹತ್ಯೆ ತಡೆಯಲು ವಿಶೇಷ ಕಾಯ್ದೆ ಜಾರಿಗೊಳಿಸಬೇಕು ಹಾಗೂ 2020ರ ಗೋಹತ್ಯೆ ನಿಷೇಧ ಕಾಯ್ದೆ ರದ್ದುಪಡಿಸಬೇಕು. ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳಲ್ಲಿ ಐದು ವರ್ಷಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಎಂಬ ಬೇಡಿಕೆಯೂ ಮನವಿಯಲ್ಲಿದೆ.

ಈ ಸಂದರ್ಭ ದಸಂಸ ಕಾರ್ಯಾಧ್ಯಕ್ಷ ಮಂಜುನಾಥ ಎನ್.ಹಳ್ಳೇರ, ರಾಜ್ಯ ಸಂಘಟನಾ ಸಂಚಾಲಕ ಎಸ್.ಫಕ್ಕೀರಪ್ಪ, ಜಿಲ್ಲಾ ಸಂಚಾಲಕ ಗೋಪಾಲ ನಡಕಿನಮನಿ, ಜಿಲ್ಲಾ ಮಹಿಳಾ ಒಕ್ಕೂಟದ ಅಧ್ಯಕ್ಷೆ ಸಂಗೀತಾ ಸಿ.ಚಲವಾದಿ ಸೇರಿದಂತೆ ಹಳಿಯಾಳ, ಶಿರಸಿ, ಯಲ್ಲಾಪುರ ಮತ್ತು ಅಂಕೋಲಾ ತಾಲೂಕಿನ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲಕ್ಷ್ಮೇಶ್ವರ ತಾಲೂಕು ಸಾಹಿತ್ಯ ಸಮ್ಮೇಳನಾಧ್ಯಕ್ಷೆ ಲಲಿತಾ ಕೆರಿಮನಿಗೆ ಅಧಿಕೃತ ಆಹ್ವಾನ
ನಿಸ್ವಾರ್ಥ ಕಾಯಕವೇ ಶರಣತ್ವದ ಮಾರ್ಗ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ