ಕಾಶ್ಮೀರದ ಪಹಲ್ಗಾಮ್ ಪಟ್ಟಣದ ಬಳಿ ಮಂಗಳವಾರ ಉಗ್ರರು ನಡೆಸಿದ ಭೀಕರ ನರಮೇಧ ಖಂಡಿಸಿ ಹಾಗೂ ಘಟನೆಯಲ್ಲಿ ಸಾವಿಗೀಡಾದ ಹಿಂದೂಗಳ ಆತ್ಮಕ್ಕೆ ಶಾಂತಿ ಕೋರಿ ಬಿಜೆಪಿಯ ಕಾರ್ಯಕರ್ತರು ನಗರದಲ್ಲಿ ಬುಧವಾರ ಸಂಜೆ ಮೇಣದ ಬತ್ತಿ ಹಿಡಿದು ಪ್ರತಿಭಟನೆ ನಡೆಸಿದರು.
ಕನ್ನಡಪ್ರಭ ವಾರ್ತೆ ಬಳ್ಳಾರಿ
ಕಾಶ್ಮೀರದ ಪಹಲ್ಗಾಮ್ ಪಟ್ಟಣದ ಬಳಿ ಮಂಗಳವಾರ ಉಗ್ರರು ನಡೆಸಿದ ಭೀಕರ ನರಮೇಧ ಖಂಡಿಸಿ ಹಾಗೂ ಘಟನೆಯಲ್ಲಿ ಸಾವಿಗೀಡಾದ ಹಿಂದೂಗಳ ಆತ್ಮಕ್ಕೆ ಶಾಂತಿ ಕೋರಿ ಬಿಜೆಪಿಯ ಕಾರ್ಯಕರ್ತರು ನಗರದಲ್ಲಿ ಬುಧವಾರ ಸಂಜೆ ಮೇಣದ ಬತ್ತಿ ಹಿಡಿದು ಪ್ರತಿಭಟನೆ ನಡೆಸಿದರು.
ದಕ್ಷಿಣ ಕಾಶ್ಮೀರದಲ್ಲಿ ಉಗ್ರರು ಪ್ರವಾಸಿಗರ ಮೇಲೆ ದಾಳಿ ನಡೆಸಿದ್ದು ಇಬ್ಬರು ಕನ್ನಡಿಗರು ಸೇರಿದಂತೆ 26 ಜನರು ಬಲಿಯಾಗಿದ್ದಾರೆ. ದಾಳಿ ವೇಳೆ ಹಿಂದೂಗಳನ್ನು ಗುರಿಯಾಗಿಸಿಕೊಂಡು ಹತ್ಯೆಗೈಯಲ್ಲಾಗಿದೆ. ಪುಲ್ವಾಮಾ ದಾಳಿ ಬಳಿಕ ಕಾಶ್ಮೀರದಲ್ಲಿ ಜರುಗಿದ ದೊಡ್ಡ ಭಯೋತ್ಪಾದಕ ದಾಳಿ ಇದಾಗಿದೆ.
ತಾನೇ ದಾಳಿ ಮಾಡಿರುವುದಾಗಿ ದಿ ರೆಸಿಸ್ಟೆನ್ಸ್ ಫ್ರಂಟ್ ಹೇಳಿಕೊಂಡಿದ್ದು ಉಗ್ರರನ್ನು ಸಂಪೂರ್ಣವಾಗಿ ಮಟ್ಟ ಹಾಕಲು ಕೇಂದ್ರ ಸರ್ಕಾರ ಮುಂದಾಗಬೇಕು. ಹಿಂದೂಗಳ ಮೇಲಿನ ದಾಳಿಯನ್ನು ಯಾವ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಭಯೋತ್ಪಾದಕ ಕೃತ್ಯದಲ್ಲಿ ಭಾಗಿಯಾಗುವವರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಜರುಗದಂತೆ ಪ್ರವಾಸಿಗರು ಹಾಗೂ ದೇಶದ ಹಿಂದೂಗಳಿಗೆ ಸೂಕ್ತ ರಕ್ಷಣೆ ನೀಡಬೇಕು. ಉಗ್ರ ಸಂಘಟನೆಗಳನ್ನು ಬೆಂಬಲಿಸುವ ಸಂಘಟನೆಗಳು ಹುಡುಕಾಡಿ ಪತ್ತೆ ಹಚ್ಚಿ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಇಲ್ಲಿನ ಈಡಿಗ ಹಾಸ್ಟೆಲ್ ಆವರಣದಿಂದ ಮೇಣದ ಬತ್ತಿ ಮೆರವಣಿಗೆ ಆರಂಭಿಸಿದ ಬಿಜೆಪಿ ಕಾರ್ಯಕರ್ತರು ಗಡಗಿಚನ್ನಪ್ಪ ವೃತ್ತದಲ್ಲಿ ಸಮಾವೇಶಗೊಂಡರು. ಬಳಿಕ ಉಗ್ರರ ದಾಳಿಯಲ್ಲಿ ಸಾವನ್ನಪ್ಪಿದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಮೆರವಣಿಗೆಯ ನೇತೃತ್ವ ವಹಿಸಿದ್ದ ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್, ಮಾಜಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಹಾಗೂ ಪಕ್ಷದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೋಕಾ ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ದಾಳಿ ಖಂಡಿಸಿದರಲ್ಲದೆ, ಕೇಂದ್ರ ಸರ್ಕಾರ ದೇಶದಲ್ಲಿ ಉಗ್ರ ಚಟುವಟಿಕೆಗಳನ್ನು ಸಂಪೂರ್ಣ ದಮನ ಮಾಡಬೇಕು ಎಂದು ಒತ್ತಾಯಿಸಿದರು. ಪಕ್ಷದ ಮುಖಂಡರಾದ ಎಚ್.ಹನುಮಂತಪ್ಪ, ಕೆ.ಎ. ರಾಮಲಿಂಗಪ್ಪ, ಪಾಲಿಕೆ ಸದಸ್ಯ ಶ್ರೀನಿವಾಸ ಮೋತ್ಕರ್, ಹನುಮಂತಪ್ಪ, ಕೆ.ಎಂ. ಮಹೇಶ್ವರಸ್ವಾಮಿ ಸೇರಿದಂತೆ ನೂರಾರು ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.