ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯಲ್ಲಿ ನೋಂಗ್ಜಾಯ್ ಮಹಮ್ಮದ್ ಅಲಿ ಅಕ್ರಂ ಅಲಿ ಷಾ
ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಮುನ್ನ ಕಡ್ಡಾಯವಾಗಿ ಪರೀಕ್ಷಿಸಬೇಕು ಎಂದು ಜಿಪಂ ಸಿಇಒ ನೋಂಗ್ಜಾಯ್ ಮಹಮ್ಮದ್ ಅಲಿ ಅಕ್ರಂ ಅಲಿ ಷಾ ಹೇಳಿದರು.
ನಗರದ ಜಿಪಂ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆರೋಗ್ಯ ಹಿತದೃಷ್ಟಿಯಿಂದ ಶುದ್ಧ ಕುಡಿಯುವ ನೀರಿನ ಘಟಕ, ಜಲಜೀವನ್ ಮಿಷನ್ ನಿಂದ ಪೂರೈಕೆಯಾಗುವ ನೀರನ್ನು ಕಡ್ಡಾಯವಾಗಿ ಕುಡಿಯುವಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ನಿರಂತವಾಗಿ ಮಳೆ ಆಗುತ್ತಿರುವ ಹಿನ್ನೆಲೆ ಶುದ್ಧ ಕುಡಿಯುವ ನೀರು ಪೂರೈಕೆ ಮುನ್ನ ಕಡ್ಡಾಯವಾಗಿ ಪರೀಕ್ಷೆ ಮಾಡಬೇಕು. ಎಲ್ಲ ಗ್ರಾಪಂಗಳಲ್ಲಿ ಎಫ್ಟಿಕೆ ಕಿಟ್ ಮೂಲಕ ನೀರನ್ನು ಪರೀಕ್ಷಿಸಿ ವರದಿ ನೀಡಬೇಕು. ನೀರಿನಿಂದ ಸಾಂಕ್ರಾಮಿಕ ಕಾಯಿಲೆಗಳು ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ಆರೋಗ್ಯ ಹಿತದೃಷ್ಟಿಯಿಂದ ಕುಡಿಯುವ ನೀರಿನ ಶುದ್ಧತೆಯ ಬಗ್ಗೆ ಗಮನ ಹರಿಸಬೇಕು ಎಂದರು.ಜಲ ಜೀವನ್ ಮಿಷನ್ ಯೋಜನೆಯಲ್ಲಿ ಮುಕ್ತಾಯಗೊಂಡ ಕಾಮಗಾರಿಗಳನ್ನು ಹರ್ ಘರ್ ಜಲ್ ಎಂದು ಘೋಷಣೆ ಮಾಡಿ 24/7 ನೀರು ಸರಬರಾಜು ಗ್ರಾಮಗಳನ್ನಾಗಿ ಪರಿವರ್ತಿಸಲು ಕ್ರಮವಹಿಸಬೇಕು.
ಈ ವೇಳೆ ರಾಮದುರ್ಗ ಗ್ರಾಪಂ ಅಧ್ಯಕ್ಷ ರಾಜಪ್ಪ, ಬೈಲುವದ್ದಿಗೇರಿ ಅಧ್ಯಕ್ಷ ಜೆ.ಲಕ್ಷ್ಮೀದೇವಿ, ಹಂಪಿ ಗ್ರಾಪಂ ಅಧ್ಯಕ್ಷೆ ರಜನಿ ಷಣ್ಮುಖಗೌಡ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಷಣ್ಮುಖ, ಗ್ರಾ.ಕು.ನೀ. ನೈ ಇಲಾಖೆ ಕಾರ್ಯಪಾಲಕ ಅಭಿಯಂತರ ಎಸ್. ದೀಪಾ, ಜಿಲ್ಲಾ ಬುಡಕಟ್ಟು ಕಲ್ಯಾಣಾಧಿಕಾರಿ ಶಂಕರ ನಾಯ್ಕ, ಜಿಲ್ಲಾ ಐಸಿಡಿಎಸ್ ಅಧಿಕಾರಿ ಮುದಕಪ್ಪ, ನಗರಾಭಿವೃದ್ಧಿ ಕೋಶ ಜಿಲ್ಲಾ ನೋಡಲ್ ಅಧಿಕಾರಿ ಮನೋಹರ, ಸಾರ್ವಜನಿಕ ಶಿಕ್ಷಣ ಇಲಾಖೆಯ ರಾಜಶೇಖರ್, ಜಲಜೀವನ್ ಮಿಷನ್ ಯೋಜನೆಯ ಜಿಲ್ಲಾ ಯೋಜನಾ ವ್ಯವಸ್ಥಾಪಕಿ ಸಿ.ಎಂ. ಮಹೇಶ್ವರಿ ಸೇರಿದಂತೆ ಎಂಜಿನಿಯರ್ಗಳಾದ ರುದ್ರಮುನಿ, ನರೇಶ್, ಶಿವಾರೆಡ್ಡಿ, ಸ್ವಚ್ಛ ಭಾರತ್ ಮಿಷನ್ ರೇಣುಕಾ ಮತ್ತಿತರರಿದ್ದರು.