ಉತ್ತರ ಕರ್ನಾಟಕದ ಶಿಲ್ಪಿ ಡಾ.ಪ್ರಭಾಕರ ಕೋರೆ

KannadaprabhaNewsNetwork |  
Published : Aug 02, 2026, 02:45 AM IST
 ಅಂಕಲಿಯಲ್ಲಿ 79ನೇ ಜನ್ಮದಿನದ ಅಂಗವಾಗಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ ಅವರನ್ನು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಪ್ರಕಾಶ ಹುಕ್ಕೇರಿ, ಶಾಸಕ ಗಣೇಶ ಹುಕ್ಕೇರಿ ಹಾಗೂ ಇತರ ಗಣ್ಯರು ಸನ್ಮಾನಿಸಿದರು. | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ಶಿಕ್ಷಣ, ಆರೋಗ್ಯ, ಸಹಕಾರ ಮತ್ತು ಕೈಗಾರಿಕಾ ಕ್ಷೇತ್ರಗಳಲ್ಲಿ ಕಳೆದ ನಾಲ್ಕು ದಶಕಗಳಿಂದ ಪದ್ಮಶ್ರೀ ಡಾ.ಪ್ರಭಾಕರ ಕೋರೆ ಅವರು ಮಾಡಿರುವ ಸೇವೆ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಭದ್ರ ಅಡಿಪಾಯವಾಗಿದೆ. ಕೆಎಲ್‌ಇ ಸಂಸ್ಥೆಯಿಂದ ಬೆಳಗಾವಿಗೆ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ಗುರುತನ್ನು ತಂದುಕೊಟ್ಟಿದ್ದಾರೆ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅವರ ಅನುಭವವನ್ನು ಇನ್ನಷ್ಟು ದೊಡ್ಡ ಮಟ್ಟದಲ್ಲಿ ಸಮಾಜದ ಹಿತಕ್ಕಾಗಿ ಬಳಸಿಕೊಳ್ಳಬೇಕು ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು

ಕನ್ನಡಪ್ರಭ ವಾರ್ತೆ ಬೆಳಗಾವಿ

ಶಿಕ್ಷಣ, ಆರೋಗ್ಯ, ಸಹಕಾರ ಮತ್ತು ಕೈಗಾರಿಕಾ ಕ್ಷೇತ್ರಗಳಲ್ಲಿ ಕಳೆದ ನಾಲ್ಕು ದಶಕಗಳಿಂದ ಪದ್ಮಶ್ರೀ ಡಾ.ಪ್ರಭಾಕರ ಕೋರೆ ಅವರು ಮಾಡಿರುವ ಸೇವೆ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಭದ್ರ ಅಡಿಪಾಯವಾಗಿದೆ. ಕೆಎಲ್‌ಇ ಸಂಸ್ಥೆಯಿಂದ ಬೆಳಗಾವಿಗೆ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ಗುರುತನ್ನು ತಂದುಕೊಟ್ಟಿದ್ದಾರೆ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅವರ ಅನುಭವವನ್ನು ಇನ್ನಷ್ಟು ದೊಡ್ಡ ಮಟ್ಟದಲ್ಲಿ ಸಮಾಜದ ಹಿತಕ್ಕಾಗಿ ಬಳಸಿಕೊಳ್ಳಬೇಕು ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು.

ಅಂಕಲಿಯ ಕೆಎಲ್‌ಇ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಮಾಜಿ ರಾಜ್ಯಸಭಾ ಸದಸ್ಯ, ಕೆಎಲ್‌ಇ ಸಂಸ್ಥೆಯ ಗೌರವ ಕಾರ್ಯಾಧ್ಯಕ್ಷ ಪದ್ಮಶ್ರೀ ಡಾ.ಪ್ರಭಾಕರ ಕೋರೆ ಅವರ 79ನೇ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಭವ್ಯ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಕೆಎಲ್‌ಇ ಸಂಸ್ಥೆಯ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ರೂಪುಗೊಂಡಿದೆ. ಬೆಳಗಾವಿಯಲ್ಲಿ ರಾಜ್ಯ ವಿಧಾನಮಂಡಲದ ಅಧಿವೇಶನಗಳು ನಡೆಯಲು ಹಾಗೂ ಸುವರ್ಣಸೌಧ ನಿರ್ಮಾಣಕ್ಕೆ ಡಾ. ಕೋರೆ ಅವರ ಕೊಡುಗೆ ಮಹತ್ವದ್ದಾಗಿದೆ. ಶಿಕ್ಷಣದ ಜೊತೆಗೆ ಆರೋಗ್ಯ, ಸಹಕಾರ ಹಾಗೂ ಕೈಗಾರಿಕಾ ಕ್ಷೇತ್ರಗಳಲ್ಲಿ ಅವರು ನಿರ್ಮಿಸಿರುವ ಸಂಸ್ಥೆಗಳು ಇಂದು ಲಕ್ಷಾಂತರ ಕುಟುಂಬಗಳಿಗೆ ಆಶ್ರಯವಾಗಿವೆ. ಮೂರು ಸಕ್ಕರೆ ಕಾರ್ಖಾನೆಗಳ ಮೂಲಕ ಸಾವಿರಾರು ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಿ ಗ್ರಾಮೀಣ ಆರ್ಥಿಕತೆಗೆ ಬಲ ತುಂಬಿದ್ದಾರೆ. ಪದ್ಮಶ್ರೀ ಪ್ರಶಸ್ತಿ ಅವರ ಸಮಾಜಮುಖಿ ಕಾರ್ಯಕ್ಕೆ ಸಂದ ರಾಷ್ಟ್ರೀಯ ಗೌರವವಾಗಿದೆ ಎಂದು ಹೇಳಿದರು.

ಶಾಸಕಿ ಶಶಿಕಲಾ ಜೊಲ್ಲೆ ಮಾತನಾಡಿ, ಕೆಲವೇ ಸಂಸ್ಥೆಗಳಿಂದ ಆರಂಭವಾದ ಕೆಎಲ್‌ಇ ಇಂದು 300ಕ್ಕೂ ಹೆಚ್ಚು ಶಾಖೆಗಳನ್ನು ಹೊಂದಿರುವುದು ಡಾ.ಕೋರೆ ಅವರ ದೂರದೃಷ್ಟಿಯ ಫಲವಾಗಿದೆ. ಪ್ರತಿವರ್ಷ ಲಕ್ಷಾಂತರ ವಿದ್ಯಾರ್ಥಿಗಳು ಇಲ್ಲಿ ವಿದ್ಯಾಭ್ಯಾಸ ಮಾಡಿ ದೇಶ-ವಿದೇಶಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಹೇಳಿದರು.

ಮಾಜಿ ಶಾಸಕ ಅನಿಲ್ ಬೆನಕೆ ಮಾತನಾಡಿ, ಕೆಎಲ್‌ಇ ಆಸ್ಪತ್ರೆಯಿಂದ ಸಾವಿರಾರು ರೋಗಿಗಳಿಗೆ ಜೀವದಾನ ದೊರೆತಿದೆ. ಕೊರೋನಾ ಮಹಾಮಾರಿ ಸಂದರ್ಭದಲ್ಲೂ ಸಾಮಾನ್ಯ ಜನರಿಗೆ ಆರೋಗ್ಯ ಸೇವೆ ಒದಗಿಸುವಲ್ಲಿ ಡಾ.ಕೋರೆ ಅವರ ಸೇವೆ ಅಮೋಘವಾಗಿದೆ ಎಂದು ಸ್ಮರಿಸಿದರು.

ಶಾಸಕ ಗಣೇಶ ಹುಕ್ಕೇರಿ ಮಾತನಾಡಿ, ರಾಜಕೀಯ ಭಿನ್ನಾಭಿಪ್ರಾಯಗಳಿದ್ದರೂ ಅಭಿವೃದ್ಧಿಯ ವಿಷಯದಲ್ಲಿ ಎಲ್ಲರೂ ಒಂದಾಗಿದ್ದೇವೆ. ಡಾ.ಕೋರೆ ಅವರ ಮಾರ್ಗದರ್ಶನದಿಂದ ಈ ಭಾಗದ ಅನೇಕ ಅಭಿವೃದ್ಧಿ ಕಾರ್ಯಗಳಿಗೆ ವೇಗ ಸಿಕ್ಕಿದೆ ಎಂದು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಮಾಜಿ ಸಚಿವ ವೀರಕುಮಾರ ಪಾಟೀಲ, ಶಾಸಕ ದುರ್ಯೋಧನ ಐಹೊಳೆ, ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ಸೇರಿದಂತೆ ಹಲವರು ಡಾ.ಕೋರೆ ಅವರ ಸೇವೆ ಕೊಂಡಾಡಿದರು.

ಸ್ವಾಗತ ಭಾಷಣದಲ್ಲಿ ಪ್ರೀತಿ ದೊಡ್ಡವಾಡ ಡಾ.ಕೋರೆ ಅವರ ಜೀವನ ಸೇವೆ, ಶಿಸ್ತು ಮತ್ತು ಸಮರ್ಪಣೆಯ ಪ್ರತೀಕವಾಗಿದೆ ಎಂದು ಹೇಳಿದರು. ವಿಧಾನ ಪರಿಷತ್ ಸದಸ್ಯ ಹಾಗೂ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ ಅಧ್ಯಕ್ಷತೆ ವಹಿಸಿದ್ದರು. ಶ್ರೀಶೈಲ ಪೀಠದ ಪೀಠಾಧಿಪತಿ ಡಾ.ಚನ್ನಸಿದ್ದರಾಮ ಪಂಡಿತರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಮಿತ್ ಕೋರೆ ಪ್ರಾಸ್ತಾವಿಕ ಮಾತನಾಡಿದರು. ಮಹೇಶ್ ಗುರುಣ್ಣವರ ಕಾರ್ಯಕ್ರಮ ನಿರೂಪಿಸಿದರು.----

ಕೋಟ್ಸ್....

ಕಳೆದ ಎರಡು ತಿಂಗಳಿಂದ ರೈತರು ಮಳೆಯ ನಿರೀಕ್ಷೆಯಲ್ಲಿದ್ದರು. ಇಂದು ಕಾರ್ಯಕ್ರಮದ ವೇಳೆ ಸುರಿದ ಮಳೆ ದೇವರ ಆಶೀರ್ವಾದವಾಗಿದೆ. ಈ ಭಾಗದ ಜನತೆ, ಸಹೋದ್ಯೋಗಿಗಳು ಹಾಗೂ ಕಾರ್ಯಕರ್ತರ ಸಹಕಾರದಿಂದಲೇ ನನಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ಮುಂದೆಯೂ ಇದೇ ರೀತಿಯ ಸಹಕಾರ ದೊರೆಯಲಿ.

- ಡಾ.ಪ್ರಭಾಕರ ಕೋರೆ, ಪದ್ಮಶ್ರೀ ಪುರಸ್ಕೃತರು, ಕೆಎಲ್‌ಇ ಗೌರವ ಕಾರ್ಯಾಧ್ಯಕ್ಷರು

-------------

ಬಾಕ್ಸ್.....

ಜನ್ಮದಿನ ಪ್ರಯುಕ್ತ ರಕ್ತದಾನ, ಗೋಸೇವೆ

ಜನ್ಮದಿನದ ಅಂಗವಾಗಿ ಕೆಎಲ್‌ಇ ಡಾ.ಪ್ರಭಾಕರ ಕೋರೆ ವೈದ್ಯಕೀಯ ಹಾಗೂ ಸಂಶೋಧನಾ ಕೇಂದ್ರದ ವತಿಯಿಂದ ಅಂಕಲಿಯಲ್ಲಿ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಚಿಕ್ಕೋಡಿ, ಅಥಣಿ ಹಾಗೂ ರಾಯಬಾಗ ತಾಲೂಕುಗಳ 400ಕ್ಕೂ ಹೆಚ್ಚು ರಕ್ತದಾನಿಗಳು ಭಾಗವಹಿಸಿದರು. ಗೋಶಾಲೆಗೆ ಮೇವು ದಾನ ಮಾಡಲಾಯಿತು. ಬೆಳಿಗ್ಗೆ ಡಾ.ಕೋರೆ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಅವರ ನಿವಾಸದಲ್ಲಿ ದಿನವಿಡೀ ವಿವಿಧ ಕ್ಷೇತ್ರಗಳ ಗಣ್ಯರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಶುಭಾಶಯ ಸಲ್ಲಿಸಿದರು.

--------------

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮನುಷ್ಯನ ಅಸ್ತಿತ್ವವೇ ಪ್ರಕೃತಿ ಮೇಲಿದೆ
ಡಾ.ಮಹಾಂತ ಶ್ರೀಗಳಿಂದ ಸಮಾಜದಲ್ಲಿ ದೊಡ್ಡ ಪರಿವರ್ತನೆ